ಬೆಳಗಾವಿ ದೇಶದ ಏರೋಸ್ಪೇಸ್  ಕೇಂದ್ರವಾಗಿ ಹೊರಹೊಮ್ಮುತ್ತಿದೆ: ಅರವಿಂದ್ ಮೆಳ್ಳಿಗೇರಿ

1 year ago

ಬೆಂಗಳೂರು: ಬೆಳಗಾವಿ ದೇಶದ ಏರೋಸ್ಪೇಸ್  ಕೇಂದ್ರವಾಗಿ ಹೊರಹೊಮ್ಮುತ್ತಿದೆ ಎಂದು ಏಕಸ್ ಕಂಪನಿ ಸಿಇಒ ಅರವಿಂದ್ ಮೆಳ್ಳಿಗೇರಿ ರಾಜ್ಯ ಸರ್ಕಾರ ಈ ವಲಯದ ಅಭಿವೃದ್ಧಿಗೆ ಇನ್ನೂ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ತಿಳಿಸಿದ್ದಾರೆ.

ಬೆಳಗಾವಿಯ ಏರೋಸ್ಪೇಸ್ ಕೇಂದ್ರ ಈ ವಲಯದ ಶೇಕಡ 70ರಷ್ಟು ಬಿಡಿಭಾಗಗಳನ್ನು ಪೂರೈಸುತ್ತಿದೆ. ಇವುಗಳ ಗುಣಮಟ್ಟವು ಯಾವುದೇ ಪಾಶ್ಚಾತ್ಯ ರಾಷ್ಟ್ರಗಳಲ್ಲಿ ತಯಾರಾಗುವ ಸಾಧನಗಳಿಗಿಂತ ಕಿಂಚಿತ್ತೂ ಕಡಿಮೆ ಇಲ್ಲ  ಎಂದರು.

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ  ನಡೆದ `ಜಗತ್ತಿನ ಅಗತ್ಯಗಳಿಗೆ ಮೇಕ್ ಇನ್ ಇಂಡಿಯಾ ಉಪಕ್ರಮ’ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಮೂಲಸೌಕರ್ಯ ಅಭಿವೃದ್ಧಿಗೆ ಇನ್ನಷ್ಟು ಗಮನ ಹರಿಸಿದರೆ, ಇಡೀ ಜಗತ್ತು ಬೆಳಗಾವಿಯತ್ತ ನೋಡುವ ದಿನ ದೂರವಿಲ್ಲ ಎಂದರು.

ದೇಶದಲ್ಲಿ 15 ವರ್ಷಗಳಲ್ಲಿ ಸಾಕಷ್ಟು ಸುಧಾರಣೆಯಾಗಿದ್ದು, ದ್ವಿತೀಯ ಸ್ತರದ ನಗರಗಳಿಗೂ ವಿಮಾನ ಸಂಪರ್ಕ ಸಾಧ್ಯವಾಗಿದೆ. ಏಕಸ್ ಮೂರು ಜಂಟಿ ಸಹಭಾಗಿತ್ವ ಹೊಂದಿದ್ದು, 2 ಮಿಲಿಯನ್ ಗಂಟೆಗಳಷ್ಟು ಅಗಾಧ ಉತ್ಪಾದನಾ ವ್ಯವಸ್ಥೆಯನ್ನು ರೂಪಿಸಿಕೊಂಡಿದೆ. ಚೀನಾಕ್ಕೆ ಹೋಲಿಸಿದರೆ ನಮ್ಮಲ್ಲಿ ವೆಚ್ಚ ಮೂರನೇ ಒಂದು ಭಾಗದಷ್ಟು ಕಡಿಮೆ ಇದೆ. ಈ ನಿಟ್ಟಿನಲ್ಲಿ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ 5,000 ವೃತ್ತಿಪರರು ಹಗಲಿರುಳೂ ದುಡಿಯುತ್ತಿದ್ದಾರೆ ಎಂದರು.

ಪಿಎಲ್ಐ, ಗತಿಶಕ್ತಿ, ಸ್ಟಾರ್ಟಪ್ ಇಂಡಿಯಾ, ಜಿಎಸ್ಟಿ ಮುಂತಾದ ಕ್ರಮಗಳಿಂದ ಉತ್ಪಾದನಾ ವಲಯಕ್ಕೆ ದೊಡ್ಡ ಶಕ್ತಿ ಬಂದಿದೆ. ಕೇಂದ್ರ ಮತ್ತು ರಾಜ್ಯಗಳು ಸೇರಿ ಉತ್ಪಾದನಾ ವಲಯವನ್ನು ಉತ್ತೇಜಿಸುತ್ತಿವೆ. ಕರ್ನಾಟಕ ಕೈಗಾರಿಕಾಸ್ನೇಹಿಯಾಗಿದ್ದು, ಇಲ್ಲಿ ಪೀಣ್ಯ, ದೊಡ್ಡಬಳ್ಳಾಪುರ ಮತ್ತು ಮೈಸೂರಿನಲ್ಲಿ ನಮ್ಮ ಉತ್ಪಾದನಾ ಘಟಕಗಳಿವೆ. ಬೆಂಗಳೂರಿನಲ್ಲಿರುವ ನಮ್ಮ ಆರ್ & ಡಿ ಚಟುವಟಿಕೆಗಳ ಮತ್ತು ಮೈಸೂರು ಘಟಕದ ವಿಸ್ತರಣೆ ಆಗುತ್ತಿದೆ. ನಾವು ಇಲ್ಲಿನ ಅನೇಕ ವಿಶ್ವವಿದ್ಯಾಲಯಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದು, ಮಹಿಳೆಯರಿಗೆ ಕೌಶಲ್ಯ ನೀಡುತ್ತಿದ್ದೇವೆ. ಸದ್ಯಕ್ಕೆ ನಾವಿಲ್ಲಿ 1,000 ಕೋಟಿ ರೂ. ಹೂಡಿಕೆ ಮಾಡುತ್ತಿದ್ದೇವೆ ಎಂದು ಹಿಟಾಚಿ ಎನರ್ಜಿ ಇದೇ ಗೋಷ್ಠಿಯಲ್ಲಿ ಪ್ರಕಟಿಸಿತು.

Leave a Reply