ಬೆಂಗಳೂರು: ಹಲವಾರು ಕಾರಣದಿಂದ ಮುಂದೂಡಲ್ಪಟ್ಟಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ಸಮ್ಮೇಳನ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿನಡೆದ ಉನ್ನತ ಮಟ್ಟದ ಸಭೆಯಲ್ಲಿ ತೀರ್ಮಾನಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಸಾಹಿತ್ಯ ಸಮ್ಮೇಳನದ ದಿನಾಂಕ ನಿಗದಿ, ವೆಚ್ಚ, ಧ್ಯೇಯೋದ್ದೇಶ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಿದ್ದರಾಮಯ್ಯ ಅವರು ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದರು.
ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಜೂನ್ ತಿಂಗಳಲ್ಲಿ ಮಂಡ್ಯದಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ ಎಂದರು.
ಈ ಬಾರಿ ಸಕ್ಕರೆ ನಾಡು ಮಂಡ್ಯದಲ್ಲಿ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುವುದಾಗಿ ಹೇಳಿದರು.
ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಸಿದ್ದರಾಮಯ್ಯ, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಯಿತು ಎಂದರು.
ಮಂಡ್ಯದಲ್ಲಿ 48ನೇ ಸಾಹಿತ್ಯ ಸಮ್ಮೇಳನ 1974ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸುವ ವಿಶ್ವಾಸ ನನಗಿದೆ ಎಂದರು.
ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.




