ರನ್ಯಾ ರಾವ್ ಪ್ರಕರಣ: ಕಾಂಗ್ರೆಸ್ ಸಚಿವರಿಗೆ ಆತಂಕ

1 year ago

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ  ಸಾಗಣೆ ಸಂಬಂಧ ಬಂಧಿತರಾಗಿರುವ ಮಾಣಿಕ್ಯ ಸಿನಿಮಾದ ನಟಿ ಡಿಜಿಪಿ ರಾಮಚಂದ್ರರಾವ್ ಅವರ ಮಲಮಗಳು ರನ್ಯಾ ರಾವ್ ಅವರಿಂದ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಇಬ್ಬರು ಸಚಿವರು ಸೇರಿ ಹಲವು ರಾಜಕಾರಣಿಗಳಿಗೆ ಭೀತಿ ಶುರುವಾಗಿದೆ.

ರನ್ಯಾ ರಾವ್ ಸಿಕ್ಕಿಬಿದ್ದಿರುವ ಬಹು ಕೋಟಿ ಮೌಲ್ಯದ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಹವಾಲ ನಂಟು ಕೂಡ ಬೆಸೆದುಕೊಂಡಿರುವುದು ಪ್ರಕರಣದ ತೀವ್ರತೆ ಹೆಚ್ಚಿಸಿದೆ. 

ಹಲವು ಆಯಾಮಗಳಲ್ಲಿ ಸಿಲುಕಿಕೊಂಡಿರುವ ಈ ಪ್ರಕರಣದ ಬಗ್ಗೆ ಕೇಂದ್ರೀಯ ತನಿಖಾ ಸಂಸ್ಥೆಗಳು ತೀವ್ರ ಆಸಕ್ತಿ ವಹಿಸಿ ಪರಿಶೀಲನೆ ನಡೆಸುತ್ತಿವೆ. ಈ ನಡುವೆ ರನ್ಯಾ ಅವರನ್ನು ಗುಪ್ತಚರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿರುವ ಬೆನ್ನಲ್ಲೇ ಆಕೆಯ ಜತೆಗೆ ಸಂಪರ್ಕದಲ್ಲಿದ್ದ ರಾಜಕಾರಣಿಗಳಲ್ಲಿ ಕೂಡ ನಡುಕ ಶುರುವಾಗಿದೆ.

ರನ್ಯಾ ಜೊತೆ ಸಂಪರ್ಕದಲ್ಲಿದ್ದ ರಾಜಕಾರಣಿಗಳು, ಚಿನ್ನಾಭರಣ ವ್ಯಾಪಾರಿಗಳು, ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಮಾಹಿತಿಯನ್ನು ಡಿಆರ್‌ಐ ಅಧಿಕಾರಿಗಳು ಸಂಗ್ರಹಿಸಿದ್ದಾರೆ.

ರನ್ಯಾ ರಾವ್ ವಿಚಾರಣೆಯಲ್ಲಿ ಆಕೆಯ ಸಂಪರ್ಕದಲ್ಲಿರುವವರ ಮಾಹಿತಿ ಪಡೆಯಲಾಗಿದೆ. ಅಲ್ಲದೇ ಆಕೆಯ ಮೊಬೈಲ್ ನಲ್ಲಿ ಹೆಚ್ಚಿನ ಸಂಪರ್ಕವಿರುವವರ ವಿವರ ಪಡೆದು ಅವರ ಪಾತ್ರದ ಬಗ್ಗೆ ಡಿಆರ್‌ಐ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ. ದುಬೈನಿಂದ ಕೆಜಿ ಗಟ್ಟಲೇ ಚಿನ್ನ ಖರೀದಿಸಲು ಹಣ ಕೊಟ್ಟವರು ಯಾರೆಂದು ರನ್ಯಾ ಈವರೆಗೂ ಬಾಯ್ಬಿಟ್ಟಿಲ್ಲ. ತನ್ನನ್ನು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ತನಿಖೆಯ ಆರಂಭದಲ್ಲಿ ಹೇಳಿದ್ದ ರನ್ಯಾ, ಟ್ರ್ಯಾಪ್‌ ಮಾಡಿದವರು ಯಾರೆಂಬ ಬಗ್ಗೆ ಮಾಹಿತಿ ಕೊಟ್ಟಿಲ್ಲ.

