ಒಂದು ವರ್ಷ ಕಳೆದರೂ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕಾಂಗ್ರೆಸ್‌ ವಿಫಲ: ಸಿ.ಎನ್.ಅಶ್ವತ್ಥ್ ನಾರಾಯಣ

2 years ago

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದರೂ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕಾಂಗ್ರೆಸ್‌ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಪ್ರಾಥಮಿಕ ಮಾಧ್ಯಮಿಕ, ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆ ನಡೆಸುವಲ್ಲಿಯೂ ಗೊಂದಲ ಸೃಷ್ಟಿಸಿದೆ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈವರೆಗೂ ಒಪಿಎಸ್ ಜಾರಿ ಮಾಡಿಲ್ಲ, ಏಳನೇ ವೇತನ ಆಯೋಗದ ಶಿಫಾರಸು ಜಾರಿ ಮಾಡದೇ ಕೈಕಟ್ಟಿ ಕುಳಿತಿದ್ದಾರೆ. ಪದವೀಧರರು, ಶಿಕ್ಷಕರ ಬಗ್ಗೆ ಕಾಳಜಿ ಇಲ್ಲದ ಕಾಂಗ್ರೆಸ್ ಸರ್ಕಾರ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಎನ್ ಪಿಎಸ್ ರದ್ದು ಮಾಡಿದೆ. ಆದರೆ, ಖಾಸಗಿ ಶಾಲೆ, ಕಾಲೇಜುಗಳಲ್ಲಿ ಎನ್‌ಪಿಎಸ್ ರದ್ದು ಮಾಡಲು ಧೈರ್ಯ ತೋರುತ್ತಿಲ್ಲ. ಇವರ ರಾಜಕೀಯ ಪ್ರೇರಿತ ನಡೆಯಿಂದಾಗಿ ಸರ್ಕಾರಿ ಶಾಲೆ, ಕಾಲೇಜು ಮಕ್ಕಳು ಎನ್‌ಪಿಎಸ್ ಶಿಕ್ಷಣ ಪದ್ಧತಿಯಿಂದ ವಂಚಿತರಾಗಿದ್ದಾರೆ ಎಂದು ಆರೋಪಿಸಿದರು.

ಭ್ರಷ್ಟಾಚಾರ, ಮತ ಬ್ಯಾಂಕ್‌ ರಾಜಕಾರಣದಲ್ಲಿ ಮಗ್ನವಾಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಶಿಕ್ಷಕರ ಬಗ್ಗೆ ಆಗಲಿ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಆಗಲಿ ಕಿಂಚಿತ್‌ ಕಾಳಜಿ ಇಲ್ಲ ಎನ್ನುವುದಕ್ಕೆ ಈ ಒಂದು ವರ್ಷದ ದುರಾಡಳಿತವೇ ಸಾಕ್ಷಿ ಎಂದರು.

ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Leave a Reply