ಸರ್ಕಾರಿ ಜಮೀನು ಒತ್ತುವರಿ ಮಾಡಿದರೆ ಸೂಕ್ತ ಕಾನೂನು ಕ್ರಮ: ಗಂಗಾಧರಸ್ವಾಮಿ

7 months ago

ದಾವಣಗೆರೆ: ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳನ್ನು ಒತ್ತುವರಿ ಮಾಡಿದರೆ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಎಚ್ಚರಿಕೆ ನೀಡಿದರು.



ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಮೂರನೇ ತ್ರೈ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಗಳೂರು ತಾಲ್ಲೂಕು ಚಿದರುವಳ್ಳಿ ಗ್ರಾಮದ 13 ಎಕರೆ ಜಮೀನಿನಲ್ಲಿ ಈಗಾಗಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ  ಅನೇಕ ಬಡ ಕುಟುಂಬದವರು ಮನೆಗಳನ್ನು ನಿರ್ಮಿಸಿಕೊಂಡಿರುತ್ತಾರೆ. ಆ ಪ್ರದೇಶವನ್ನು ಕಂದಾಯ ಗ್ರಾಮವನ್ನಾಗಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಕಂದಾಯ ಗ್ರಾಮವಾಗಿ ಘೋಷಣೆಯಾದ ನಂತರ ಅಧಿಕೃತವಾಗಿ ಹಕ್ಕುಪತ್ರ ಸಹ ವಿತರಿಸಲಾಗುವುದು. ಆ ಪ್ರದೇಶದಲ್ಲಿ ಪ್ರಸ್ತುತ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ. ಒಂದೇ ವೇಳೆ  ಕಾನೂನು ಬಾಹಿರವಾಗಿ  ನಿರ್ಮಾಣ ಕಾರ್ಯಗಳನ್ನು ಕೈಗೊಂಡಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

2025ರ ಜನವರಿ 01 ರಿಂದ ಸೆಪ್ಟೆಂಬರ್ 24 ರವರೆಗೆ 2 ಕೊಲೆ ಪ್ರಕರಣ, 4 ಫೋಕ್ಸೋ ಮತ್ತು 45 ಇತರೆ ದೌರ್ಜನ್ಯ ಪ್ರಕರಣ ಸೇರಿ ಒಟ್ಟು 51 ಪ್ರಕರಣ ದಾಖಲಾಗಿವೆ. ಇದರಲ್ಲಿ 20 ಪ್ರಕರಣಗಳಲ್ಲಿ ಚಾರ್ಜ್‍ಶೀಟ್ ಸಲ್ಲಿಕೆಯಾಗಿವೆ. ದೌರ್ಜನ್ಯಕ್ಕೊಳಗಾದ ಪರಿಶಿಷ್ಟ ಜಾತಿಯ 93, ಪರಿಶಿಷ್ಟ ಪಂಗಡದ 43 ಸಂತ್ರಸ್ಥರನ್ನು ಒಳಗೊಂಡಂತೆ ಒಟ್ಟು 136 ಪ್ರಕರಣಗಳಲ್ಲಿ ರೂ.102.50 ಲಕ್ಷ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

2025ನೇ ವರ್ಷದಲ್ಲಿ ಜನವರಿಯಿಂದ ಇಲ್ಲಿಯವರೆಗೆ ಎರಡು ಕೊಲೆ ಪ್ರಕರಣಗಳಲ್ಲಿ ಮೃತರ ಅವಲಂಬಿತರಿಗೆ ಸರ್ಕಾರಿ ನೌಕರಿ ನೀಡಲು ದಾಖಲೆಗಳನ್ನು ಸಲ್ಲಿಸಲು ಸಂತ್ರಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು  ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.

ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ 2025 ರ ಸೆಪ್ಟೆಂಬರ್ ಅಂತ್ಯಕ್ಕೆ ಒಟ್ಟು 146 ಪ್ರಕರಣಗಳು ಬಾಕಿ ಇರುವುದಾಗಿ ಸರ್ಕಾರಿ ಅಭಿಯೋಜಕರು ಸಭೆಗೆ ತಿಳಿಸಿದರು. ಅಗತ್ಯ ದಾಖಲಾತಿಗಳನ್ನು ನೀಡಿ ಆದಷ್ಟು ರ್ಶೀಘ್ರ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಜಿಲ್ಲೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ವಸತಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದಲ್ಲಿ ಅದನ್ನು ಪರಿಶೀಲಿಸಿ ಸೂಕ್ತ ಕ್ರಮವಹಿಸುವಂತೆ  ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ನೆರೆ  ಜಿಲ್ಲೆಗಳಿಂದ ಹೆಚ್ಚು ವಿದ್ಯಾರ್ಥಿಗಳು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಲಯಗಳ ಬೇಡಿಕೆ ಹೆಚ್ಚಿದೆ. ಆದುದರಿಂದ ಇನ್ನೂ ನಾಲ್ಕರಿಂದ ಐದು ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಲಾಗುವುದು. ಅಗತ್ಯವಿದ್ದಲ್ಲಿ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡಗಳಲ್ಲಿ ಪ್ರಾರಂಭಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಅರ್ಹ ಫಲಾನುಭವಿಗಳಿಗೆ ಗುರುತಿನ ಚೀಟಿ ಮತ್ತು ಭೂಮಿ ನೀಡಲು ಇಲಾಖೆ ವಿಳಂಬವಾಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ತ್ವರಿತವಾಗಿ ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಗುರುತಿನ ಚೀಟಿ ಮತ್ತು ಭೂಮಿ ಮಂಜೂರು ಮಾಡುವಂತೆ ಸದಸ್ಯರೊಬ್ಬರು ಮನವಿ ಮಾಡಿದರು.

ಅದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಅರ್ಹರನ್ನು ಗುರುತಿಸಿ ಶೀಘ್ರದಲ್ಲಿಯೇ ಗುರುತಿನ ಚೀಟಿ ವಿತರಿಸಲಾಗುವುದು. ಫಲಾನುಭವಿಗಳಿಗೆ ಭೂಮಿ ಮಂಜೂರು ಮಾಡುವ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ಜಿಲ್ಲಾ ಪಂಚಾಯತ್ ಸಿಇಓ ಗಿತ್ತೆ ಮಾಧವ ವಿಠಲ ರಾವ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್, ಸರ್ಕಾರಿ ಅಭಿಯೋಜಕ ಕೆ.ಜಿ.ಜಯಪ್ಪ, ಕೆ.ಎಸ್.ಆರ್.ಟಿ.ಸಿ ಮಾರ್ಗ ನಿಯಂತ್ರಣಾಧಿಕಾರಿ ಫಕ್ರುದ್ಧೀನ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್ ಸೇರಿದಂತೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರು ಹಾಜರಿದ್ದರು.

Leave a Reply