ನಾಗಮಂಗಲ ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎನ್.ಚಲುವರಾಯಸ್ವಾಮಿ

2 years ago

ಮಂಡ್ಯ: ನಾಗಮಂಗಲ ಪಟ್ಟಣದ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸಲಾಗುವುದು ಎಂದಿದ್ದಾರೆ.

ಈ ಘಟನೆ ನಡೆದಿರುವುದು ದುರದೃಷ್ಟಕರ. ಆಕಸ್ಮಿಕವಾಗಿ ನಡೆದ ಘಟನೆ, ನಂತರ ದೊಡ್ಡ ಮಟ್ಟದ ಗಲಭೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಸುಮಾರು 54ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಘಟನೆಯಲ್ಲಿ ಪಾಲ್ಗೊಳ್ಳದ ಅಮಾಯಕರ ಬಂಧನವಾಗಿದ್ದಲ್ಲಿ ಸಿಸಿಟಿವಿ ಪರಿಶೀಲಿಸಿ, ಖಚಿತಪಡಿಸಿಕೊಂಡು ಬಿಡುಗಡೆ ಮಾಡಲು ಸೂಚಿಸಲಾಗಿದೆ. ನೈಜ ತಪ್ಪಿತಸ್ಥರನ್ನು ಬಿಡುವ ಪ್ರಶ್ನೆ ಇಲ್ಲ ಎಂದಿದ್ದಾರೆ.

ಕೋಮು ಸೌಹಾರ್ದತೆಯನ್ನು ಕದಡುವ ಕೆಲಸವನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ನಮ್ಮ ಜನರಿಗೆ ಶಾಂತಿ ಸೌಹಾರ್ದತೆಯಿಂದ ಬದುಕುವ ವಾತಾವರಣ ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

ಘಟನೆಯಲ್ಲಿ ಹಾನಿಗೊಳಗಾದ ಅಂಗಡಿಗಳು ಹಾಗೂ ಮನೆಗಳ ನಷ್ಟವನ್ನು ಅಂದಾಜಿಸಲಾಗುತ್ತಿದೆ. ಅವುಗಳ ಮಾಲೀಕರಿಗೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು. ಇದು ನನ್ನ ಸ್ವ ಕ್ಷೇತ್ರ, ನಷ್ಟ ಅನುಭವಿಸಿದವರಿಗೆ ವೈಯಕ್ತಿಕವಾಗಿಯೂ ಪರಿಹಾರ ಒದಗಿಸುವೆ ಎಂದು ಭರವಸೆ ನೀಡಿದ್ದಾರೆ.

ಮುಂದಿನ ಎರಡು ದಿನಗಳಲ್ಲಿ ಮಂಡ್ಯ ಜಿಲ್ಲಾಧಿಕಾರಿ, ಹಾಗೂ ಎಸ್.ಪಿ. ನೇತ್ರತ್ವದಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಲಾಗಿದೆ. ಈ ಘಟನೆಯನ್ನು ರಾಜಕೀಯವಾಗಿ ಬಳಸದೇ ವಿರೋಧ ಪಕ್ಷಗಳು ಸಹ ಜವಾಬ್ದಾರಿಯಿಂದ ವರ್ತಿಸಬೇಕು. ಹಾಗೆಯೇ, ಮಾಧ್ಯಮಗಳು ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Leave a Reply