ನಾಯಕತ್ವ ಬದಲಾವಣೆ ಕುರಿತಂತೆ ಶಾಸಕರ ಅಭಿಪ್ರಾಯಗಳನ್ನು ಕೇಳಿಲ್ಲ: ಸುರ್ಜೇವಾಲ

10 months ago

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಂತೆ ಕಾಂಗ್ರೆಸ್ ನಲ್ಲಿ ಚರ್ಚೆ ತೀವ್ರಗೊಂಡಿರುವ ನಡುವೆಯೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಶಾಸಕರ ಅಹವಾಲು ಆಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಭೇಟಿ ಸಮಯದಲ್ಲಿ ಯಾವುದೇ ಶಾಸಕರು ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಸಿಲ್ಲ. ಒಂದು ವೇಳೆ ಯಾವುದೇ ಶಾಸಕರು ಈ ಬಗ್ಗೆ ಮಾತನಾಡಲು ಇಚ್ಛೆ ವ್ಯಕ್ತಪಡಿಸಿದರೆ ಅದಕ್ಕೆ ಪಕ್ಷದ ವೇದಿಕೆಯಲ್ಲಿ ಅವಕಾಶ ಕಲ್ಪಿಸಿಕೊಡಲಾಗುವುದು ಎಂದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಮುಂದುವರೆದಿದ್ದಾರೆ. ಈ ಇಬ್ಬರಲ್ಲೂ ಯಾವುದೇ ರೀತಿಯ ಗೊಂದಲ ಮತ್ತು ಭಿನ್ನಾಭಿಪ್ರಾಯಗಳು ಇಲ್ಲ ಎಂದರು.

ನಾಯಕತ್ವ ಬದಲಾವಣೆ ಕುರಿತಂತೆ ತಾವು ಶಾಸಕರ ಅಭಿಪ್ರಾಯಗಳನ್ನು ಕೇಳಿಲ್ಲ. ಅದಕ್ಕಾಗಿ ತಾವು ಬಂದಿಲ್ಲ ಎಂದು ಸ್ಪಷ್ಟಪಡಿಸಿದ ಅವರು ಅಂತಹ ಯಾವುದೇ ಚರ್ಚೆ ಈಗ ನಡೆದಿಲ್ಲ ಎಂದರು.

ರಾಜ್ಯದಲ್ಲಿ ಒಂದಕ್ಕಿಂತ ಹೆಚ್ಚು ಅಧಿಕಾರ ಕೇಂದ್ರಗಳಿವೆ ಎಂಬ ಸಚಿವ ರಾಜಣ್ಣ ಅವರ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ಅವರು, ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಸರ್ಕಾರದ ಮುಖ್ಯಸ್ಥರು. ಅಲ್ಲಿ ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಅವರ ಅಧೀನದಲ್ಲಿ ಇರುತ್ತಾರೆ. ಹಾಗೆಯೇ ಪಕ್ಷ ವ್ಯವಸ್ಥೆಯಲ್ಲಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಪ್ರಮುಖ ರಾಗಿರುತ್ತಾರೆ. ಇಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷರು ಹೇಳಿದಂತೆ ಕೇಳುತ್ತಾರೆ. ಹೀಗಾಗಿ ಅಧಿಕಾರ ಕೇಂದ್ರ ಸಂಸ್ಥೆಗಳು ಇರುವುದು ಸತ್ಯ ಎಂದರು.

ನಾಯಕತ್ವ ಬದಲಾವಣೆ ಕುರಿತಂತೆ ಯಾವುದೇ ಚರ್ಚೆಗಳು ನಡೆದಿಲ್ಲ. ಹೀಗಾಗಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಮುಂದುವರೆಯಲಿದ್ದಾರೆ ಎಂದರು.

Leave a Reply