ಕರ್ನಾಟಕದ ಜನರೇ ಬಿಜೆಪಿ ಟಾರ್ಗೆಟ್: ರಣದೀಪ್ ಸಿಂಗ್ ಸುರ್ಜೇವಾಲ

1 year ago

ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ಯಾವುದೇ ರೀತಿಯ ಗೊಂದಲಗಳು ಇಲ್ಲ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಉತ್ತಮ ಸಮನ್ವಯತೆ ಇದ್ದು ಸರ್ಕಾರ ಜನಪರವಾದ ಆಡಳಿತ ನೀಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಕುರ್ಚಿಗಾಗಿ ಜಗಳ ನಡೆದಿದೆ ಎಂಬುದು ಬಿಜೆಪಿ ನಾಯಕರು ಆರೋಪ ಮಾಡುತ್ತಿರುವುದರಲ್ಲಿ ಹುರುಳಿಲ್ಲ. ಬಿಜೆಪಿಯಲ್ಲೇ ಕಿತ್ತಾಟ ನಡೆದಿದೆ. ಅವರ ವೈಫಲ್ಯವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.

ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಇದ್ದಾರೆ. ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಭದ್ರ ಸರ್ಕಾರದ ಬಗ್ಗೆ ನೀವು ಪ್ರಶ್ನೆ ಕೇಳುವುದು ಸರಿಯಲ್ಲ. ನಮ್ಮ ಹೈಕಮಾಂಡ್ ಕೂಡ ಸಮರ್ಥ ನಿರ್ಧಾರ ಕೈಗೊಳ್ಳುತ್ತಿದೆ ಎಂದರು. ಈ ಮೂಲಕ ನಾಯಕತ್ವ ಬದಲಾವಣೆ ಚರ್ಚೆಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ಕಾಂಗ್ರೆಸ್ ನಲ್ಲಿ ಎಲ್ಲರೂ ಒಟ್ಟಾಗಿದ್ದಾರೆ. ಗ್ಯಾರಂಟಿಗಳ ಮೂಲಕ ಸರ್ಕಾರ ಜನಪರವಾದ ಆಡಳಿತ ನಡೆಸುತ್ತಿದೆ ಆದರೆ ಪ್ರಮುಖ ಪ್ರತಿ ಪಕ್ಷ ಬಿಜೆಪಿಯಲ್ಲೇ ಬಣ ಬಡಿದಾಟ ಜೋರಾಗಿದೆ. ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧವೇ ಬಾಯಿಗೆ ಬಂದ ಹಾಗೆ ಟೀಕೆ ಮಾಡುತ್ತಿದ್ದಾರೆ. ಅವರಲ್ಲೇ ಕಿತ್ತಾಟ ಇದೆ. ಅವರ ಕಿತ್ತಾಟವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಪಕ್ಷದಲ್ಲಿ ಕಿತ್ತಾಟ ಇದೆ ಎಂದೆಲ್ಲಾ ಆರೋಪ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಗ್ಯಾರಂಟಿಗಳನ್ನು ಹಾಳು ಮಾಡಲು ಕತೆಗಳನ್ನು ಬಿಜೆಪಿ ಹರಿಯಬಿಡುತ್ತಿದೆ. ಅವರು ಸಿದ್ಧರಾಮಯ್ಯ, ಡಿ.ಕೆ. ಶಿವಕುಮಾರ್ ಅಥವಾ ಕಾಂಗ್ರೆಸ್ ಪಕ್ಷವನ್ನುಟಾರ್ಗೆಟ್ ಮಾಡುತ್ತಿಲ್ಲ. ಕರ್ನಾಟಕದ ಜನರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದರು.

Leave a Reply