ಪ್ರವಾಸಿ ತಾಣಗಳನ್ನು ಉಳಿಸಿ ಬೆಳೆಸಿ ಸಂರಕ್ಷಿಸೋಣ: ಮುಂಡರಗಿ ನಾಗರಾಜ

7 months ago

ಬಳ್ಳಾರಿಯಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ

ಬಳ್ಳಾರಿ: ನಮ್ಮ ಸುತ್ತಮುತ್ತಲಿನ ಐತಿಹಾಸಿಕ ಸ್ಥಳಗಳನ್ನು ಉಳಿಸಿ ಬೆಳೆಸಿ ಸಂರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಡಾ.ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ ಹಾಗೂ ಹೋಟೆಲ್ ಮಾಲೀಕರ ಸಂಘ, ರಾಬರ್ಟ್ ಬ್ರೂಸ್‌ಫೂಟ್ ಸಂಗನಕಲ್ಲು ಪುರಾತತ್ವ ವಸ್ತು ಸಂಗ್ರಹಾಲಯ ಮತ್ತು ಸಂಡೂರು ಡೈರೀಸ್ ಇವರ ಸಹಯೋಗದಲ್ಲಿ “ಪ್ರವಾಸೋದ್ಯಮ ಹಾಗೂ ಸುಸ್ಥಿರ ಪರಿವರ್ತನೆ” ಎಂಬ ಸಂದೇಶದಡಿಯಲ್ಲಿ ನಗರದ ಐತಿಹಾಸಿಕ ಕೋಟೆ ಮುಂಭಾಗದ ಆವರಣದಲ್ಲಿ ಏರ್ಪಡಿಸಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ರಾಜ್ಯ ಹಲವಾರು ಐತಿಹಾಸಿಕ ಪ್ರವಾಸಿ ತಾಣಗಳು ಮತ್ತು ವಿಸ್ಮಯಕಾರಿ ತಾಣಗಳನ್ನು ಹೊಂದಿದೆ. ವಿಶ್ವ ವಿಖ್ಯಾತ ಹಂಪಿ ಹಾಗೂ ತುಂಗಭದ್ರಾ ಡ್ಯಾಂ ಪ್ರವಾಸಿ ತಾಣಗಳು ಇದೀಗ ನೆರೆಯ ವಿಜಯನಗರ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟಿವೆ. ಆದರೂ ನಮ್ಮ ಬಳ್ಳಾರಿ ಜಿಲ್ಲೆಯಲ್ಲಿ ಸಂಡೂರಿನ ಕುಮಾರಸ್ವಾಮಿ ದೇವಸ್ಥಾನ, ಸ್ವಾಮಿಮಲೈ ಅರಣ್ಯ ಕ್ಷೇತ್ರ, ನಾರಿಹಳ್ಳ ಜಲಾಶಯ, ವಿಶ್ವದ 2 ನೇ ಏಕಶಿಲಾ ಬೆಟ್ಟ ಬಳ್ಳಾರಿಯ ಐತಿಹಾಸಿಕ ಕೋಟೆ, ಮಿಂಚೇರಿ ಬೆಟ್ಟ,  ಸಂಗನಕಲ್ಲು ಗುಡ್ಡ, ಸಿರುಗುಪ್ಪದ ತೆಕ್ಕಲಕೋಟೆ, ಕೆಂಚನಗುಡ್ಡ, ಕುರುಗೋಡಿನ ದೊಡ್ಡ ಬಸವೇಶ್ವರ ದೇವಸ್ಥಾನ ಸೇರಿದಂತೆ ಅನೇಕ ಪ್ರವಾಸಿ ತಾಣಗಳಿದ್ದು, ಜನರು ಈ ಸ್ಥಳಗಳಿಗೆ ಭೇಟಿ ನೀಡಿ ಸ್ಥಳೀಯ ಪ್ರವಾಸಿ ತಾಣಗಳನ್ನು ವೀಕ್ಷಿಸಬೇಕು ಎಂದರು.

