ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ರಚಿಸಲಿದೆ: ರಮೇಶ್ ಚೆನ್ನಿತ್ತಾಲ

2 years ago

ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿ (ಎಂವಿಎ) ಮೂರನೇ ಎರಡರಷ್ಟು ಬಹುಮತ ಪಡೆದು ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ಮಹಾರಾಷ್ಟ್ರ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಮೇಶ್ ಚೆನ್ನಿತ್ತಾಲ ಹೇಳಿದರು.

ಬುಲ್ಧಾನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,  ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದರೂ, ಕೇಂದ್ರ ಮತ್ತು ರಾಜ್ಯ ಸರ್ಕಾರ ಬೆಲೆ ಏರಿಕೆ ನಿಯಂತ್ರಣ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ವಿಫಲವಾಗಿದೆ ಎಂದರು.

ಬುಲ್ಧಾನಾ, ಅಕೋಲಾ ಮತ್ತು ವಾಶಿಂ ಜಿಲ್ಲೆಗಳಲ್ಲಿ ಪಕ್ಷದ ಚುನಾವಣಾ ಸಿದ್ಧತೆಯ ಅವಲೋಕನ ನಡೆಸಲು ಆಗಮಿಸಿದ್ದ ಚೆನ್ನಿತ್ತಾಲ, ಸದ್ಯದ ಸರಕಾರದ ಮೇಲೆ ಜನ ವಿಶ್ವಾಸ ಕಳೆದುಕೊಂಡಿದ್ದು, ಆಡಳಿತಾರೂಢ ಮೈತ್ರಿಕೂಟದ ವಿರುದ್ಧ ಮತ ಹಾಕಲು ಸಿದ್ಧರಿದ್ದಾರೆ ಎಂಬುದು ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಫಲಿತಾಂಶದಿಂದ ಸಾಬೀತಾಗಿದೆ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಎಂವಿಎ ಮೂರನೇ ಎರಡರಷ್ಟು ಬಹುಮತ ಗಳಿಸುವ ಮೂಲಕ ಸರ್ಕಾರ ರಚಿಸಲಿದೆ ಎಂದು ನಾನು ವಿಶ್ವಾಸದಿಂದ ಹೇಳಬಲ್ಲೆ. ನಮ್ಮ ಸರ್ಕಾರ ಜನ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದರು.

ಮಹಾರಾಷ್ಟ್ರಕ್ಕೆ ಯಾವುದೇ ಹೂಡಿಕೆ ಬರುತ್ತಿಲ್ಲ ಮತ್ತು ಅದು ಗುಜರಾತ್‌ಗೆ ಹೋಗುತ್ತಿದೆ. ಮಹಾರಾಷ್ಟ್ರ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟವಾಗಿದೆ ಎಂದು ಆರೋಪಿಸಿದರು. 

ಎಂವಿಎ ಒಟ್ಟಾಗಿ ಕೆಲಸ ಮಾಡಲಿದೆ. ಸೀಟು ಹಂಚಿಕೆ ಕುರಿತು ಅದರ ಮೊದಲ ಸಭೆ ಆಗಸ್ಟ್ 8 ರಂದು ನಡೆಯಿತು ಮತ್ತು ಮುಂದಿನ ದಿನಗಳಲ್ಲಿ ಅಂತಹ ಹೆಚ್ಚಿನ ಸಭೆಗಳು ನಡೆಯಲಿವೆ. ಎಂವಿಎ ಒಗ್ಗಟ್ಟಿನಿಂದ ಚುನಾವಣೆಗೆ ಹೋಗಲಿದೆ ಮತ್ತು ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಲಿದೆ ಎಂದರು.

ಮಹಾರಾಷ್ಟ್ರ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಮಹಾರಾಷ್ಟ್ರದ ಪ್ರತಿ ಜಿಲ್ಲೆಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದರು.

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ (ಎಂಪಿಸಿಸಿ) ಯಾವುದೇ ಸಂಘರ್ಷವಿಲ್ಲ. ರಾಜ್ಯದಲ್ಲಿ ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಶಿವಸೇನೆ (ಉದ್ಧವ್ ಠಾಕ್ರೆ ಬಣ), ಎನ್‌ಸಿಪಿ (ಶರದ್ ಪವಾರ್ ಬಣ) ಮತ್ತು ಕಾಂಗ್ರೆಸ್ ಒಳಗೊಂಡಿರುವ ಎಂವಿಎ ಶಿವಸೇನೆ, ಬಿಜೆಪಿ ಮತ್ತು ಎನ್‌ಸಿಪಿಯ ಮೈತ್ರಿಯಿಂದ ಅಧಿಕಾರ ವಶಪಡಿಸಿಕೊಳ್ಳಲು ಸಿದ್ಧತೆ ನಡೆಸಿದೆ.

Leave a Reply