ಮಂಗಳೂರು: ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ವಿಧಿಸಿದೆ ಮತ್ತು ಜನಸಾಮಾನ್ಯರನ್ನು ಸಂಕಷ್ಟಕ್ಕೆ ದೂಡಿದೆ ಎಂದು ಎಂದು ಆರೋಪಿಸಿ ಸಿಪಿಐಎಂ ನೇತೃತ್ವದಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ಕೋವಿಡ್ ನಿರ್ಬಂಧಗಳನ್ನು ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಮಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ರಾಜ್ಯ ಸರಕಾರದ ಕ್ರಮಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ CPIM ದ.ಕ.ಜಿಲ್ಲಾ ಕಾರ್ಯದರ್ಶಿ ಕೆ.ಯಾದವ ಶೆಟ್ಟಿ, ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬೊಮ್ಮಯಿ ನೇತೃತ್ವದ ಬಿಜೆಪಿ ಸರಕಾರ ಹೆಜ್ಜೆಹೆಜ್ಜೆಗೂ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿದೆ. ಅದರ ಜೊತೆಗೆ ತನ್ನ ಕೋಮುವಾದಿ ಅಜೆಂಡಾವನ್ನು ಜಾರಿಗೊಳಿಸಿ ಜನರ ಗಮನವನ್ನು ಬೇರೆಡೆಗೆ ಸೆಲೆಯಲು ಯತ್ನಿಸುತ್ತಿದೆ. ಮಾತ್ರವಲ್ಲದೆ ಸರಕಾರದ ವಿರುದ್ಧ ಭುಗಿಲೆದ್ದ ಜನಾಕ್ರೋಶವನ್ನು ಶಮನ ಮಾಡಲು ಕೊರೋನಾವನ್ನು ಮುಂದಿಟ್ಟುಕೊಂಡು ಕೀಳುಮಟ್ಟದ ರಾಜಕೀಯ ನಡೆಸುತ್ತಿದೆ ಎಂದು ಟೀಕಿಸಿದರು.
CPIM ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಮುನೀರ್ ಕಾಟಿಪಳ್ಳ ಮಾತನಾಡಿ, ರಾಜ್ಯದ ಜನತೆಯ ಬದುಕಿನ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸದ ಸರಕಾರ ಅಧಿಕಾರ ನಡೆಸಲು ಅಯೋಗ್ಯ. ಅಂದು ಭ್ರಷ್ಟಾಚಾರದ ವಿರುದ್ಧ ಬೊಗಳೆ ಬಿಟ್ಟವರು ಇಂದು 40% ಕಮಿಷನ್ ಪಡೆಯುವ ಸರಕಾರವೆಂದು ತನ್ನವರಿಂದಲೇ ಕರೆಸಿಕೊಂಡಿದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ CPIM ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಸುನಿಲ್ ಕುಮಾರ್ ಬಜಾಲ್, ಕೊಳೆತು ನಾರುತ್ತಿರುವ ಮಾಧ್ಯಮ ರಂಗ, ಕುಲಗೆಟ್ಟ ರಾಜಕಾರಣ ಹಾಗೂ ಜನರ ಪ್ರಾಣದ ಜೊತೆ ಚೆಲ್ಲಾಟವಾಡುವ ಮೆಡಿಕಲ್ ಮಾಫಿಯಾಗಳ ಸಮ್ಮಿಶ್ರಣ ಇಡೀ ಜಗತ್ತನ್ನು ತನ್ನ ಕಪಿಮುಷ್ಠಿಯಲ್ಲಿಟ್ಟು ಕೊರೋನಾ ಹೆಸರಿನಲ್ಲಿ ರಾಜಕೀಯ ನಡೆಸುತ್ತಿದೆ. ಕಾರ್ಪೊರೇಟ್ ಕಂಪೆನಿಗಳ ಹಿತಾಸಕ್ತಿಗಳಿಗಾಗಿ ಜನರ ಹಿತವನ್ನು ಬಲಿ ಕೊಡುವ ಕೇಂದ್ರ ಸರ್ಕಾರದ ವಿರುದ್ಧವೂ ಜನತೆ ತಿರುಗಿ ಬೀಳುತ್ತಿದ್ದಾರೆ ಎಂದರು.
ಪ್ರತಿಭಟನೆ ಉದ್ದೇಶಿಸಿ CPIM ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಜೆ.ಬಾಲಕೃಷ್ಣ ಶೆಟ್ಟಿ, ಸುಕುಮಾರ್ ಮಾತನಾಡಿ, ರಾಜ್ಯ ಸರಕಾರದ ನೀತಿಗಳನ್ನು ಖಂಡಿಸಿದರು.
ಪ್ರತಿಭಟನೆಯಲ್ಲಿ CPIM ಜಿಲ್ಲಾ ನಾಯಕರಾದ ಸದಾಶಿವದಾಸ್, ಜಯಂತ ನಾಯಕ್,ಬಶೀರ್ ಪಂಜಿಮೊಗರು, ಸಂತೋಷ್ ಬಜಾಲ್,ಯೋಗೀಶ್ ಜಪ್ಪಿನಮೊಗರು, ಬಿ.ಕೆ.ಇಮ್ತಿಯಾಜ್,ಜಯಂತಿ ಶೆಟ್ಟಿ,CITU ಜಿಲ್ಲಾ ನಾಯಕರಾದ ರಾದಾ ಮೂಡಬಿದ್ರೆ, ಗಿರಿಜಾ, ರವಿಚಂದ್ರ ಕೊಂಚಾಡಿ, ಮಹಮ್ಮದ್ ಮುಸ್ತಫಾ, ಸಂತೋಷ್ ಆರ್.ಎಸ್,ನಾಗೇಶ್ ಕೋಟ್ಯಾನ್, DYFI ನಾಯಕ ನವೀನ್ ಕೊಂಚಾಡಿ, ದಯಾನಂದ ಶೆಟ್ಟಿ, ಮನೋಜ್ ವಾಮಂಜೂರು, ನೌಷಾದ್ ಬೆಂಗರೆ, ದಲಿತ ಹಕ್ಕುಗಳ ಸಮಿತಿ ಮುಖಂಡರಾದ ತಿಮ್ಮಯ್ಯ ಕೊಂಚಾಡಿ, ಕ್ರಷ್ಣ ತಣ್ಷೀರುಬಾವಿ, ಜನವಾದಿ ಮಹಿಳಾ ಸಂಘಟನೆಯ ನಾಯಕರಾದ ಭಾರತಿ ಬೋಳಾರ, ಪ್ರಮೀಳಾ ಶಕ್ತಿನಗರ, ಖ್ಯಾತ ಕಲಾವಿದ ಕೀತು ಫುರ್ಟಾಡೋ, ಸಾಮಾಜಿಕ ಚಿಂತಕರಾದ ಪ್ರಮೀಳಾ ದೇವಾಡಿಗ, ಜೆರಾಲ್ಡ್ ಟವರ್, ಉದಯ ಆಚಾರ್ಯ, SFI ನಾಯಕರಾದ ಮಾಧುರಿ ಬೋಳಾರ, ಸಮುದಾಯ ಸಂಘಟನೆಯ ವಾಸುದೇವ ಉಚ್ಚಿಲ್ ಮುಂತಾದವರು ಭಾಗವಹಿಸಿದ್ದರು.



