ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟ: ಬಿ.ವೈ.ವಿಜಯೇಂದ್ರ

7 months ago

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್‌ ಪೇಪರ್‌ ಜಾರಿಗೆ ತರಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌‍ ಗೆದ್ದಾಗ ಇವಿಎಂ ಸೇರಿದಂತೆ ಇಡೀ ವ್ಯವಸ್ಥೆ ಚೆನ್ನಾಗಿರುತ್ತದೆ. ಸೋತಾಗ ಇವಿಎಂ ಸರಿ ಇಲ್ಲ, ಚುನಾವಣಾ ಆಯೋಗವೂ ಸರಿ ಇಲ್ಲ. ಇದು ಅದರ ದ್ವಂದ್ವ ನೀತಿ ಎಂದರು.

ಮಹಾರಾಷ್ಟ್ರ, ಹರಿಯಾಣ, ದೆಹಲಿ ಮತ್ತಿತರ ಕಡೆ ಸೋತು ಸುಣ್ಣವಾಗಿರುವ ಕಾಂಗ್ರೆಸ್‌‍ ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಎಂಬಂತೆ ಇವಿಎಂ ಮೇಲೆ ದೂಷಣೆ ಮಾಡುತ್ತಿದೆ. ಮೂರು ಲೋಕಸಭೆ ಚುನಾವಣೆಗಳಲ್ಲಿ ಕಾಂಗ್ರೆಸ್‌‍ ಪಕ್ಷವನ್ನು ಜನ ತಿರಸ್ಕರಿಸಿದ್ದಾರೆ. ಇದನ್ನು ಮುಚ್ಚಿಕೊಳ್ಳಲು ಇವಿಎಂ ಸರಿ ಇಲ್ಲ ಎಂದು ಆಪಾದನೆ ಮಾಡುತ್ತಿದ್ದಾರೆ. ನಾವು ಬ್ಯಾಲೆಟ್‌ ಪೇಪರ್‌ಗೆ ಹೆದರುವುದಿಲ್ಲ, ಅದರ ಅಗತ್ಯವೂ ಇಲ್ಲ ಎಂದರು.

ಒಂದು ವೇಳೆ ಕಾಂಗ್ರೆಸ್‌‍ ನಾಯಕರು ಆರೋಪಿಸುವಂತೆ ಇವಿಎಂ ದೋಷ ಇದ್ದಿದ್ದರೆ ಹಿಮಾಚಲ ಪ್ರದೇಶ, ತೆಲಂಗಾಣ, ಕರ್ನಾಟಕದಲ್ಲಿ ಕಾಂಗ್ರೆಸ್‌‍ ಅಧಿಕಾರಕ್ಕೆ ಹೇಗೆ ಬಂತು? ಮಹಾರಾಷ್ಟ್ರ, ಹರಿಯಾಣಗಳಲ್ಲಿ ಸೋತಿದ್ದರಿಂದ ಹತಾಶರಾಗಿ ಇಂತಹ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್‌‍ ಎಲ್ಲವನ್ನೂ ವಿರೋಧ ಮಾಡುತ್ತಲೇ ಬಂದಿದೆ. ಇದಕ್ಕೆ ನಾವು ಕಾನೂನಿನ ಮೂಲಕ ಉತ್ತರ ಕೊಡುತ್ತೇವೆ ಎಂದರು.

Leave a Reply