ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ
ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಳೆಯಿಂದಾಗಿ ಕೈ ಮೀರಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ರೈತರಿಗೆ ಹಾಗೂ ಸರ್ಕಾರಕ್ಕೆ ಸಂತೋಷ ತಂದಿದೆ. ಹಾವೇರಿಯಲ್ಲಿ 87% ಬಿತ್ತನೆಯಾಗಿದೆ ಎಂದರು.
ಸೋಮವಾರ ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು. ಸಚಿವ ಕೃಷ್ಣ ಬೈರೇಗೌಡರು ನಿನ್ನೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದರು.
ಎಲ್ಲೆಡೆ ಮಳೆಯಾಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಟ್ಯಾಂಕರ್ ನೀರಿನ ಸರಬರಾಜು ಮಾಡಲಾಗುತ್ತಿತ್ತು. ಆದರೆ ಈಗ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿದೆ ಎಂದು ಹೇಳಿದರು.
ಶಾಸಕರು ಸಚಿವರ ಮೇಲೆ ದೂರು ನೀಡಿ ಮುಖ್ಯ ಮಂತ್ರಿಗಳಿಗೆ ಬರೆದಿದ್ದಾರೆ ಎನ್ನಲಾದ ಪತ್ರವನ್ನು ಶಾಸಕ ಬಿ.ಆರ್.ಪಾಟೀಲ್ ಅವರೇ ನಕಲಿ ಪತ್ರ ಎಂದು ಹೇಳಿದ್ದಾರೆ. ಆದರೂ ಪತ್ರಿಕೆಗಳಲ್ಲಿ ಪ್ರಚಾರ ಮಾಡಲಾಗಿದೆ. ಶಾಸಕಾಂಗ ಪಕ್ಷದ ಸಭೆ ಕರೆಯಿರಿ ಎಂದು ಬರೆದಿದ್ದಾರೆ. ಇಂಥ ಮಂತ್ರಿ ಎಂದು ಹೆಸರಿಸಿಲ್ಲ ಎಂದರು.



