ಮಂಗಳೂರು: ಗಡಿ ಜಿಲ್ಲೆ, ಬೀದರ್ ನಲ್ಲಿ ನಡೆದ ಎಟಿಎಂ ದರೋಡೆ ಪ್ರಕರಣ ಬೆಚ್ಚಿ ಬೀಳಿಸಿರುವ ಬೆನ್ನಲ್ಲೇ ಮಂಗಳೂರು ಹೊರವಲಯದ ಉಳ್ಳಾಳ ಸಮೀಪ ಬ್ಯಾಂಕ್ ದರೋಡೆ ನಡೆದಿದೆ. ಈ ಪ್ರಕರಣ ಜನಸಾಮಾನ್ಯರನ್ನು ಬೆಚ್ಚಿ ಬೀಳಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಉಳ್ಳಾಲದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ (ಕೋಟೆಕಾರು ಬ್ಯಾಂಕ್) ಮಧ್ಯಾಹ್ನ 11.30ರಿಂದ 12.30ರ ನಡುವಿನ ಅವಧಿಯಲ್ಲಿ ಐದು ಮಂದಿ ಮುಸುಕುಧಾರಿಗಳು ಬ್ಯಾಂಕ್ ಸಿಬ್ಬಂದಿಗೆ ಬಂದೂಕು ತೋರಿಸಿ ಚಿನ್ನಾಭರಣ, ನಗದು ಲೂಟಿ ಮಾಡಿದ್ದಾರೆ.
ದರೋಡೆಕೋರರು ಕೈಯಲ್ಲಿ ಬಂದೂಕು, ತಲವಾರು, ಚಾಕು ಹಿಡಿದಿದ್ದರು. ಈ ವೇಳೆ ಬ್ಯಾಂಕ್ ನಲ್ಲಿ ನಾಲ್ಕೈದು ಸಿಬ್ಬಂದಿ ಕೆಲಸ ಮಾಡುತ್ತಿದ್ದರು. ಸಿಬ್ಬಂದಿಗೆ ಬಂದೂಕು ತೋರಿಸಿ ಲಾಕರ್ ಬಾಗಿಲು ತೆಗೆಸಿದ ದರೋಡೆಕೋರರು ಚಿನ್ನ, ನಗದನ್ನು ಚೀಲದಲ್ಲಿ ತುಂಬಿಸಿಕೊಂಡು ಹೋಗಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಕಳವಾದ ಚಿನ್ನಾಭರಣ, ನಗದು ಅಂದಾಜು ₹ 10-12 ಕೋಟಿ ಇರಬಹುದು ಎಂದು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರವಾಲ್ ತಿಳಿಸಿದ್ದಾರೆ.
ದರೋಡೆಕೋರರು ಹಿಂದಿಯಲ್ಲಿ ಮಾತನಾಡುತ್ತಿದ್ದರು ಎಂದು ಬ್ಯಾಂಕ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ದರೋಡೆಕೋರರ ಪತ್ತೆಗೆ ತಂಡಗಳನ್ನು ರಚಿಸಲಾಗಿದೆ ಎಂದಿದ್ದಾರೆ.
ಬ್ಯಾಂಕ್ ನ ಕೆಳಗಿನ ಮಹಡಿಯಲ್ಲಿರುವ ಬೇಕರಿಯಲ್ಲಿದ್ದ ಕೆಲ ವಿದ್ಯಾರ್ಥಿಗಳು ಸಿಬ್ಬಂದಿ ಕೂಗಿಕೊಳ್ಳುವುದನ್ನು ಕೇಳಿ ಅತ್ತ ಓಡಿದಾಗ, ದರೋಡೆಕೋರರು ಅವರನ್ನು ಬೆದರಿಸಿದ್ದಾರೆ. ವಿದ್ಯಾರ್ಥಿಗಳ ಬಳಿ ಅವರು ಕನ್ನಡದಲ್ಲಿ ಮಾತನಾಡಿದ್ದರೆ, ಬ್ಯಾಂಕ್ ಸಿಬ್ಬಂದಿ ಬಳಿ ಹಿಂದಿಯಲ್ಲಿ ಮಾತನಾಡಿದ್ದಾರೆ ಎಂದು ಬ್ಯಾಂಕ್ ಮೂಲಗಳು ತಿಳಿಸಿವೆ.




