ವಿಜಯಪುರ ನಗರದಲ್ಲಿ 141 ಎಕರೆ ವಿಸ್ತೀರ್ಣದಲ್ಲಿ ವೈನ್ ಪಾರ್ಕ್: ಮುನಿರತ್ನ

3 years ago

ಬೆಂಗಳೂರು: ವಿಜಯಪುರ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿಜಯಪುರ ನಗರದಲ್ಲಿ 141 ಎಕರೆ ವಿಸ್ತೀರ್ಣದಲ್ಲಿ ವೈನ್ ಪಾರ್ಕ್ ನಿರ್ಮಿಸಲಾಗುವುದು ಎಂದು ತೋಟಗಾರಿಕಾ ಸಚಿವ ಮುನಿರತ್ನ ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ಪ್ರಶ್ನೋತ್ತರ ಕಲಾಪದಲ್ಲಿ ದೇವಾನಂದ ಚವ್ಹಾಣ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ವಿಜಯಪುರ, ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲಾಗಳಲ್ಲಿ ವ್ಯಾಪಕವಾಗಿ ದ್ರಾಕ್ಷಿ ಬೆಳೆಯಲಾಗುತ್ತಿದೆ. ಅಂದಾಜು 3ರಿಂದ 4 ಸಾವಿರ ಕೋಟಿ ರೂ. ವಹಿವಾಟು ನಡೆಯುತ್ತದೆ. ಇವೆಲ್ಲವೂ ಮಹಾರಾಷ್ಟ್ರಕ್ಕೆ ಹೋಗುವುದರಿಂದ ಆದಾಯವೂ ಆ ರಾಜ್ಯದ ಪಾಲಾಗುತ್ತಿದೆ ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯಕ್ಕೆ ವರಮಾನ ಹೆಚ್ಚಿಸುವುದು ಹಾಗೂ ಸ್ಥಳೀಯರಿಗೆ ಪ್ರೋತ್ಸಾಹ ನೀಡಲು ವಿಜಯಪುರದಲ್ಲಿ ವೈನ್ ಪಾರ್ಕ್ ನಿರ್ಮಾಣ ಮಾಡುವುದಾಗಿ ತಿಳಿಸಿದರು.

ವಿದೇಶಿ ಬ್ರಾಂಡ್ ಮಾದರಿ ವೈನ್ ಉತ್ಪಾದಿಸಬೇಕು ಎಂಬುದು ಬಹುತೇಕರ ಬೇಡಿಕೆಯಾಗಿದ್ದು, ಸರ್ಕಾರ ಇದನ್ನು ಪರಿಗಣಿಸಲಿದೆ. ಅದಕ್ಕೂ ಮುನ್ನ ಈ ಭಾಗದಲ್ಲಿ ದ್ರಾಕ್ಷಿ ಹಣ್ಣು ಹಾಳಾಗದಂತೆ ಸಂಗ್ರಹಿಸಿಡಲು ಶೀಥಲೀಕರಣ ಕೇಂದ್ರವನ್ನು ಪ್ರಾರಂಭಿಸಲಾಗುವುದು. ಪ್ರಸಕ್ತ ಬಜೆಟ್ನಲ್ಲಿ ಮುಖ್ಯಮಂತ್ರಿ 100 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ನಬಾರ್ಡ್ನಿಂದ 41 ಕೋಟಿ ರೂ. ಆರ್ಥಿಕ ನೆರವಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಮಂಜೂರಾತಿಯೂ ಸಿಕ್ಕಿದೆ ಎಂದರು.

ವಿಸ್ತೃತ ಯೋಜನಾ ವರದಿ ತಯಾರಿಸಿ ಶೀಘ್ರದಲ್ಲೇ ಶಿಥಲೀಕರಣ ಕೇಂದ್ರ ಪ್ರಾರಂಭಿಸಲಾಗುವುದು. 10 ಸಾವಿರ ಮೆಗಾ ವ್ಯಾಟ್ ಸಾಮರ್ಥ್ಯ ಇರುವುದರಿಂದ ಸ್ಥಳೀಯರು ದ್ರಾಕ್ಷಿ ಹಣ್ಣನ್ನು ಹೊರ ರಾಜ್ಯಗಳಿಗೆ ಕೊಂಡೊಯ್ಯುವ ಅಗತ್ಯವಿರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Leave a Reply