ಕೆರೆ ಅಭಿವೃದ್ಧಿಗಾಗಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿಂದ ಸ್ವಯಂ ಪ್ರೇರಿತ ದೂರು ದಾಖಲು
ಧಾರವಾಡ: ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರು 1911ರಲ್ಲಿ ಕಟ್ಟಿಸಿರುವ ಧಾರವಾಡ ಕೆಲಗೇರಿ ಕೆರೆ ಶತಮಾನ ಕಂಡಿದೆ. ಚರಂಡಿ ನೀರು, ಅಂತರಗಂಗೆ, ಕಳೆ, ಕಸ ತೆಗೆದು ಸ್ವಚ್ಛಗೊಳಿಸಿ ಕೆರೆಯನ್ನು ಶಾಪಮುಕ್ತಗೊಳಿಸಲು ಮುಂದಿನ 20 ದಿನಗಳ ಗಡುವು ನೀಡುತ್ತೇನೆ. ಈ ಕುರಿತು ಆಗಿರುವ ಕರ್ತವ್ಯಲೋಪ ಗುರುತಿಸಿ, ಸೂಕ್ತ ತನಿಖೆ ಕೈಗೊಳ್ಳಲು ಲೋಕಾಯುಕ್ತದಿಂದ ಸ್ವಯಂ ದೂರು ದಾಖಲಿಸಲಾಗುತ್ತಿದೆ ಎಂದು ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ತಿಳಿಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಧಾರವಾಡ ನಗರದ ಕೆಲಗೇರಿ ಕೆರೆಗೆ ಭೇಟಿ ನೀಡಿ, ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಜೊತೆಗೆ ಸಾರ್ವಜನಿಕರೊಂದಿಗೆ ಸ್ವತಃ ಎರಡು ಕೀ.ಮಿ ನಡೆಯುವ ಮೂಲಕ ಕೆರೆಯ ಅವ್ಯವಸ್ಥೆ ಪರಿಶೀಲಿಸಿದರು.
ಕೆರೆ ನಿರ್ವಹಣೆ ಹಾಗೂ ಕೆರೆ ಮಾಲಿಕತ್ವ ಸೇರಿದಂತೆ ಎಲ್ಲರನ್ನು ಈ ಪ್ರಕರಣದಲ್ಲಿ ಪಾರ್ಟಿ ಮಾಡಲಾಗುತ್ತದೆ. ಕೆರೆಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಮತ್ತು ತಾಂತ್ರಿಕ ವರದಿಯನ್ನು ಸಲ್ಲಿಸಬೇಕು. ಮಹಾನಗರಪಾಲಿಕೆಯವರು ಈಗಾಗಲೇ ರೂ. 150 ಕೋಟಿ ಮೊತ್ತದ ಪ್ರಸ್ತಾವನೆ ಸಿದ್ದಗೊಳಿಸಿರುವದಾಗಿ ತಿಳಿಸಿದ್ದಾರೆ. ಇದನ್ನು ಸಹ ಪಡೆದುಕೊಂಡು ನೇರವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ, ಕೆರೆ ಸಮಸ್ಯೆಯನ್ನು ಮನವರಿಕೆ ಮಾಡಿಕೊಡುತ್ತೇನೆ ಎಂದರು.
ಕೆಲಗೇರಿ ಕೆರೆ ನಿರ್ವಹಣೆ ಮತ್ತು ಮಾಲಿಕತ್ವದ ವಿಚಾರದಲ್ಲಿ ಕೃಷಿ ವಿಶ್ವವಿದ್ಯಾಲಯ ಹಾಗೂ ಮಹಾನಗರಪಾಲಿಕೆಗಳು ಪರಸ್ಪರ ಬೊಟ್ಟು ತೋರಿಸಿ, ಕೆರೆ ಸ್ವಚ್ಛತೆ, ಅಭಿವೃದ್ಧಿಯನ್ನು ನಿರ್ಲಕ್ಷ್ಯ ಮಾಡಿದ್ದಾರೆ. ಕೆರೆಯಲ್ಲಿ ಸಾಕಷ್ಟು ಅಂತರಗಂಗೆ ಬೆಳೆದಿದೆ. ಕೆರೆ ವಾಕಿಂಗ್ ಪಾಥ್ದಲ್ಲಿ ಗಿಡಗಂಟಿ ಬೆಳೆದಿದೆ. ಚರಂಡಿ ನೀರು ಕೆರೆ ಸೇರುತ್ತಿದೆ. ಕೆರೆಯ ಸುತ್ತಲಿನ ಜನ ಮನೆಯ ದಿನಬಳಕೆ ತ್ಯಾಜ್ಯ, ಕಸಕಡ್ಡಿ ತಂದು ಕೆರೆಯಲ್ಲಿ ಹಾಕುತ್ತಿದ್ದಾರೆ. ಇದರ ಬಗ್ಗೆ ಯಾರು ಗಮನ ಹರಿಸಿಲ್ಲ ಎಂದು ಅಸಮಾದಾನ ವ್ಯಕ್ತಪಡಿಸಿದರು.
ಹಿರಿಯ ನಾಗರಿಕರ ಮತ್ತು ಸಾರ್ವಜನಿಕರ ದೂರುಗಳ ಹಿನ್ನಲೆಯಲ್ಲಿ ಕೆರೆ ನಿರ್ವಹಣೆ ಮತ್ತು ಸಾರ್ವಜನಿಕರ ಆರೋಗ್ಯ, ಹಿತಾಸಕ್ತಿ ಕುರಿತು ನಿರ್ಲಕ್ಷ್ಯವಹಿಸಿ, ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದಾರೆ. ಕೆಲಗೇರಿ ಕೆರೆ ನಿರ್ವಹಣೆ ಸಂಪೂರ್ಣ ನಿರ್ಲಕ್ಷ್ಯವಹಿಸಲಾಗಿದೆ. ಈ ಕುರಿತು ತನಿಖೆ ಕೈಗೊಳ್ಳಲು ಸೋ ಮೋಟೊ ಕೇಸ್ ದಾಖಲಿಸಲಾಗುತ್ತಿದೆ ಎಂದರು.
