ಬಿಜೆಪಿಗರು ಸುಳ್ಳು ಮಾಹಿತಿಗಳನ್ನು ಹಂಚಿಕೊಳ್ಳುತ್ತ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಗೆಡವುತ್ತಿದ್ದಾರೆ: ರಾಮಲಿಂಗಾರೆಡ್ಡಿ

2 years ago

ಬೆಂಗಳೂರು: ಹೊಸಕೋಟೆಯ ಶ್ರೀ ಅವಿಮುಕ್ತೇಶ್ವರಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಮುಸ್ಲಿಂ ಸದಸ್ಯರೊಬ್ಬರನ್ನು ಸೇರಿಸಿರುವ ವಿಚಾರಕ್ಕೆ ಸಂಬಂಧಿಸಿ ಅಪಪ್ರಚಾರಕ್ಕೆ BJP Karnataka ಇಳಿದಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಸಮಿತಿಯಲ್ಲಿ ನವಾಜ್ ಎಂಬುವವರಿಗೆ ಸ್ಥಾನ ಕಲ್ಪಿಸಲಾಗಿತ್ತು. ಇದಕ್ಕೆ ಕೋಮು ಬಣ್ಣ ಬಳಿಯಲು ಬಿಜೆಪಿ ಯತ್ನಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ರಾಮಲಿಂಗಾರೆಡ್ಡಿ, ಆದರೆ ವಾಸ್ತವದಲ್ಲಿ ಸಮಿತಿಯಲ್ಲಿ ಸರ್ವ ಸಮುದಾಯದ ಸದಸ್ಯರನ್ನು ನೇಮಕಗೊಳಿಸುವುದು ದೇಗುಲದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯವಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ ಪೋಸ್ಟ್

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಸಹ ಅಂದಿನ ಸಚಿವರಾಗಿದ್ದ ಶ್ರೀ MTB Nagaraj ಅವರು 2022 ನೇ ಸಾಲಿನ ಶ್ರೀ ಅವಿಮುಕ್ತೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಮಿತಿಯಲ್ಲಿ ಅಫ್ಸರ್ ಎಂಬುವವರನ್ನು ಸದಸ್ಯರನ್ನಾಗಿ ಮಾಡಿದ್ದರು ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ಬಿಜೆಪಿ ಅವಧಿಯಲ್ಲಿ ಆದ ನೇಮಕ

2020-21ನೇ ಸಾಲಿನ ಸಮಿತಿಯಲ್ಲಿ ಸಹ ಇದೇ ಬಿಜೆಪಿಯವರು ಇಮ್ತಿಯಾಜ್‌ ಪಾಷಾ ಎಂಬುವವರು ಸದಸ್ಯರನ್ನಾಗಿ ಮಾಡಿದ್ದನ್ನು ಮರೆತಂತಿದೆ. ಹಿಂದಿನ ಅವಧಿಯ ಎಲ್ಲ ಪಟ್ಟಿಗಳನ್ನು ಬಿಜೆಪಿ ತೆರೆದು ನೋಡಿ ಸ್ವಲ್ಪವಾದರೂ ವಿವೇಕದಿಂದ ವರ್ತಿಸಿದರೆ ಉತ್ತಮ ಎಂದಿದ್ದಾರೆ.

ಬಿಜೆಪಿ ಅವಧಿಯಲ್ಲಿ ಆದ ನೇಮಕ

ಅನ್ಯಧರ್ಮಿಯರ ಬಗ್ಗೆ ದ್ವೇಷವನ್ನು ಬಿತ್ತಿ ಅವರ ವಿರುದ್ಧ  ಹಿಂದೂ ಸಮುದಾಯವನ್ನು ಎತ್ತಿಕಟ್ಟುವ ಮೂಲಕ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ರಣಹದ್ದುಗಳಂತೆ ಸದಾ ಹಪಹಪಿಸುವ ಬಿಜೆಪಿಗರು ಸುಳ್ಳು ಮಾಹಿತಿಗಳನ್ನು ಹಂಚಿಕೊಳ್ಳುತ್ತ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಗೆಡವುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೊಸರಲ್ಲಿ ಕಲ್ಲು ಹುಡುಕುವ ಬುದ್ಧಿಯನ್ನು ಯಾವಾಗ ನಿಲ್ಲಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ್ದ ಆರೋಪವನ್ನು ಅಳಿಸಿ ಹಾಕಿದೆ.

Leave a Reply