ರಾಜ್ಯದಲ್ಲಿ ಯಾವುದೇ  ಜನ ಔಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ: ದಿನೇಶ್ ಗುಂಡೂರಾವ್

8 months ago

ಬೆಂಗಳೂರು: ರಾಜ್ಯದಲ್ಲಿ ಜನ ಔಷಧಿ ಕೇಂದ್ರಗಳನ್ನು ಮುಚ್ಚಲಾಗುತ್ತಿದೆ ಎಂಬ ವಿವಾದದ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ರಾಜ್ಯದಲ್ಲಿ ಯಾವುದೇ  ಜನ ಔಷಧಿ ಕೇಂದ್ರಗಳನ್ನು ಮುಚ್ಚಿಸಿಲ್ಲ. ಬದಲಾಗಿ ಸರ್ಕಾರಿ ಆಸ್ಪತ್ರೆ ಆವರಣಗಳಲ್ಲಿ ಮಾತ್ರ ನಿರ್ಬಂಧಿಸಲು ನಿರ್ಧರಿಸಲಾಗಿದೆ  ಎಂದು ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಜನಸಾಮಾನ್ಯರಿಗೆ ಉಚಿತ  ಔಷಧಿಗಳನ್ನು ನಿರಾಕರಿಸುವ ಯಾವುದೇ ಸಾಧ್ಯತೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ‌. ಅಲ್ಲದೆ, ದೇಶದಲ್ಲಿಯೇ ಕರ್ನಾಟಕದಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಔಷಧಿ ಕೇಂದ್ರಗಳಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದಲ್ಲಿ ಜನ ಔಷಧಿ ಕೇಂದ್ರಗಳನ್ನು ಮುಚ್ಚಲಾಗುತ್ತಿದೆ ಎಂಬ ಕುರಿತು ಕೇಂದ್ರ ಆರೋಗ್ಯ ಸಚಿವ ನಡ್ಡಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.

ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಗುಣಮಟ್ಟದ ಔಷಧಿಗಳು ಲಭ್ಯವಾಗುವಂತೆ ಮಾಡುವ ನಿಮ್ಮ ಕಾಳಜಿಯನ್ನು ನಾನು ಶ್ಲಾಘಿಸುತ್ತೇನೆ.‌ ಕರ್ನಾಟಕ ಸರ್ಕಾರ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಅಗತ್ಯ ಔಷಧಗಳ ಪಟ್ಟಿಯ ಪ್ರಕಾರ ಎಲ್ಲಾ ಅಗತ್ಯ ಔಷಧಿಗಳನ್ನು ಉಚಿತವಾಗಿ ಪೂರೈಸುತ್ತಿದೆ ಎಂಬುದನ್ನು ನಾನು ಗೌರವಪೂರ್ವಕವಾಗಿ ಸ್ಪಷ್ಟಪಡಿಸಲು ಬಯಸುತ್ತೇನೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ರೋಗಿಗಳು ಔಷಧಿಗಳನ್ನು ಖರೀದಿಸಲು ವಾಣಿಜ್ಯ ಮಳಿಗೆಗಳಿಗೆ ಕಳುಹಿಸುವ ಮತ್ತು ಅವರಿಗೆ ಉಚಿತವಾಗಿ ಪೂರೈಸಲಾಗುವ ಔಷಧಿಗಳನ್ನು ನಿರಾಕರಿಸುವ ಯಾವುದೇ ಸಾಧ್ಯತೆಗಳನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಔಷಧಾಲಯಗಳಿಂದ ಔಷಧಿಗಳನ್ನು ಖರೀದಿಸಲು ರೋಗಿಗಳು ಭರಿಸುವ ವೆಚ್ಚವನ್ನು ಕಡಿಮೆ ಮಾಡುವುದು ಸರ್ಕಾರದ ನಿರ್ಧಾರವಾಗಿದೆ. ಇದು ಸರ್ಕಾರಿ ಆಸ್ಪತ್ರೆಗಳಲ್ಲಿ ಆರೋಗ್ಯ ಸೇವೆಗಳನ್ನು ಪಡೆಯುವ ಬಡ ಮತ್ತು ಹಿಂದುಳಿದ  ರೋಗಿಗಳಿಗೆ ಅನುಕೂಲಕರವಾಗುತ್ತದೆ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ರಾಜ್ಯದಲ್ಲಿ 1417 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ 184 ಜನೌಷಧಿ ಕೇಂದ್ರಗಳಿವೆ. ಉಳಿದವು ಸರ್ಕಾರಿ ಆಸ್ಪತ್ರೆಗಳ ಆವರಣದ ಹೊರಗೆ ಕಾರ್ಯನಿರ್ವಹಿಸುತ್ತಿವೆ. ಮತ್ತು ನಾಗರಿಕರು ತಮ್ಮ ಆಯ್ಕೆಯಂತೆ ಖಾಸಗಿ ವಲಯದಲ್ಲಿ ಅವುಗಳನ್ನು ಪ್ರವೇಶಿಸಲು ಸ್ವತಂತ್ರರಾಗಿದ್ದಾರೆ ಎಂದಿದ್ದಾರೆ.

ಕರ್ನಾಟಕದಲ್ಲಿ ಎಲ್ಲಾ ನಾಗರಿಕರಿಗೆ ಕೈಗೆಟುಕುವ ಮತ್ತು ಗುಣಮಟ್ಟದ ಆರೋಗ್ಯ ಸೇವೆಗಳು ಲಭ್ಯವಾಗುವಂತೆ ಮಾಡಲು ನಾವು ಬದ್ಧರಾಗಿದ್ದೇವೆ ಮತ್ತು ಸಾರ್ವಜನಿಕ ವ್ಯವಸ್ಥೆಯಲ್ಲಿ ನಮ್ಮ ಪೂರೈಕೆ ಸರಪಳಿ, ಲಭ್ಯತೆ ಮತ್ತು ಔಷಧಿಗಳ ವೈಜ್ಞಾನಿಕ ಬಳಕೆಯನ್ನು ನಿರಂತರವಾಗಿ ಬಲಪಡಿಸುತ್ತಿದ್ದೇವೆ ಎಂದಿದ್ದಾರೆ.

ಸಾರ್ವಜನಿಕ ಆರೋಗ್ಯದ ಕುರಿತಾದ ನಿಮ್ಮ ಕಾಳಜಿಯನ್ನು ನಾವು ಸಂಪೂರ್ಣವಾಗಿ ಗೌರವಿಸುತ್ತೇವೆ ಮತ್ತು ಜನರ ಒಳಿತಿಗಾಗಿ ನಮ್ಮ ಸಮಾನ ಬದ್ಧತೆಯನ್ನು ಮತ್ತೆ ಸ್ಪಷ್ಟಪಡಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Leave a Reply