75ನೇ ಗಣರಾಜ್ಯೋತ್ಸವ ಅಚ್ಚುಕಟ್ಟಾಗಿ ಆಚರಣೆಗೆ ಕ್ರಮವಹಿಸಲು ಸೂಚನೆ

2 years ago

ಬಳ್ಳಾರಿ: ಜಿಲ್ಲಾಡಳಿತದಿಂದ ಜ.26ರಂದು ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ವಿಮ್ಸ್ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದು, ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಆಚರಣೆಗೆ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗಣರಾಜ್ಯೋತ್ಸವ ಕಾರ್ಯಕ್ರಮ ಶಿಷ್ಟಾಚಾರದಂತೆ ನಡೆಯಲಿದ್ದು, ಜ.26 ರ ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರಧ್ವಜಾರೋಹಣ ನೆರವೇರಿಸುವರು ಎಂದರು.

ಇದಕ್ಕೂ ಮುನ್ನ ಬೆಳಿಗ್ಗೆ 08.15ಕ್ಕೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿ ಬೃಹತ್ ಧ್ವಜಾರೋಹಣ ನೆರವೇರಿಸಿ, 08.30ಕ್ಕೆ ವಿಮ್ಸ್ ಬಳಿಯ ಮಹಾತ್ಮ ಗಾಂಧೀಜಿ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸುವರು. ತದನಂತರ 08.45 ಕ್ಕೆ ಪಥ ಸಂಚಲನ ವೀಕ್ಷಣೆ ಮಾಡುವರು. ಬಳಿಕ ಧ್ವಜಾರೋಹಣ ನೆರವೇರಿಸಿ, ಸಂದೇಶ ನೀಡುವರು ಎಂದು ಮಾಹಿತಿ ನೀಡಿದರು.

ಪೊಲೀಸ್, ಎನ್.ಸಿ.ಸಿ, ಸ್ಕೌಟ್ಸ್ ಅಂಡ್ ಗೈಡ್ ಸೇರಿದಂತೆ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಲಿದ್ದು, ಪೊಲೀಸ್ ಇಲಾಖೆಯಿಂದ ಪಥಸಂಚಲನಕ್ಕೆ ಸಿದ್ದತೆ ಮಾಡಿಕೊಳ್ಳಬೇಕು ಎಂದರು.

ವಿಮ್ಸ್ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯುವುದರಿಂದ ಅಗತ್ಯವಿರುವ ಶಾಮಿಯಾನ ಸೇರಿದಂತೆ ವೇದಿಕೆ, ಆಸನದ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಬೇಕು ಮತ್ತು ಮೈದಾನದಲ್ಲಿ ಸ್ವಚ್ಚತೆಯನ್ನು ಕಾಪಾಡುವ ಮೂಲಕ ಮೈದಾನದಲ್ಲಿ ನೀರನ್ನು ಸಿಂಪರಣೆ ಮಾಡಲು ಮಹಾನಗರ ಪಾಲಿಕೆಯಿಂದ ಕ್ರಮ ವಹಿಸಬೇಕು. ಶಾಲಾ ಕಾಲೇಜು ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು ಎಂದರು.

ಶಾಲಾ ಮಕ್ಕಳಿಂದ ದೇಶಭಕ್ತಿ ಮೂಡಿಸುವ ಆಕರ್ಷಕವಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಏರ್ಪಡಿಸುವಂತೆ ಮತ್ತು ಇದಕ್ಕೆ ಬೇಕಾದ ತಾಲೀಮು ಮುಂಚಿತವಾಗಿ ಮಾಡಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು.

ಗಣರಾಜ್ಯೋತ್ಸವ ಹಿನ್ನಲೆಯಲ್ಲಿ ನಗರದ ವಿವಿಧ ವೃತ್ತಗಳನ್ನು ಸ್ವಚ್ಛಗೊಳಿಸಬೇಕು. ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಮಾಡಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವೇದಿಕೆ ಕಾರ್ಯಕ್ರಮದಲ್ಲಿ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳಲು ಜೆಸ್ಕಾಂ ಇಂಜಿನಿಯರ್ ಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್.ಎನ್, ಎಎಸ್ಪಿ ಕೆ.ಪಿ.ರವಿಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಇತರರು ಹಾಜರಿದ್ದರು.

Leave a Reply