ಕಾನೂನು, ಆರೋಗ್ಯ ಅರಿವು ಮೂಡಿಸಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೆಲಗೇರಿ ಕೆರೆ ಸುತ್ತಲಿನ ಜನರಲ್ಲಿ ಸ್ವಚ್ಛತೆ, ಆರೋಗ್ಯದ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಮಹಾನಗರ ಪಾಲಿಕೆಯಿಂದ ಕೆರೆಯ ಸುತ್ತ ತಂತಿ ಬೇಲಿ ಅಳವಡಿಸಬೇಕು. ಸಾಧ್ಯವಾದಲ್ಲಿ ಸಿಸಿ ಟಿವಿ ಅಳವಡಿಸಬೇಕೆಂದು ಸೂಚಿಸಿದರು.
ಪೊಲೀಸ್ ಬೀಟ್ ಹೆಚ್ಚಿಸಿ: ಕೆರೆಯ ಸುತ್ತ ಕುಡುಕರ, ಪುಂಡರ ಕಾಟ ಹೆಚ್ಚಾಗಿದೆ. ರಾತ್ರಿ ಕೆರೆಯ ದಂಡೆಯ ಪುಟ್ ಪಾಥ್ ಮೇಲೆ ಏಣ್ಣಿ ಪಾರ್ಟಿ ಮಾಡುತ್ತಾರೆ. ಕೇಳಿದರೆ ಹಲ್ಲೆಗೆ ಮುಂದಾಗುತ್ತಾರೆ. ವೃದ್ಧರು, ಹೆಣ್ಣುಮಕ್ಕಳು, ಸಣ್ಣ ಮಕ್ಕಳು ಓಡಾಡುವುದೇ ಕಷ್ಟವಾಗಿದೆ. ಇದಕ್ಕೆ ಸೂಕ್ತ ಪೊಲೀಸ್ ಬಂದೊಬಸ್ತ್ ನೀಡಬೇಕು ಎಂದು ಸಾರ್ವಜನಿಕರು ಮನವಿ ಸಲ್ಲಿಸಿದರು.
ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಉಪ ಲೋಕಾಯುಕ್ತರು ಪೊಲೀಸ್ ಬಿಟ್ ಹೆಚ್ಚಿಸುವಂತೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮಾಡುವ, ದುರ್ವತನೆ ತೋರುವ ಹಾಗೂ ಸಾರ್ವಜನಿಕ ಶಾಂತಿ ಭಂಗ ಮಾಡುವವರ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿ, ಕಠಿಣ ಕ್ರಮ ಜರುಗಿಸುವಂತೆ ಸೂಚಿಸಿದರು.
ಮುಂದಿನ 20 ದಿನದಲ್ಲಿ ಕೆರೆ ಸ್ವಚ್ಛಗೊಳಿಸಿ, ಸುಂದರಗೊಳಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು. 20 ದಿನಗಳ ನಂತರ ನಾನೇ ಕೆರೆ ನೋಡಲು ಬರುತ್ತೇನೆ ಎಂದು ಹೇಳಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಇಲಾಖೆಗಳ ಸಮನ್ವಯ ಸಾಧಿಸಿ, ಕೆರೆ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಮಹಾನಗರಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ ಮಾತನಾಡಿ, ನಾಳೆಯಿಂದ ಕೆರೆ ಸ್ವಚ್ಛತಾ ಕಾರ್ಯ ಆರಂಭಿಸುವದಾಗಿ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಗೋಪಾಲ ಬ್ಯಾಕೋಡ, ಉಪ ಪೊಲೀಸ್ ಆಯುಕ್ತ ಮಾನಿಂಗ ನಂದಗಾವಿ, ಕರ್ನಾಟಕ ಲೋಕಾಯುಕ್ತ ಬೆಂಗಳೂರು ಕಚೇರಿಯಲ್ಲಿನ ವಿವರಣಾ ವಿಭಾಗದ ಅಪರ ನಿಬಂಧಕರಾದ ಪಿ.ಶ್ರೀನಿವಾಸ, ನರಸಿಂಹಸಾ ಎಂ.ವಿ., ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ, ಸಿವಿಲ್ ನ್ಯಾಯಾಧೀಶ ಕಿರಣ ಪಿ.ಎಂ.ಪಾಟೀಲ್, ಧಾರವಾಡ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಹನುಮಂತರಾಯ ಸೇರಿದಂತೆ ವಿವಿಧ ಅಧಿಕಾರಿಗಳು ಹಾಜರಿದ್ದರು.
ಕೆಲಗೇರಿ ಕಾಯಕಲ್ಪ ವಾಯುವಿಹಾರಿಗಳ ಹಿರಿಯ ನಾಗರಿಕರ ಸಂಘದ ಎಂ.ಟಿ.ದಳವಾಯಿ, ಆನಂದ ಅಮರಶಟ್ಟಿ, ಪಿ.ಕೆ.ನಿರಲಕಟ್ಟಿ ಸೇರಿದಂತೆ ಅನೇಕ ಸಾರ್ವಜನಿಕರು, ಕೆರೆ ನಿರ್ವಹಣೆಯ ನಿರ್ಲಕ್ಷ್ಯತೆ ಕುರಿತು ಉಪಲೋಕಾಯುಕ್ತರಿಗೆ ದೂರು ನೀಡಿದರು.




