ಸಿದ್ದೇಶ್ವರ ಸ್ವಾಮಿಗಳು ಎಲ್ಲ ಜಾತಿ, ಜನಾಂಗ, ಧರ್ಮದ ಭಕ್ತರ ಮನದಲ್ಲಿ ದೇವರಾಗಿ ನೆಲೆಸಿದ್ದಾರೆ: ಈಶ್ವರ್ ಖಂಡ್ರೆ

3 years ago

ಬೆಂಗಳೂರು: ರಾಜಕೀಯ, ಅಧಿಕಾರಿಶಾಹಿಗಳ ಒಲೈಕೆಯಿಂದ ದೂರವಿದ್ದು, ಖಾವಿಯನ್ನೂ ಧರಿಸಿದೆ ಖಾದಿಧಾರಿಯಾಗಿ ನಡೆದಾಡುವ ದೇವರು ಎಂದೇ ಪೂಜಿಸಿ ಆರಾಧಿಸಲಾಗುತ್ತಿದ್ದ ಸಿದ್ದೇಶ್ವರ ಸ್ವಾಮಿಗಳು ಲಿಂಗೈಕ್ಯರಾಗಿ ಒಂದು ವರ್ಷವಾಗಿದೆ.

ಜನ ಮಾನಸದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಶ್ರೀಗಳು ಭೌತಿಕವಾಗಿ ನಮ್ಮೊಂದಿಗಿಲ್ಲದಿದ್ದರೂ ಅವರ ಪ್ರವಚನ, ಕೃತಿಗಳ ಮೂಲಕ ಇಂದಿಗೂ ಜೀವಂತವಾಗಿದ್ದು ಅನೇಕರಿಗೆ ಮಾರ್ಗದರ್ಶನ ಮಾಡುತ್ತಿದ್ದಾರೆ.

ಇಂತಹ ಅಪರೂಪದ ಸ್ವಾಮೀಜಿಗಳ ಪ್ರಥಮ ಪುಣ್ಯ ಸ್ಮರಣೆಯನ್ನು ತಮ್ಮ ಮನೆಯಲ್ಲಿ ಏರ್ಪಡಿಸಿ ಭಕ್ತಿ ಸಮರ್ಪಿಸುವ ಮೂಲಕ ಸಿದ್ದೇಶ್ವರ ಶ್ರೀಗಳು ತೋರಿದ ದಾರಿಯಲ್ಲಿ ನಡೆಯುವ ಸಂಕಲ್ಪ ಮಾಡಿದವರು ಅರಣ್ಯ ಸಚಿವ ಈಶ್ವರ ಖಂಡ್ರೆ.

ಇದೇ ವೇಳೆ ಪ್ರತಿಕ್ರಿಯೆ ನೀಡಿದ ಈಶ್ವರ್ ಖಂಡ್ರೆ, ಅತ್ಯಂತ ಸರಳವಾಗಿ ಜೀವನ ನಡೆಸಿದ ಲಿಂಗೈಕ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳು ಭೌತಿಕವಾಗಿ ನಮ್ಮೊಂದಿಗೆ ಇಲ್ಲದಿದ್ದರೂ ಎಲ್ಲ ಜಾತಿ, ಜನಾಂಗ, ಧರ್ಮದ ಭಕ್ತರ ಮನದಲ್ಲಿ ದೇವರಾಗಿ ನೆಲೆಸಿದ್ದಾರೆ ಎಂದರು.

ಸಿದ್ದೇಶ್ವರ ಸ್ವಾಮಿಗಳ ಪ್ರಥಮ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ತಮ್ಮ ಸರಳಾತಿ ಸರಳ ಜೀವನ ಮತ್ತು ಅರ್ಥಪೂರ್ಣ ಬೋಧನೆಗಳ ಮೂಲಕವೇ ಜನಮನಗೆದ್ದಿದ್ದ ಶ್ರೀಗಳ ಒಂದೊಂದು ಮಾತೂ ಮಾಣಿಕ್ಯ ಎಂದು ಬಣ್ಣಿಸಿದರು.

ರಾಜಕೀಯ, ಸಂಘ ಸಂಸ್ಥೆ ಮತ್ತು ಪ್ರಚಾರದಿಂದ ಅಂತರ ಕಾಯ್ದುಕೊಂಡಿದ್ದ ಅವರು, ಬಸವ ತತ್ವ ಅನುಯಾಯಿಗಳಾಗಿದ್ದರು, ಅವರು ಹುಟ್ಟಿದ ನಡೆದಾಡಿದ ಈ ನಾಡಿನಲ್ಲಿ ಹುಟ್ಟಿದ ನಾವೆಲ್ಲರೂ ಧನ್ಯರು, ಭಾಗ್ಯವಂತರು ಎಂದರು.

ಸಿದ್ದೇಶ್ವರ ಶ್ರೀಗಳು ತೋರಿದ ನಿಸ್ವಾರ್ಥ ಸೇವೆ, ಸರಳ ಬದುಕನ್ನು ನಮ್ಮ ಬದುಕಲ್ಲಿ ಪ್ರಾಮಾಣಿಕವಾಗಿ ಅಳವಡಿಸಿಕೊಂಡರೆ ಸುಂದರ ಸಮಾಜದ ನಿರ್ಮಾಣ ಮಾಡಬಹುದು ಎಂದರು.

ಈ ಸಂದರ್ಭದಲ್ಲಿ ಗೀತಾ ಈಶ್ವರ ಖಂಡ್ರೆ, ಡಾ. ಗುರು ಖಂಡ್ರೆ ಮತ್ತಿತರರು ಹಾಜರಿದ್ದರು.

Leave a Reply