ಸ್ವಾತಂತ್ರ್ಯ ಯೋಧರ ಮನೆಗಳಿಗೆ ತೆರಳಿ ಆಹ್ವಾನ ನೀಡಿದ ಸಚಿವ ಎಚ್.ಕೆ.ಪಾಟೀಲ

1 year ago

ಡಿ. 27 ರಂದು ಮಹಾತ್ಮಾ ಗಾಂಧೀಜಿ ಪುತ್ಥಳಿ ಅನಾವರಣ ಸಮಾರಂಭ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ 39ನೆಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮಾಚರಣೆ ದಿನದಿಂದ ದಿನಕ್ಕೆ ಮೆರಗು ಪಡೆಯುತ್ತಿದೆ. ಶತಮಾನೋತ್ಸವದ ಸಮಿತಿ ಅಧ್ಯಕ್ಷ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ ಪಾಟೀಲ ಸ್ವಾತಂತ್ರ್ಯ ಯೋಧರ ಮನೆಗಳಿಗೆ ತೆರಳಿ ಸುವರ್ಣ ಸೌಧದ ಮುಂದೆ ಪ್ರತಿಷ್ಠಾಪಿಸಲಾಗಿರುವ ಮಹಾತ್ಮ ಗಾಂಧೀ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಕುಟುಂಬ ಸಮೇತ ಆಗಮಿಸಲು ಆಹ್ವಾನ ನೀಡಿದರು.

ರಾಮತೀರ್ಥನಗರದಲ್ಲಿ ಇರುವ ಅಣ್ಣು ಗುರೂಜಿ ಅವರ ಮನೆಗೆ, ಹನುಮಾನ ನಗರದಲ್ಲಿರುವ ವಿಠ್ಠಲರಾವ್ ಯಾಳಗಿ ಹಾಗೂ 1924ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ರೂವಾರಿ ಗಂಗಾಧರರಾವ್ ದೇಶಪಾಂಡೆ ಅವರ ಮನೆಗಳಿಗೆ ಖುದ್ದಾಗಿ ಭೇಟಿ ನೀಡಿ ಆಹ್ವಾನ ನೀಡಿದರು.

ಕುಟುಂಬದ ಸದಸ್ಯರಿಂದ ಎಚ್.ಕೆ.ಪಾಟೀಲ ಅವರು ವಿವರವಾದ ಮಾಹಿತಿ ಪಡೆದುಕೊಂಡರು. ಅಶ್ಪೃಶ್ಯತೆ ನಿವಾರಣೆಗೆ ಗಾಂಧೀಜಿ ಕರೆ ಕೊಟ್ಟ ಕಾಲಘಟ್ಟದಲ್ಲಿ ಬೆಳಗಾವಿ ಅಧಿವೇಶನ ನಡೆಯತ್ತಿತ್ತು. ನಮ್ಮ ಮನೆತನದವರು ಸ್ವಯಂ ಪ್ರೇರಿತರಾಗಿ ಭಂಗಿ ಬಳಿಯಲು ಮುಂದಾದರು. ಹೀಗಾಗಿ ಅವರು ಮುಂಚೂಣಿಯಲ್ಲಿ ಇರಲ್ಲಿಲ್ಲ. ಇದನ್ನು ಈಗ ಊಹಿಸಿಕೊಳ್ಳವುದೂ ಕಷ್ಟ ಎಂದು ಅಣ್ಣೂ ಗುರೂಜೀ ಅವರ ಮೊಮ್ಮಗ ಮಹೇಶ ದೇಶಪಾಂಡೆ ಹೇಳಿದರು.

