ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಿ: ಪ್ರಭಾ ಮಲ್ಲಿಕಾರ್ಜುನ್

2 years ago

ದಾವಣಗೆರೆ: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಲೋಕಸಭಾ ಸದಸ್ಯೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಗಳ ಸಂಘ, ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ವಿದ್ಯಾನಗರದಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಉಚಿತ ಸಿಇಟಿ ಮತ್ತು ನೀಟ್ ಪರೀಕ್ಷೆ ತರಬೇತಿ ಕಾರ್ಯಕ್ರಮಕ್ಕೆ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ತನ್ನ ಭವಿಷ್ಯದ ಗುರಿಯನ್ನಿಟ್ಟುಕೊಂಡು ಆಶಾವಾದಿಗಳಾಗಬೇಕು. ಜೀವನದಲ್ಲಿ ಸಿಗುವಂತಹ ಅವಕಾಶಗಳನ್ನು ಸಂಪೂರ್ಣವಾಗಿ ಸದ್ಬಳಕೆ ಮಾಡಿಕೊಂಡರೆ, ತನ್ನ ಗುರಿ ಸಾಧನೆಯ ಹಾದಿ ಸುಗಮವಾಗುತ್ತದೆ ಎಂದರು.

ವಿದ್ಯಾರ್ಥಿಗಳು ಶಿಕ್ಷಕರೊಂದಿಗೆ, ಪೋಷಕರೊಂದಿಗೆ ಹಾಗೂ ಸಮಾಜದೊಂದಿಗೆ ಉತ್ತಮ ಬಾಂಧವ್ಯವನ್ನು ಬೆಳೆಸಿಕೊಂಡು ಸಂಬಂಧಗಳ ಮಹತ್ವಗಳನ್ನು ಅರಿತು ಅವುಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಕಲಿಕೆಯ ಎಲ್ಲ ಹಂತಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಪರಿಪೂರ್ಣ ವಿದ್ಯಾರ್ಥಿ ಎಂದು ಎನಿಸಿಕೊಳ್ಳಲು ಸಾಧ್ಯ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಾವುದೇ ವಿಷಯಗಳನ್ನು ನಿರ್ಲಕ್ಷ್ಯ ಮಾಡದೇ ಪ್ರತಿಯೊಂದು ವಿಷಯವು ಉಪಯುಕ್ತ ಎನ್ನುವ ಭಾವನೆಯೊಂದಿಗೆ ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಯತ್ನಿಸಬೇಕಿದೆ ಎಂದರು.

ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲಿಷ್ ಕಲಿಕೆ, ಕಂಪ್ಯೂಟರ್ ಜ್ಞಾನದ ಜೊತೆಗೆ ಶಿಸ್ತು ಬೆಳೆಸಿಕೊಂಡರೆ  ಮಾತ್ರ ಜೀವನದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಮಾತನಾಡಿ, ವಿದ್ಯಾರ್ಥಿಗಳು ಏನು ಓದಬೇಕು, ಯಾವಾಗ ಓದಬೇಕು, ಏನ್ ಮಾಡಬೇಕು ಎಂಬ ಸ್ವಂತ ಚಿಂತನೆಗಳನ್ನು ರೂಡಿಸಿಕೊಳ್ಳಬೇಕು. ವಿದ್ಯಾರ್ಥಿಗಳ ತಂದೆ, ತಾಯಿಗಳು ಕಷ್ಟಪಟ್ಟು ದುಡಿದು ನಿಮಗೆ ವಿದ್ಯಾಭ್ಯಾಸ ಕಲಿಯಲು ಕಳುಹಿಸುತ್ತಿರುತ್ತಾರೆ. ಅದರ ಫಲವಾಗಿ ನೀವು ಅವರಿಗೆ ನಿಮ್ಮ ಸಾಧನೆಯ ಮೂಲಕ ಗೌರವ ತರಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್ ಮಾತನಾಡಿ, ಈ ತರಬೇತಿಯು 90 ದಿನಗಳ ಕಾಲ ನಡೆಯಲಿದ್ದು. ಪ್ರತಿದಿನ 2 ಗಂಟೆಯಂತೆ ಐದು ದಿನ ತರಗತಿಗಳನ್ನು ನಡೆಸಲಾಗುತ್ತದೆ. ಜೊತೆಗೆ 19 ವರ್ಷ ಹಿಂದಿನ ಪ್ರಶ್ನೋತ್ತರಗಳನ್ನು ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದರು.

ಸರ್ಕಾರಿ ಕಾಲೇಜಿನಲ್ಲಿರುವಂತಹ ಅಧ್ಯಾಪಕರು ಬೋರ್ಡ್ ಪರೀಕ್ಷೆ ಬಗ್ಗೆ ಹೆಚ್ಚು ಅಧ್ಯಯನ ಮಾಡಿಸುತ್ತಾರೆ, ಹಾಗೆಯೇ ಖಾಸಗಿ ಸಂಸ್ಥೆ ಅಧ್ಯಾಪಕರು ಸಿಇಟಿ ಮತ್ತು ನೀಟ್ ಪರೀಕ್ಷೆ ಬಗ್ಗೆ ಉಪನ್ಯಾಸ ನೀಡುತ್ತಾರೆ ಎಂದರು.

ಜಿಲ್ಲಾ ಅಧೀಕ್ಷಕ ಉಮಾ ಪ್ರಶಾಂತ್ ಮಾತನಾಡಿ, ಭವಿಷ್ಯ ನಿಮ್ಮ ಕೈಯಲ್ಲಿದೆ, ಆದ್ದರಿಂದ ಕಲಿಯುವ ಸಮಯದಲ್ಲಿ ಗಮನವಿಟ್ಟು ಶ್ರದ್ಧೆಯಿಂದ ಕಲಿತು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಿಗರೇಟ್, ತಂಬಾಕು ಇಂತಹ ದುಶ್ಚಟಗಳಿಂದ ದೂರವಿರಬೇಕು, ಕಾಲೇಜುಗಳಲ್ಲಿ ಯಾರಾದರೂ ಸಿಗರೇಟ್, ತಂಬಾಕು ಬಳಸುವುದು ಕಂಡುಬಂದಲ್ಲಿ ಅಂತವರ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದರು.

ಇದೆ ವೇಳೆ  ಯೂಟ್ಯೂಬ್ ಚಾನೆಲ್ ಗೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಸಿಇಟಿ,  ನೀಟ್ ಬುಕ್ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಚಮನ್ ಸಾಬ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ್,  ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕರಿಸಿದ್ದಪ್ಪ, ಖಾಸಗಿ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿ ಸಂಘದ ಅಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಡಾ.ಜಯಂತ್,  ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ ವಾಮದೇವಪ್ಪ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗಾಯತ್ರಿ ಹಾಗೂ ವಿವಿಧ ಅಧಿಕಾರಿಗಳು, ವಿದ್ಯಾರ್ಥಿಗಳು ಹಾಜರಿದ್ದರು.

Leave a Reply