ಜೆಡಿಎಸ್ ಮತ್ತು ಬಿಜೆಪಿಯ 13 ರಿಂದ 14 ಶಾಸಕರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಲಿದ್ದಾರೆ: ಜಮೀರ್ ಅಹ್ಮದ್ ಖಾನ್

2 years ago

ಬೆಂಗಳೂರು: ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಯಾವುದೇ ಸಮಯದಲ್ಲಿ ಜೆಡಿಎಸ್ ಮತ್ತು ಬಿಜೆಪಿಯ 13 ರಿಂದ 14 ಮಂದಿ ಶಾಸಕರು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಲಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಶಿವಕುಮಾರ್ ಅವರು ಪಕ್ಕಾ ಕಾಂಗ್ರೆಸ್ ಮನುಷ್ಯ. ಅವರ ರಕ್ತದಲ್ಲಿಯೇ ಕಾಂಗ್ರೆಸ್ ಇದ್ದು ಯಾವುದೇ ಕಾರಣಕ್ಕೆ ಅವರು ಬಿಡುವುದಿಲ್ಲ ಎಂದರು.

ಕಾಂಗ್ರೆಸಿನಲ್ಲಿ ಪಕ್ಷ ಬಿಡುವ ಯಾವುದೇ ನಾಯಕರು ಇಲ್ಲ. ಇದರ ಬದಲಾಗಿ ಜೆಡಿಎಸ್ ಮತ್ತು ಬಿಜೆಪಿಯಲ್ಲಿ ಹಲವು ನಾಯಕರು ಪಕ್ಷ ತೊರೆಯಲು ಸಜ್ಜಾ ಗಿದ್ದಾರೆ. ಇದರ ಮೊದಲ ಹಂತವಾಗಿ 13 ರಿಂದ 14 ಶಾಸಕರು ಸಾಧ್ಯದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂದರು.

ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಆ ಪಕ್ಷದ ನಾಯಕರು ಕನಸು ಕಾಣುತ್ತಿದ್ದಾರೆ. ಇನ್ನು 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ಸದ್ಯ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿ ಡಿ ಕೆ ಶಿವಕುಮಾರ್ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಯಾವುದೇ ಗೊಂದಲ ಇಲ್ಲ. ಈ ಕುರಿತಂತೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿದ್ದೇವೆ ಎಂದರು.

Leave a Reply