ಬೆಂಗಳೂರು: ರಾಜ್ಯ ಸರಕಾರದ ವಿರುದ್ಧ ಪಾದಯಾತ್ರೆ ಮಾಡುತ್ತಿರುವ ಬಿಜೆಪಿಯವರು ತಮ್ಮ ಸರಕಾರವಿದ್ದಾಗ ನಡೆದ ಶೇ.40ರಷ್ಟು ಕಮೀಷನ್, ಕೋವಿಡ್ ಕಾಲದ ಹಗರಣ, ಮಾರಿಷಸ್ ನಲ್ಲಿ ಇಟ್ಟಿದ್ದಾರೆ ಎನ್ನಲಾಗುತ್ತಿರುವ ಹತ್ತು ಸಾವಿರ ಕೋಟಿ ರೂಪಾಯಿ ಬಗ್ಗೆ ಜನತೆಗೆ ಸತ್ಯ ತಿಳಿಸಲಿ ಎಂದು ಬೃಹತ್ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸವಾಲೆಸೆದಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿದ್ದ ಈ ಎಲ್ಲಾ ಆರೋಪಗಳ ಬಗ್ಗೆ ಉತ್ತರ ನೀಡಿ ಬೇಕಾದರೆ ಪಾದಯಾತ್ರೆ ಮಾಡಿಕೊಳ್ಳಲಿ ಎಂದರು.
ಬಿಜೆಪಿ ಸರಕಾರವಿದ್ದಾಗ ಸಾಲುಸಾಲು ಹಗರಣಗಳು ನಡೆದಿದ್ದವು. ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರ ಏನೂ ಇಲ್ಲ. ಈಗಾಗಲೇ ಅವರು ಇದರ ಬಗ್ಗೆ ಸ್ಪಷ್ಟೀಕರಣ ಕೊಟ್ಟಿದ್ದಾರೆ ಎಂದರು.
ಮುಡಾದಲ್ಲಿ ಬದಲಿ ನಿವೇಶನ ಹಂಚಿಕೆಯ ನೀತಿ ಮಾಡಿದ್ದೇ ಬಿಜೆಪಿಯವರು. ಸೈಟುಗಳನ್ನು ಹಂಚಿದ್ದೂ ಅವರೇ. ಈಗ ಜನರ ದಿಕ್ಕು ತಪ್ಪಿಸಲು ಪಾದಯಾತ್ರೆಯ ನಾಟಕ ಆಡಲು ಹೊರಟಿದ್ದಾರೆ ಎಂದರು.
ಸದ್ಯ ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ, ಅಶ್ವತ್ಥನಾರಾಯಣ, ಅಶೋಕ, ರಮೇಶ್ ಜಾರಕಿಹೊಳಿ, ಯತ್ನಾಳ ಹೀಗೆ ಇಪ್ಪತ್ತು ಗುಂಪುಗಳಿವೆ. ಪಾದಯಾತ್ರೆ ಬಗ್ಗೆ ಬಿಜೆಪಿ ಮತ್ತು ಜೆಡಿಎಸ್ ಮಧ್ಯೆಯೇ ಒಮ್ಮತವಿಲ್ಲ. ಬಿಜೆಪಿಯಲ್ಲೂ ಯತ್ನಾಳ ಮತ್ತು ರಮೇಶ ಜಾರಕಿಹೊಳಿ ಬೇರೆ ತರಹ ಮಾತನಾಡುತ್ತಿದ್ದಾರೆ ಎಂದರು.
ಸಚಿವ ಜಮೀರ್ ಅಹಮದ್ ಸಂಪುಟ ಪುನಾರಚನೆ ಬಗ್ಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಇದನ್ನೆಲ್ಲ ಹೈಕಮಾಂಡ್ ನೋಡಿಕೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪಕ್ಷದ ಹಲವು ವಿಚಾರಗಳ ಬಗ್ಗೆ ಮಾತನಾಡಲು ದೆಹಲಿಗೆ ಹೋಗಿದ್ದಾರಷ್ಟೆ. ಸಂಪುಟ ಪುನಾರಚನೆ, ವಿಸ್ತರಣೆ ಎಲ್ಲ ಏನೂ ಇಲ್ಲ. ಮಂತ್ರಿಸ್ಥಾನ ಬೇಕೆಂಬ ಆಸೆ ಇರುವವರು ಅದಕ್ಕಾಗಿ ಕೇಳುವುದು ಸ್ವಾಭಾವಿಕ ಎಂದರು.