ನಮ್ಮೂರು ಹಾಗೂ ಸುತ್ತಮುತ್ತಲಿನ ಊರುಗಳ ಜನ ಗಾಂಧೀಜೀಯಿಂದ ಪ್ರೇರಿತರಾಗಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಧುಮುಕಿದರು ಎಂದು ನಮ್ಮಜ್ಜ ಹೇಳುತ್ತಿದ್ದರು. ನಾವೆಲ್ಲ ಅಜ್ಜನ ನೆರಳಿನಿಂದಲೇ ಬೆಳೆದವರು. ನಮ್ಮಜ್ಜ ತಲಾಠಿ ನೌಕರಿ ಬಿಟ್ಟು ಸ್ವಾತಂತ್ರ್ಯ ಚಳುವಳಿಗೆ ಧುಮುಕಿದರು. ನಾನು ಈ ಎಲ್ಲ ಮಾಹಿತಿ, ದಾಖಲೆ ಸಂಗ್ರಹಿಸಿರುವೆ ಎಂದರು.

ಇದು ಪುಸ್ತಕ ರೂಪದಲ್ಲಿ ಬರಬೇಕೆಂದು ಸಚಿವರು ದೇಶಪಾಂಡೆ ಅವರಿಗೆ ಸಲಹೆ ಮಾಡಿದರು. ಬೆಳಗಾವಿ ಅಧಿವೇಶನ ಕುರಿತು ಅಣ್ಣು ಗುರೂಜಿ ಬರೆದ ಕಿರು ಪುಸ್ತಕ ಮರು ಮುದ್ರಿಸಲು ಆದೇಶ ನೀಡಿದರು. ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಹಾಗೂ ಹೋರಾಡಿದ ಯೋಧರನ್ನು ಮರೆಯಬಾರದು. ನೈಜವಾಗಿ ದುಡಿದವರ ಸೇವೆ ಸ್ಮರಿಸಬೇಕು. ಇದು ನಮ್ಮ ಕರ್ತವ್ಯ ಎಂದು ಎಚ್.ಕೆ.ಪಾಟೀಲ ಹೇಳಿದರು.

ಒಂದೇ ಕುಟುಂಬ 16 ಜನರ ಜೈಲುವಾಸ: ನಮ್ಮ ಮನೆಯಲ್ಲಿ 16 ಜನ ಜೈಲು ವಾಸ ಅನುಭವಿಸಿದ್ದಾರೆ. 13 ಜನ ಸ್ವಾತಂತ್ರ್ಯಕ್ಕಾಗಿ 3 ಜನ ಗೋವಾ ವಿಮೋಚನೆಗಾಗಿ ಹೋರಾಡಿದ್ದಾರೆ. ಗಾಂಧೀಜಿ ಜೊತೆ ನಮ್ಮ ತಂದೆ ನಿಕಟ ಸಂಪರ್ಕ ಹೊಂದಿದ್ದರು. ಚಿಕ್ಕಪ್ಪ ಬೆಳಗಾವಿಯಲ್ಲಿ ಅಧಿವೇಶನವಾಗಬೇಕೆಂದು ಬಯಸಿದ್ದರು ಆದರೆ 1923ರಲ್ಲಿ ತೀರಿಕೊಂಡರು. ಲೋಕಮಾನ್ಯ ಟಿಳಕರಿಂದ ಸ್ಪೂರ್ತಿ ಪಡೆದಿದ್ದರು. ಗಾಂಧೀಜಿ ಬೆಳಗಾವಿಗೆ ಭೇಟಿ ಕೊಟ್ಟಾಗಲೆಲ್ಲಾ ನಮ್ಮ ಮನೆತನ ಸೇವೆ ಸಲ್ಲಿಸಿದೆ ಎಂದು ವಿಠ್ಹಲರಾವ ಯಾಳಗಿ ಅವರು ಮೆಲಕು ಹಾಕಿದರು.