ಈ ನಡುವೆ ಪ್ರಕರಣದ ಬಗ್ಗೆ ತನಿಖೆ ಆರಂಭಿಸಿರುವ ಸಿಬಿಐ ಅಧಿಕಾರಿಗಳು ರನ್ಯಾ ಅವರನ್ನು ವಿಚಾರಣೆ ನಡೆಸುವ ಉದ್ದೇಶಕ್ಕೆ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ರಮ್ಯಾ ರಾವ್ ಪ್ರಕರಣ: ಬಹುಕೋಟಿ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣ ವಿಧಾನಸಭೆಯಲ್ಲೂ ಪ್ರತಿದ್ವನಿಸಿತು. ಶೂನ್ಯ ವೇಳೆಯಲ್ಲಿ ಬಿಜೆಪಿಯ ಸುನಿಲ್ ಕುಮಾರ್ ಮಾಡಿದ ಪ್ರಸ್ತಾವನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರ ನಟಿ ರನ್ಯಾ ರಾವ್ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ ಎಂದರು.

ಚಿನ್ನ ಕಳ್ಳ ಸಾಗಾಣಿಕೆ ವರದಿಯಾಗಿರುವುದು ವಿಮಾನ ನಿಲ್ದಾಣದಲ್ಲಿ, ಕೇಂದ್ರ ಕಂದಾಯ ಗುಪ್ತಚರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಅವರು ಸಂಪೂರ್ಣ ಕೇಂದ್ರ ಸರ್ಕಾರಕ್ಕೆ ವರದಿ ಮಾಡಿಕೊಳ್ಳುತ್ತಾರೆ. ವಿಮಾನ ನಿಲ್ದಾಣ ಕೂಡ ಕೇಂದ್ರ ಸರ್ಕಾರ ವ್ಯಾಪ್ತಿಯ ಒಳಗಿದೆ. ಈ ಪ್ರಕರಣದಲ್ಲಿ ರಾಜ್ಯದ ಪೊಲೀಸರಿಗಾಗಲಿ, ಸರ್ಕಾರಕ್ಕಾಗಲಿ ಯಾವುದೇ ಮಾಹಿತಿ ಇಲ್ಲ. ಹಾಗಂತ ನಾವು ಕಳ್ಳ ಸಾಗಾಣಿಕೆಯಾಗಿಲ್ಲ ಎಂದು ಹೇಳುತ್ತಿಲ್ಲ ಎಂದರು.

ಈ ಮೊದಲು ಸಿಬಿಐ ತನಿಖೆ ನಡೆಸುವುದಾದರೇ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡಲಾಗುತ್ತಿತ್ತು. ರನ್ಯಾ ಪ್ರಕರಣದಲ್ಲಿ ನಮ್ಮ ಅನುಮತಿಯನ್ನು ಕೇಳಿಲ್ಲ, ನಾವು ಕೂಡ ಮಾಧ್ಯಮಗಳಲ್ಲಿ ಓದಿ ತಿಳಿದುಕೊಂಡಿದ್ದೇವೆ. ಆಕೆ ಪೊಲೀಸ್ ವಾಹನದಲ್ಲಿ ಓಡಾಡಿರುವ ಬಗ್ಗೆ ನಮ್ಮ ಹಂತದಲ್ಲಿ ನಡೆಯಬೇಕಾದ ತನಿಖೆಯನ್ನು ಮಾಡುತ್ತೇವೆ. ಕೇಂದ್ರ ಸರ್ಕಾರದ ತನಿಖೆ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದರು.

Leave a Reply