ಮುಡಾ ಪ್ರಕರಣದ ತನಿಖೆ: ರಂಗ ಪ್ರವೇಶಿಸಿದ ಇಡಿ

2 years ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಹಲವು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.

ಮೈಸೂರಿನ ಮುಡಾ ಕಚೇರಿ ಮತ್ತು ಬೆಂಗಳೂರಿನ ದೇವರಾಜು ಎಂಬುವರ ನಿವಾಸದ ಮೇಲೆ ದಾಳಿ ನಡೆಸಿ ಸಂಗ್ರಹಿಸಿರುವ ಮಾಹಿತಿ ಆಧಾರದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಿದ್ದರಾಮಯ್ಯ ಅವರಿಂದ ಹೇಳಿಕೆ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಜಾರಿ ನಿರ್ದೇಶನಾಲಯ ಅಧಿಕಾರಿಗಳ ಈ ಕ್ರಮದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಒಟ್ಟಿಗೆ ಕುಳಿತು ಎಲ್ಲ ವಿದ್ಯಮಾನಗಳ ಬಗ್ಗೆ ಸುದೀರ್ಘ ಅವಧಿಯವರೆಗೆ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಜಾರಿ ನಿರ್ದೇಶನಾಲಯದ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ  ಮೈಸೂರಿನ ಮುಡಾ ಕಚೇರಿ ಹಾಗೂ ಬೆಂಗಳೂರಿನ ಕೆಂಗೇರಿಯಲ್ಲಿರುವ ಜಮೀನಿನ ಮಾಲೀಕ 4ನೇ ಆರೋಪಿ ದೇವರಾಜು ಅವರ ಮನೆ ಮೇಲೆ ದಾಳಿ ನಡೆಸಿದರು.

ಮುಡಾದ ಕಾರ್ಯದರ್ಶಿ ಪ್ರಸನ್ನಕುಮಾರ್‌ ಈ ಬಗ್ಗೆ ಹೇಳಿಕೆ ನೀಡಿದ್ದು, ಇಡಿ ಅಧಿಕಾರಿಗಳು ಮುಡಾ ಕಚೇರಿಗೆ ಬಂದು ಮಾಹಿತಿ ಕೇಳಿದ್ದಾರೆ. ದಾಖಲಾತಿಗಳ ಪರಿಶೀಲನೆ ನಡೆಸಿದ್ದಾರೆ. ಇನ್ನೆರಡು ದಿನ ಶೋಧ ಕಾರ್ಯ ನಡೆಯುವ ಸಾಧ್ಯತೆಗಳಿವೆ ಎಂದರು.

Leave a Reply