ಎಸ್ಸಿಪಿ, ಟಿಎಸ್ಪಿಯ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿ ದ್ರೋಹ: ಆರ್‌.ಅಶೋಕ್‌‌

2 years ago

ಬೆಂಗಳೂರು: ಪರಿಶಿಷ್ಟ ವರ್ಗ ಮತ್ತು ಪಂಗಡಕ್ಕಾಗಿ ಮೀಸಲಿಟ್ಟ ಎಸ್ಸಿಪಿ, ಟಿಎಸ್ಪಿಯ 25 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡು ಆ ಜನಾಂಗಕ್ಕೆ ದ್ರೋಹ ಎಸಗಲಾಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌‌ ಆರೋಪಿಸಿದರು.

ಈ ಕುರಿತು ವಿಧಾನಸಭೆಯಲ್ಲಿ  ನಿಲುವಳಿ‌ ಸೂಚನೆಯ ಪ್ರಸ್ತಾಪ ಮಂಡಿಸಿ ಮಾತನಾಡಿದ ಅವರು, ಚುನಾವಣೆ ಗೆಲ್ಲಬೇಕೆಂದು ಅವೈಜ್ಞಾನಿಕವಾಗಿ 5 ಗ್ಯಾರಂಟಿಗಳನ್ನು ಜಾರಿಗೆ ತಂದರು. ಆ ಗ್ಯಾರಂಟಿ ಯೋಜನೆಗಳಿಗೆ ಬಜೆಟ್‌ ಅನುದಾನ ಒದಗಿಸುವ ಬಗ್ಗೆ ಸರಿಯಾದ ಚರ್ಚೆ ಮಾಡಲಿಲ್ಲ. ಈಗ ಅವುಗಳಿಗಾಗಿ ‌ಪರಿಶಿಷ್ಟ ಜಾತಿ ಮತ್ತು ವರ್ಗದ ಹಣವನ್ನು ಬಳಸಲಾಗಿದೆ ಎಂದರು.

ಪರಿಶಿಷ್ಟ ಜಾತಿ ಮತ್ತು ವರ್ಗದವರ ಕಲ್ಯಾಣಕ್ಕಾಗಿ ನಿಗದಿಪಡಿಸಲಾಗಿದ್ದ 25000 ಕೋಟಿ ರೂಪಾಯಿಗೂ ಅಧಿಕ ಹಣವನ್ನು ಗ್ಯಾರಂಟಿ ಯೋಜನೆಗಳಿಗಾಗಿ ಖರ್ಚು ಮಾಡಲಾಗಿದೆ. ಈ ಮೂಲಕ ಈ ಸರ್ಕಾರ ದಲಿತ ವಿರೋಧಿಯಾಗಿದೆ ಎಂದರು.

ಪರಿಶಿಷ್ಟ ಜಾತಿ ಮತ್ತು ವರ್ಗಗಳಿಗೆ ಕಾನೂನು ಪ್ರಕಾರ ಮೀಸಲಿಟ್ಟ ಹಣದಲ್ಲಿ ಆ ಸಮುದಾಯ ವಾಸಿಸುತ್ತಿರುವ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಆಸ್ಪತ್ರೆಗಳ ನಿರ್ಮಾಣ, ಬಡಾವಣೆಗಳ ಅಭಿವೃದ್ಧಿ ಮೊದಲಾದ ಕೆಲಸಗಳನ್ನು ಕೈಗೊಳ್ಳಬೇಕಿತ್ತು. ಆದರೆ ಇದಾವುದನ್ನು ಸರ್ಕಾರ ಮಾಡಿದೆ ಎಂದು ಪ್ರಶ್ನಿಸಿದರು.

ಈ ಸಮುದಾಯದ ಮಹಿಳೆಯರಿಗೆ ಮಾಸಿಕ ಎರಡು ಸಾವಿರ ರೂಪಾಯಿ ಕೊಡುವುದರಿಂದ ಆ ಸಮುದಾಯದ ಎಲ್ಲ ಜನರಿಗೆ ಶುದ್ಧ ಕುಡಿಯುವ ನೀರು ಸಿಗುವುದಿಲ್ಲ. ಅವರ ಬಡಾವಣೆಗೆ ಒಳಚರಂಡಿ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ, ಆಸ್ಪತ್ರೆ ಸೌಲಭ್ಯ ಕಲ್ಪಿಸಲು ಸಾಧ್ಯವಿಲ್ಲ ಎಂದರು.

ಪ್ರತಿಪಕ್ಷ ನಾಯಕರ ಈ ವಾದ ಆಲಿಸಿದ ಸಭಾಧ್ಯಕ್ಷ ಯು ಟಿ ಖಾದರ್ ಈ ಬಗ್ಗೆ ನಿಯಮ 69ರ ಅಡಿಯಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡುವುದಾಗಿ ತಿಳಿಸಿದರು.

Leave a Reply