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಮ್ಮ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ಒಂದು ದಿನದ ಪ್ರವಾಸ ಕರೆದುಕೊಂಡು ಹೋಗಿ ಐತಿಹಾಸಿಕ ಸ್ಥಳಗಳ ಬಗ್ಗೆ ಶಿಕ್ಷಕರು ಮಾಹಿತಿ ನೀಡಿದರೆ ವಿದ್ಯಾರ್ಥಿಗಳಿಗೆ ಆಸಕ್ತಿ ಮೂಡುತ್ತದೆ ಎಂದರು.

ಇಂದಿನ ವಿದ್ಯಾರ್ಥಿಗಳು ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳ ದುಶ್ಚಟಕ್ಕೆ ಒಳಗಾಗದೇ ವಿದ್ಯಾಭ್ಯಾಸದ ಕಡೆ ಗಮನ ಹರಿಸುವುದರ ಜೊತೆಗೆ ಪ್ರವಾಸಿ ತಾಣಗಳನ್ನು ವೀಕ್ಷಿಸುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ರಾಬರ್ಟ್ ಬ್ರೂಸ್ ಫೂಟ್ ಸಂಗನಕಲ್ಲು ಪ್ರಾಕ್ತನ ವಸ್ತು ಸಂಗ್ರಹಾಲಯದ ಸದಸ್ಯ ಅಹೀ ರಾಜ್.ಎಂ ಅವರು ಮಾತನಾಡಿ, ಐದು ಸಾವಿರ ವರ್ಷಗಳ ಇತಿಹಾಸ ಹೊಂದಿದ ಸಂಗನಕಲ್ಲು ಗುಡ್ಡ ಪ್ರದೇಶವು ನವಶಿಲಾಯುಗದ ಕುರುಹುಗಳ ತಾಣವಾಗಿದ್ದು, ದಕ್ಷಿಣ ಭಾರತದಲ್ಲೇ ಅತ್ಯಂತ ದೊಡ್ಡ ಜನವಸತಿ ಪ್ರದೇಶವಾಗಿತ್ತು ಎಂಬ ಇತಿಹಾಸವನ್ನು ಹೊಂದಿದೆ. ಇಂತಹ ಐತಿಹಾಸಿಕ, ನೈಸರ್ಗಿಕ ತಾಣಗಳ ವೀಕ್ಷಣೆಯಿಂದ ಇತಿಹಾಸದ ಕುರಿತು ಕುತೂಹಲ ಸೃಷ್ಟಿಯಾಗಿ ಜ್ಞಾನ ವೃದ್ಧಿಯಾಗಲಿದೆ ಎಂದರು.

ಇದೇ ವೇಳೆ ಪ್ರವಾಸಿ ಮಿತ್ರ ರಕ್ಷಣಾ ಸಿಬ್ಬಂದಿಗಳಿಗೆ ಪ್ರಶಂಸೆ ಪತ್ರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಗಣ್ಯರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪೋಟೋ ಪಾಯಿಂಟ್ ಮತ್ತು ಕೋಟೆ ಮುಂಭಾಗ ನಿಂತು ಪೋಟೋ ತೆಗೆದುಕೊಂಡು ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಜಂಟಿ ಕಾರ್ಯದರ್ಶಿ ಜಿತೇಂದ್ರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಬಸಪ್ಪ.ಕೆ,  ಪ್ರವಾಸೋದ್ಯಮ ಇಲಾಖೆಯ ಹಿರಿಯ ಪ್ರವಾಸಿ ಪ್ರವರ್ತಕ ಶ್ರೀಹರಿ ಮಾಸನೂರು, ಪ್ರವಾಸಿ ಮಿತ್ರರು ಸೇರಿದಂತೆ  ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇತರರು ಹಾಜರಿದ್ದರು.

Leave a Reply