ಪಿ ಎಂ ನರೇಂದ್ರಸ್ವಾಮಿ ನೇಮಕ ವಿರುದ್ದ ಪಿಐಎಲ್

1 year ago

ಬೆಂಗಳೂರು: ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ  ಪಿ.ಎಂ.ನರೇಂದ್ರಸ್ವಾಮಿ ಅವರನ್ನು ನೇಮಕ ಮಾಡಿರುವ ಕ್ರಮಕ್ಕೆ ತಕರಾರು ಉಂಟಾಗಿದೆ.

ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿ ಸಲ್ಲಿಕೆಯಾಗಿದೆ.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾ. ಎಂ.ಐ ಅರುಣ್ ನೇತೃತ್ವದ ಪೀಠ  ರಾಜ್ಯ ಸರ್ಕಾರ ಹಾಗೂ ಪಿ ಎಂ ನರೇಂದ್ರಸ್ವಾಮಿ ಪ್ರತಿವಾದಿಗಳಿಗೆ ನೋಟಿಸ್ ಜಾರಿಮಾಡಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿಯ ಆರ್.ಆಂಜನೇಯರೆಡ್ಡಿ  ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಸುಪ್ರೀಂ ಕೋರ್ಟ್ ಮಾರ್ಗಸೂಚಿ ಉಲ್ಲಂಘಿಸಿ ನೇಮಕ ಮಾಡಲಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ. ಹೈಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ರಾಜ್ಯ ಸರ್ಕಾರ ಮತ್ತು ಶಾಸಕ ನರೇಂದ್ರ ಸ್ವಾಮಿ ಸೇರಿ ಪ್ರತಿವಾದಿಗಳಿಗೆ ಹೈ ಕೋರ್ಟ್ ವಿಭಾಗೀಯ ಪೀಠದಿಂದ ನೋಟಿಸ್ ಜಾರಿ ಮಾಡಲಾಗಿದೆ.

ಮಂಡಳಿ ಅಧ್ಯಕ್ಷರಾಗಿ ನರೇಂದ್ರಸ್ವಾಮಿ ಅವರನ್ನು ನೇಮಕ ಮಾಡಿರುವುದು ಸರಿಯಲ್ಲ. ಈ ನೇಮಕಾತಿ ಸಮಯದಲ್ಲಿ ಎಲ್ಲಾ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಹೀಗಾಗಿ ನೇಮಕಾತಿ ಆದೇಶವನ್ನು ರದ್ದುಪಡಿಸಲು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ರಾಜ್ಯಗಳ ಮಾಲಿನ್ಯ ನಿಯಂತ್ರಣ ಮಂಡಳಿಗಳ ಅಧ್ಯಕ್ಷರ ನೇಮಕ ಸಂಬಂಧ ಸುಪ್ರೀಂ ಕೋರ್ಟ್ ಸ್ಪಷ್ಟ ಮಾರ್ಗಸೂಚಿ ಹೊರಡಿಸಿದೆ. ಈ ಮಾರ್ಗಸೂಚಿಗಳ ಆಧಾರದಲ್ಲಿಯೇ ನೇಮಕಾತಿ ನಡೆಯಬೇಕು. ಆದರೆ ರಾಜ್ಯ ಸರ್ಕಾರ ಆ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿದೆ. ಅಲ್ಲದೆ, ಪರಿಸರ ವಿಜ್ಞಾನ ಸೇರಿದಂತೆ ಯಾವುದೇ ನಿರ್ದಿಷ್ಟ ಅರ್ಹತೆ ಇಲ್ಲದವರನ್ನು ರಾಜಕೀಯ ಕಾರಣಗಳಿಗೆ ನೇಮಕ ಮಾಡಲಾಗಿದೆ. ಹಾಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಅಧ್ಯಕ್ಷರಾಗಿ ಪಿ.ಎಂ. ನರೇಂದ್ರಸ್ವಾಮಿ ನೇಮಕ ಮಾಡಿ ಹೊರಡಿಸಿರುವ ಆದೇಶ ರದ್ದುಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

Leave a Reply