ಬೆಂಗಳೂರು: ಡಿಸೆಂಬರ್ 31ರಂದು ಕೆಲವು ಕನ್ನಡ ಸಂಘಟನೆಗಳು ಕರೆದಿರುವ ಕರ್ನಾಟಕ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇರುವುದಿಲ್ಲ. ಡಿಸೆಂಬರ್ 31 ರಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಬಂದ್ ನಲ್ಲಿ ಪಾಲ್ಗೊಳ್ಳುವುದಿಲ್ಲ. ಎಂಇಎಸ್ ಮತ್ತು ಶಿವಸೇನೆಗಳ ವಿರುದ್ಧ ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.
ಇಂದು ಕೆಲವು ಸಂಘಟನೆಗಳು ನಡೆಸಿದ ಸಭೆಯಲ್ಲಿ ನಾನು ಪಾಲ್ಗೊಂಡಿರಲಿಲ್ಲ, ನನಗೆ ಆಹ್ವಾನವೂ ಇರಲಿಲ್ಲ. ವಾಟಾಳ್ ನಾಗರಾಜ್ ಅವರು ಹಿರಿಯರು, ಅವರ ಕುರಿತು ನನಗೆ ಅಪಾರವಾದ ಗೌರವವಿದೆ. ಆದರೆ ದಿಢೀರನೆ ಬಂದ್ ಗಳಿಗೆ ಕರೆ ನೀಡಿದರೆ ಅದನ್ನು ಬೆಂಬಲಿಸಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಂದಾಗಿ ರಾಜ್ಯದ ಜನ ನೊಂದು ನಲುಗಿದ್ದಾರೆ. ಸರ್ಕಾರವೇ ನೂರಾರು ದಿನಗಳ ಲಾಕ್ ಡೌನ್ ಹೇರಿದ ಪರಿಣಾಮವಾಗಿ ಜನಸಾಮಾನ್ಯರು ಸಾಕಷ್ಟು ಸಮಸ್ಯೆ ಎದುರಿಸಿದ್ದಾರೆ. ಇಂಥ ಸಂದರ್ಭದಲ್ಲಿ ಬಂದ್ ಗೆ ಕರೆ ನೀಡುವುದು ಎಷ್ಟು ಸರಿ ಎಂದು ನಮ್ಮನ್ನು ನಾವು ಪ್ರಶ್ನಿಸಿಕೊಳ್ಳಬೇಕಿದೆ ಎಂದಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಮೊದಲಿನಿಂದಲೂ ಈ ಬಗೆಯ ದಿಢೀರ್ ಬಂದ್ ಕರೆಗಳಿಂದ ದೂರ ಉಳಿಯುತ್ತ ಬಂದಿದೆ. ಬಂದ್ ಎಲ್ಲ ಸಮಸ್ಯೆಗಳಿಗೂ ಪರಿಹಾರವಲ್ಲ, ಅದೊಂದೇ ಚಳವಳಿಯ ಮಾರ್ಗವಲ್ಲ. ಬಂದ್ ಚಳವಳಿಯ ಕೊನೆಯ ಅಸ್ತ್ರವಾಗಬೇಕು ಎಂಬುದು ನಮ್ಮ ನಿಲುವು ಎಂದು ಹೇಳಿದ್ದಾರೆ.
ಕರ್ನಾಟಕ ರಕ್ಷಣಾ ವೇದಿಕೆ ಕರ್ನಾಟಕದಾದ್ಯಂತ ಭಯೋತ್ಪಾದಕ ಸಂಘಟನೆಗಳಂತೆ ಕಾರ್ಯನಿರ್ವಹಿಸುತ್ತಿರುವ ಎಂಇಎಸ್ ಮತ್ತು ಶಿವಸೇನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಸತತ ಹೋರಾಟಗಳನ್ನು ನಡೆಸಿಕೊಂಡುಬಂದಿದೆ. ಮುಂದೆಯೂ ಈ ಚಳವಳಿ ಮುಂದುವರೆಯಲಿದೆ ಎಂದಿದ್ದಾರೆ.
ಎಂಇಎಸ್ ಮತ್ತು ಶಿವಸೇನೆ ನಿಷೇಧಿಸಲು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಡಿಸೆಂಬರ್ 28ರಂದು ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಗು ಡಿ. 30 ರಂದು ‘ರಾಜಭವನ ಮುತ್ತಿಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ. ಈ ಸಂಘಟನೆಗಳನ್ನು ನಿಷೇಧಿಸಲು ಅಗತ್ಯವಾಗಿರುವ ಎಲ್ಲ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಮೇಲೆ ಒತ್ತಡವನ್ನು ಹೇರಲಿದ್ದೇವೆ ಎಂದು ಹೇಳಿದ್ದಾರೆ.




