ನಾಮಫಲಕಗಳಲ್ಲಿ ಕನ್ನಡ ಭಾಷಾ ಬಳಕೆ ಶೇ.60 ರಷ್ಟು  ಕಡ್ಡಾಯ: ಶಿವರಾಜ ಎಸ್.ತಂಗಡಗಿ

2 years ago

ಬಳ್ಳಾರಿ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024 ಕ್ಕೆ ಫೆ.25 ರಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು ಈ ಮೂಲಕ ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60 ರಷ್ಟು ಪ್ರದರ್ಶಿಸುವಂತೆ ಕ್ರಮ ವಹಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ ಭಾಷಾ ಸಮಗ್ರ ಅಭಿವೃದ್ದಿ (ತಿದ್ದುಪಡಿ) ವಿಧೇಯಕ ಕುರಿತು ವಿಕಾಸಸೌಧದಿಂದ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿ ಮಾತನಾಡಿದರು.

ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆ. ಆಡಳಿತ ಭಾಷೆ. ಇದರಲ್ಲಿ ಯಾವುದೇ ಆಕ್ಷೇಪ ಇಲ್ಲ. ರಾಜ್ಯ ಸರ್ಕಾರದ ಇಲಾಖೆಗಳು, ಉದ್ಯಮಗಳು, ಸ್ವಾಯತ್ತ ಸಂಸ್ಥೆಗಳು, ಸಹಕಾರ ಮತ್ತು ಸಾರ್ವಜನಿಕ ಉದ್ಯಮಗಳು, ಬ್ಯಾಂಕುಗಳು, ಇತರ ಹಣಕಾಸು ಸಂಸ್ಥೆಗಳು, ಖಾಸಗಿ ಕೈಗಾರಿಕೆಗಳು ಮತ್ತು ವಿಶ್ವವಿದ್ಯಾಲಯಗಳ ಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸುವಂತೆ ಸೂಚಿಸಬೇಕು ಎಂದು  ತಿಳಿಸಿದರು.

ಸಮಗ್ರ ಅನುಷ್ಠಾನಕ್ಕಾಗಿ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮಿತಿ ಒಳಗೊಂಡಿದ್ದು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸದಸ್ಯರಾಗಿ ಜಿಪಂ ಸಿಇಒ, ಮಹಾನಗರ ಪಾಲಿಕೆ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಇದ್ದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಸಂಚಾಲಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದು ತಿಳಿಸಿದರು.

ಎಲ್ಲಾ ಜಿಲ್ಲೆಗಳಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳ ಒಟ್ಟಾರೆ ವಿಸ್ತೀರ್ಣದಲ್ಲಿ ಕನ್ನಡ ಭಾಷೆಯನ್ನು ಮೇಲ್ಭಾಗದಲ್ಲಿ ಶೇ.60 ರಷ್ಟು ಮತ್ತು ಶೇ.40 ರಷ್ಟು ಇತರ ಭಾಷೆಯನ್ನು ಕೆಳಭಾಗದಲ್ಲಿ ಬಳಸುವಂತೆ ಸೂಚಿಸಬೇಕು. ಇಲ್ಲದಿದ್ದಲ್ಲಿ ಪರವಾನಿಗೆ ರದ್ದುಗೊಳಿಸಬೇಕು ಹಾಗೂ ದಂಡವೂ ವಿಧಿಸಬೇಕು ಎಂದು ವಿವರಿಸಿದರು.

ಗಡಿಭಾಗದ ಜಿಲ್ಲೆಗಳಲ್ಲಿ ಹೆಚ್ಚು ಕನ್ನಡ ಅನುಷ್ಠಾನಕ್ಕಾಗಿ ಆದ್ಯತೆ ನೀಡಬೇಕು. ಕೂಡಲೇ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ, ಕೇಂದ್ರ ಕಚೇರಿಗೆ ವರದಿ ನೀಡಬೇಕು. ಪ್ರಥಮವಾಗಿ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಚೇರಿ, ಕಟ್ಟಡ, ಮನೆ ಹಾಗೂ ಶಾಲಾ – ಕಾಲೇಜುಗಳಿಂದ ಆರಂಭವಾಗಲಿ ಎಂದು ಹೇಳಿದ ಅವರು, ಯಾವುದೇ ಸಂಘಟನೆಗಳ ಹೋರಾಟಕ್ಕೆ ಆಸ್ಪದ ನೀಡಬಾರದು ಎಂದು ಮನವರಿಕೆ ಮಾಡಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಎನ್.ಅಜಯ್ ನಾಗಭೂಷಣ್ ಅವರು ಮಾತನಾಡಿ, ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶಗಳನ್ನು ಒದಗಿಸುವುದಕ್ಕಾಗಿ ಉಪಬಂಧ  ಕಲ್ಪಿಸುವ ಒಂದು ಅಧಿನಿಯಮವಾಗಿದೆ ಎಂದರು.

ಕನ್ನಡ ಭಾಷೆಯ ಸಮಗ್ರ ಅಭಿವ್ಯದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಮತ್ತು ಕಲ್ಯಾಣ ಕ್ರಮಗಳನ್ನು ಕಲ್ಪಿಸುವುದಕ್ಕಾಗಿ ವಿಧೇಯಕವು ಅಂಗೀಕಾರವಾಗಿದ್ದು ಸಾರ್ವಜನಿಕ ವಲಯದಲ್ಲಿ ಕನ್ನಡ ಭಾಷೆಯ ಬಗ್ಗೆ ಉತ್ತಮ ವಾತಾವರಣ ಸೃಷ್ಟಿಸಬೇಕು ಎಂದು ಸೂಚಿಸಿದರು.

ಈ ವೇಳೆ ವಿಡಿಯೋ ಸಂವಾದದಲ್ಲಿ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ನಿರ್ದೇಶಕರಾದ ಡಾ.ಕೆ.ಧರಣಿದೇವಿ, ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷ ಅಧಿಕಾರಿ ಪಿ.ಎಸ್.ಮಂಜುನಾಥ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ, ಡಿಯುಡಿಸಿ ಅಧಿಕಾರಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.

Leave a Reply