ಬೆಂಗಳೂರು: ವಕ್ಫ್ ಮಂಡಳಿ ರದ್ದಾಗಬೇಕು, ರೈತರ ಜಮೀನಿನ ಪಹಣಿಯಲ್ಲಿ ಬರೆದ ವಕ್ಫ್ ಹೆಸರು ತೆಗೆಸಿಹಾಕಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
- ಮ್ಯಾಥ್ಎರಾ ಟೆಕ್ ಪ್ರೈವೇಟ್ ಲಿಮಿಟೆಡ್ ನಿಂದ ಪದವೀಧರರಿಗೆ ಉದ್ಯೋಗಾವಕಾಶ
ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಶ್ವವಿಖ್ಯಾತ ಎಂಜಿನಿಯರ್ ಸರ್ ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯ ಆವರಣವನ್ನು ವಕ್ಫ್ ಮಂಡಳಿ ಕಬಳಿಸಿದೆ ಎಂದರು.
ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವಕ್ಫ್ ಮಂಡಳಿಗೆ ನ್ಯಾಯಾಂಗದ ಅಧಿಕಾರ ನೀಡಿದೆ. ಇದನ್ನು ಬಳಸಿಕೊಂಡು ವಕ್ಫ್ ಮಂಡಳಿ ರೈತರ ಜಮೀನು ನುಂಗುತ್ತಿದೆ. ಕಾಂಗ್ರೆಸ್ ಅಧಿಕಾರ ಪಡೆಯುವ ರಾಜ್ಯಗಳಲ್ಲಿ ಮಿನಿ ಪಾಕಿಸ್ತಾನ ನಿರ್ಮಿಸುತ್ತಿದೆ. ವಿಧಾನಸೌಧ, ಲಾಲ್ಬಾಗ್ ಕೂಡ ನಮ್ಮದು ಎಂದು ಇವರು ಹೇಳುತ್ತಾರೆ ಎಂದರು.
ಬೌರಿಂಗ್ ಆಸ್ಪತ್ರೆಯದ್ದು 2 ಎಕರೆ ಜಮೀನು ಇದ್ದು, ಅದನ್ನು ಕೂಡ ವಕ್ಫ್ ಮಂಡಳಿ ಕಬಳಿಕೆ ಮಾಡಿತ್ತು. ನಾನು ಸಚಿವನಾಗಿದ್ದಾಗ ಅದರ ದಾಖಲೆಗಳನ್ನು ತರಿಸಿ ನೋಡಿದರೆ ಯಾವುದೋ ಹಳೆ ದಾಖಲೆಗಳನ್ನು ತಂದರು. ಬಳಿಕ ಹೋರಾಟ ಮಾಡಿ ಆಸ್ತಿ ಉಳಿಸಿದೆ. ವಕ್ಫ್ ಮಂಡಳಿ ತಿಮಿಂಗಿಲದಂತೆ ಬಡವರ ಜಮೀನು ನುಂಗುತ್ತಿದೆ. ರೈತರು ಕಂಗಾಲಾಗಿ ತಮ್ಮ ಆಸ್ತಿಗಳ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮುಸ್ಲಿಮರಿಗೆ ಎರಡು ಕೊಂಬು ಬಂದಿದೆ. ಸಿದ್ದರಾಮಯ್ಯ ಎಂದರೆ ಅಹಿಂದ ನಾಯಕ ಅಲ್ಲ. ಅವರೀಗ ಮುಸ್ಲಿಮರ ಚಾಂಪಿಯನ್ ಆಗಲು ಮುಂದಾಗಿದ್ದಾರೆ. ಲವ್ ಜಿಹಾದ್, ಲ್ಯಾಂಡ್ ಜಿಹಾದ್ ಬಳಿಕ ರೇಷನ್ ಕಾರ್ಡ್ ಜಿಹಾದ್ ಆರಂಭಿಸಿದ್ದಾರೆ. 45 ವರ್ಷದಿಂದ ರೇಷನ್ ಕಾರ್ಡ್ ಹೊಂದಿದ್ದ ವೃದ್ಧೆಯೊಬ್ಬರು ಈಗ ಕಾರ್ಡ್ ಕಳೆದುಕೊಂಡಿದ್ದಾರೆ. ಆದರೆ ಸರ್ಕಾರ ಮರಳಿ ಅರ್ಜಿ ಹಾಕಿ ಎನ್ನುತ್ತಿದೆ. ಸರ್ಕಾರ ತಪ್ಪು ಮಾಡಿದರೆ, ಜನರು ಲಂಚ ಕೊಟ್ಟು ರೇಷನ್ ಕಾರ್ಡ್ ಮಾಡಿಸಿಕೊಳ್ಳಬೇಕಿದೆ ಎಂದರು.
ಜಯನಗರ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಇಲ್ಲ. ಅದಕ್ಕಾಗಿ ಪ್ರತಿಯೊಂದಕ್ಕೂ ಶುಲ್ಕ ಏರಿಕೆ ಮಾಡಲಾಗಿದೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಸಿಎಂ ಸಿದ್ದರಾಮಯ್ಯ ತೆರಿಗೆ ವಿಧಿಸದ ವಸ್ತುಗಳೇ ಇಲ್ಲ. ಹರಿಯುವ ನದಿಗೂ ತೆರಿಗೆ ವಿಧಿಸಿದ್ದಾರೆ. ಇನ್ನು ಗಾಳಿಗೂ ತೆರಿಗೆ ವಿಧಿಸಬಹುದು. ಸರ್ಕಾರ ಪಾಪರ್ ಆಗಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಡ ಎಂದರು.
ಸಿಎಂ ಸಿದ್ದರಾಮಯ್ಯ ಬಡವರ ಪರ ಎಂದು ಹೇಳಿಕೊಳ್ಳುತ್ತಾರೆ. ಹಾಲು ಹಾಗೂ ಆಲ್ಕೋಹಾಲ್ ದರ ಏರಿಕೆ, ಮುದ್ರಾಂಕ ಶುಲ್ಕ ಏರಿಕೆ, ಅನ್ನ ಪಡೆಯುವವರಿಗೆ ಕನ್ನ, ಔಷಧಿಗೆ ಕನ್ನ ಮೊದಲಾದ ಕ್ರಮಗಳ ಮೂಲಕ ಸಿಎಂ ಸಿದ್ದರಾಮಯ್ಯನವರು ಕನ್ನರಾಮಯ್ಯ ಎಂದು ಹೆಸರಾಗಿದ್ದಾರೆ ಎಂದರು.
ಮಂತ್ರಾಲಯ, ವಿಧಾನಸೌಧ, ವಿಶ್ವೇಶ್ವರಯ್ಯನವರ ಶಾಲೆ, ಬಡವರ ಭೂಮಿ ಉಳಿಯಲು ಸೂಪರ್ಮ್ಯಾನ್ ಆಗಿ ಪ್ರಧಾನಿ ನರೇಂದ್ರ ಮೋದಿ ಬರಲಿದ್ದಾರೆ. ಅವರು ತರಲಿರುವ ತಿದ್ದುಪಡಿ ಮಸೂದೆಯಿಂದ ಎಲ್ಲವೂ ನಿಯಂತ್ರಣಕ್ಕೆ ಬರಲಿದೆ. ಅಲ್ಲಿಯವರೆಗೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಇರುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದರು.



