ಸಚಿನ್ ಪಾಂಚಾಳ ಕುಟುಂಬದ ಸದಸ್ಯರಿಗೆ 10 ಲಕ್ಷ ರೂ. ಪರಿಹಾರ: ಈಶ್ವರ ಬಿ ಖಂಡ್ರೆ

1 year ago

ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ಸಿಐಡಿ ತನಿಖೆಗೆ ಮುಖ್ಯಮಂತ್ರಿಗಳಿಗೆ ಮನವಿ ಮಾಡುವುದಾಗಿ ಹಾಗೂ ಕುಟುಂಬದ ಸದಸ್ಯರಿಗೆ 10 ಲಕ್ಷ ರೂ. ಪರಿಹಾರ ಕೊಡಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಭಾಲ್ಕಿ ತಾಲೂಕು ಕಟ್ಟಿತೂಗಾಂವದಲ್ಲಿರುವ ಸಚಿನ್ ಪಾಂಚಾಳ ನಿವಾಸಕ್ಕಿಂದು ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರ ಹಾಗೂ ಖಾಸಗಿ ನೆರವಿನಿಂದ ಒಟ್ಟು 10 ಲಕ್ಷ ಪರಿಹಾರ ಕೊಡಿಸುವ ಘೋಷಣೆ ಮಾಡಿದರು. ಈ ನೋವಿನ ಸಂದರ್ಭದಲ್ಲಿ ತಾವೂ ಹಾಗೂ ಸರ್ಕಾರ, ಸಚಿನ್ ಕುಟುಂಬದ ಜೊತೆ ನಿಲ್ಲುವುದಾಗಿ ತಿಳಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಜೀವವೂ ಅಮೂಲ್ಯ, ಸಚಿನ್ ಪಾಂಚಾಳ ಸಾವು ತೀವ್ರ ನೋವು ತಂದಿದೆ. ಈ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಎಂದರು.

ತಾವು ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹೋಗಿದ್ದಾಗ, ಗುರುವಾರ ರಾತ್ರಿ ವಿಷಯ ತಿಳಿಯಿತು. ಕೂಡಲೇ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದ್ದೇನೆ. ನಿರ್ಲಕ್ಷ್ಯ ವಹಿಸಿದ ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ. ಹಿರಿಯ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಯುತ್ತಿದ್ದು, ಕರ್ತವ್ಯಲೋಪ ಕಂಡುಬಂದರೆ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದರು.

Leave a Reply