1942ರಲ್ಲಿ ನಾನು ನಮ್ಮ ತಂದೆ, ನಮ್ಮ ಕಾಕಾ ಎಲ್ಲರನ್ನೂ ಬಂಧಿಸಿ ಜೈಲಿಗೆ ಹಾಕಿದರು. ಬಾಂಬ್ ತಯಾರಿಸುವುದು, ಪೊಲೀಸ್ ಠಾಣೆಗೆ ಮುತ್ತಿಗೆ ಹಾಕುವುದು, ಚಾವಡಿ ಸುಡುತ್ತಿದ್ದೆವು. ಇದಕ್ಕಾಗಿ ನಮ್ಮನ್ನು ಜೈಲಿಗೆ ಹಾಕಿದರು. 1924ರಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನ ಮಾಡಲು ಅಂದು ಗಂಗಾಧರಾವ ದೇಶಪಾಂಡೆ 72 ಸಾವಿರ ರೂ. ಸಂಗ್ರಹಿಸಿದರು. ಅಧಿವೇಶನಕ್ಕೆ ತಗಲುವ ಖರ್ಚನ್ನು ಭರಿಸಲು ಮುಂದಾದರು. ಹುಬ್ಬಳಿಯಲ್ಲಿ ಜರುಗಿದ ಸಭೆಯಲ್ಲಿ ಈ ವಿಷಯವನ್ನು ಮತಕ್ಕೆ ಹಾಕಿದಾಗ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಹೆಚ್ಚು ಮತಗಳು ಬಂದವು. ಹೀಗಾಗಿ ಬೆಳಗಾವಿಯಲ್ಲಿ ಅಧಿವೇಶನ ನಡೆಯಿತು ಎಂದು ಗಂಗಾಧರಾವ ದೇಶಪಾಂಡೆ ಅವರ ಮೊಮ್ಮಗ ರವೀಂದ್ರ ದೇಶಪಾಂಡೆ ಹೇಳಿದರು.

ಸರ್ಕಾರ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸೇನಾನಿಗಳನ್ನು ಸ್ಮರಿಸುತ್ತಿರುವುದು ನಮಗೆಲ್ಲಾ ಸಂತಸ ತಂದಿದೆ ಸರ್ಕಾರಕ್ಕೆ ಸ್ವಾತಂತ್ರ್ಯ ಯೋಧರ ಕುಂಟುಬದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುವೆ ಎಂದರು.

ಸ್ವಾತಂತ್ರ್ಯ ಯೋಧರ ಕುಟುಂಬದ ಸದಸ್ಯರು ಮಹಾತ್ಮಾ ಗಾಂಧೀಜಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಲು ಸರ್ಕಾರದ ಪರವಾಗಿ ಸಚಿವರು ಹೆಚ್. ಕೆ. ಪಾಟೀಲರು ಆಹ್ವಾನ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ನೀಡಿದ ಭೇಟಿ ಬಗ್ಗೆ ಸಚಿವರು ಸಂತಸ ವ್ಯಕ್ತಪಡಿಸಿದರು. ಈ ಕುಟುಂಬದ ಸದಸ್ಯರ ಜೊತೆಗೆ ಕೆಲ ಕ್ಷಣಗಳನ್ನು ಕಳೆದಿರುವುದು ಸಂತೋಷದ ಹೆಮ್ಮೆಯ ನೆಮ್ಮದಿಯ ಭಾವ ಮೂಡಿಸಿತು ಎಂದರು.

ಸುವರ್ಣ ಸೌಧಕ್ಕೆ ಭೇಟಿ- ಸಿದ್ಧತೆ ಪರಿಶೀಲನೆ: ನಂತರ ಸಚಿವ ಎಚ್.ಕೆ.ಪಾಟೀಲರು ಸುವರ್ಣಸೌಧಕ್ಕೆ ತೆರಳಿ ಮಹಾತ್ಮಾ ಗಾಂಧಿ ಪುತ್ಥಳಿ ಅನಾವರಣ ಸಿದ್ಧತೆಯನ್ನು ಪರಿಶೀಲಿಸಿದರು.  ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮತ್ತಿತರು ಹಾಜರಿದ್ದರು.

Leave a Reply