ಬೆಂಗಳೂರು: ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾಗುವ ಕೆಲವೇ ಗಂಟೆಗಳ ಮುನ್ನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೆಲವು ಹಗರಣಗಳ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಲಾಗಿದೆ.
ಚುನಾವಣೆ ವೇಳಾಪಟ್ಟಿ ಪ್ರಕಟಣೆ ಹಿನ್ನೆಲೆಯಲ್ಲಿ ತಮ್ಮ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ 5 ಬೃಹತ್ ಹಗರಣಗಳನ್ನು ಸಿಐಡಿ ತನಿಖೆಗೆ ವಹಿಸಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿ ಹಾಗೂ ಕೃಷ್ಣ ಬೈರೇಗೌಡ ಕೃಷಿ ಮಂತ್ರಿಯಾಗಿದ್ದ ವೇಳೆ ಕೃಷಿ ಭಾಗ್ಯ ಯೋಜನೆ ಜಾರಿಗೊಳಿಸಲಾಗಿತ್ತು. ಇದರಡಿಯಲ್ಲಿ ರಾಜ್ಯದ ಹಲವೆಡೆ 2.15 ಲಕ್ಷಕ್ಕೂ ಹೆಚ್ಚು ಕೃಷಿ ಹೊಂಡಗಳನ್ನು ನಿಮಿಸಿರುವುದಾಗಿ ದಾಖಲೆ ಸೃಷ್ಟಿಸಿ 800 ಕೋಟಿ ರೂಪಾಯಿಗಳಿಗೂ ಹೆಚ್ಚು ಹಣ ವಂಚಿಸಿರುವ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ತನಿಖೆ ನಡೆಸಲು ಸೂಚಿಸಿದ್ದಾರೆ ಎಂದು ಗೊತ್ತಾಗಿದೆ
ಇಂದಿರಾ ಕ್ಯಾಂಟೀನ್ : ಇದರೊಂದಿಗೆ ಅಂದಿನ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಇಂದಿರಾ ಕ್ಯಾಂಟೀನ್ ಯೋಜನೆಯಲ್ಲಿ ಪ್ರತಿ ನಿತ್ಯ 6.58 ಲಕ್ಷ ಮಂದಿ ಉಪಹಾರ ಮತ್ತು ಊಟ ಮಾಡುತ್ತಿದ್ದಾರೆ ಎಂದು ನಂಬಲು ಅಸಾಧ್ಯವಾದ ದಾಖಲೆಗಳನ್ನು ಸೃಷ್ಟಿಸಿ ಪ್ರತೀ ತಿಂಗಳು 28 ಕೋಟಿ ರೂಪಾಯಿಗಳಂತೆ 21 ತಿಂಗಳ ಕಾಲ ನಿರಂತರವಾಗಿ ಸಬ್ಸಿಡಿ ಹಣವನ್ನು ದೋಚಿದ್ದಾರೆ ಎಂಬ ಆರೋಪ ಕುರಿತು ತನಿಖೆಗೆ ಸೂಚಿಸಿದ್ದಾರೆ ಎಂದು ಮೂಲಗಳಿಂದ ಗೊತ್ತಾಗಿದೆ.
ಟೆಂಡರ್ ಕರ್ಮಕಾಂಡ: ಪ್ರತಿಷ್ಟಿತ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ಟೆಂಡರ್ ನೀಡುವ ಪ್ರಕ್ರಿಯೆಯಲ್ಲಿ ತ್ರಿಪುರ ಮತ್ತು ಮಣಿಪುರ ರಾಜ್ಯಗಳ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸಹಿಗಳನ್ನು ನಕಲು ಮಾಡಿದ ಪ್ರಮಾಣ ಪತ್ರಗಳನ್ನು ನೀಡಿ 158 ಕೋಟಿ ರೂಪಾಯಿ ಮೊತ್ತದ ಟೆಂಡರ್ ಪಡೆಯಲಾಗಿದೆ. ವಿಶ್ವೇಶ್ವರಯ್ಯ ಜಲ ನಿಗಮದ ಮೂಲಕ ಈ ಅಕ್ರಮ ನಡೆದಿದೆ ಎನ್ನಲಾಗಿದ್ದು ಇದನ್ನು ತನಿಖೆಗೆ ಆದೇಶಿಸಿದ್ದಾರೆ.
ಅಕ್ರಮ ಮಳಿಗೆ: ಬೆಂಗಳೂರಿನ ಜಯನಗರ ವಾಣಿಜ್ಯ ಸಂಕೀರ್ಣದಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನೂ ಗಾಳಿಗೆ ತೂರಿ 312 ಅಧಿಕ ಮಳಿಗೆಗಳನ್ನು ನಿರ್ಮಿಸಿ, ಪ್ರತಿಯೊಂದು ಮಳಿಗೆ ಹಂಚಿಕೆದಾರರಿಂದ 30 ಲಕ್ಷಗಳಿಗೂ ಹೆಚ್ಚು ಹಣವನ್ನು ಪಡೆದು ಹಂಚಿಕೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು ಇದನ್ನು ತನಿಖೆ ನಡೆಸುವಂತೆ ಸೂಚಿಸಿರುವುದಾಗಿ ಗೊತ್ತಾಗಿದೆ.
ರೀಡೂ ಪ್ರಕರಣ: ಬೆಂಗಳೂರಿನ ಭೂಪಸಂದ್ರ ಗ್ರಾಮದ ಪ್ರತಿಷ್ಠಿತ ರಾಜಮಹಲ್ ವಿಲಾಸ್ ಬಡಾವಣೆ (ಆರ್.ಎಂ.ವಿ.) ಯಲ್ಲಿ ಕಾನೂನಿನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ 6.26 ಎಕರೆ ಜಾಗವನ್ನು ರಿಡೂ ಮಾಡುವ ಮೂಲಕ ನೂರು ಕೋಟಿ ರೂಪಾಯಿಗೂ ಅಧಿಕ ಮೊತ್ತದ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ತನಿಖೆ ನಡೆಸಲು ಸೂಚಿಸಿರುವುದಾಗಿ ಮತ್ತು ಈ ಹಗರಣಗಳ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಿಐಡಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.



