ನಾಮಪತ್ರ ಸಲ್ಲಿಸಲು ಇಂದು ಕಡೆಯ ದಿನ

2 years ago

ಬೆಂಗಳೂರು: ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕಡೆಯ ದಿನವಾಗಿದ್ದು, ವಿವಿಧ ರಾಜಕೀಯ ಪಕ್ಷಗಳ ಹಾಗೂ ಸ್ವತಂತ್ರ ಅಭ್ಯರ್ಥಿಗಳು ಅಬ್ಬರದ ರೋಡ್ ಶೋ, ಬಹಿರಂಗ ಸಭೆ ಮೊದಲಾದ ಶಕ್ತಿ ಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಮಯದಲ್ಲಿ ಘನಾಘಟಿ ನಾಯಕರು ಸಾಥ್ ನೀಡುವ ಮೂಲಕ ಚುನಾವಣಾ ಅಖಾಡಕ್ಕೆ ಭರ್ಜರಿ ರಂಗು ಬಂದಿದೆ.

ಬಹುತೇಕ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೂ ಮುನ್ನ ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ, ಅನಂತರ ರೋಡ್ ಶೋ ನಡೆಸಿದರು. ಶಕ್ತಿ ಪ್ರದರ್ಶನ ಮೂಲಕ ಕೆಲವರು ನಾಮಪತ್ರ ಸಲ್ಲಿಸಿದರೆ, ಮತ್ತೆ ಕೆಲವರು ಯಾವುದೇ ಶಕ್ತಿ ಪ್ರದರ್ಶನವಿಲ್ಲದೆ, ಸರಳವಾಗಿ ಆಯಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಉಮೇದುವಾರಿಕೆ ಸಲ್ಲಿಸಿದವರಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣರಾಜದತ್ತ ಒಡೆಯರ್, ಮಾಜಿ ಸಚಿವ ವಿ.ಸೋಮಣ್ಣ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪ್ರಮುಖರಾಗಿದ್ದಾರೆ.

ಮಾರ್ಚ್ 28ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು, 152 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅದರಲ್ಲಿ 135 ಪುರುಷ, 17 ಮಹಿಳಾ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ. ಬಿಜೆಪಿಯಿಂದ 9, ಕಾಂಗ್ರೆಸ್ನಿಂದ 8, ಬಿಎಸ್ಪಿಯಿಂದ 5 ಹಾಗೂ ಜೆಡಿಎಸ್ನಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

Leave a Reply