ಕಾರವಾರ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 8100 ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕಜೋಳವನ್ನು ಬೆಳೆಯಲಾಗಿದ್ದು, ಈ ರೈತರಿಗೆ ಕನಿಷ್ಠ ಬೆಂಬಲ ಬೆಲೆಯ ಪ್ರಯೋಜನವನ್ನು ದೊರಕಿಸುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ಇಂದೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಮಾರಾಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮಿ ಪ್ರಿಯಾ ಸೂಚನೆ ನೀಡಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ಮೆಕ್ಕಜೋಳಕ್ಕೆ ಪ್ರತೀ ಕ್ವಿಂಟಾಲ್ ಗೆ ರೂ.2400 ಗಳ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಿದ್ದು, ಜಿಲ್ಲೆಯಲ್ಲಿ ಪ್ರಸ್ತುತ ಕಟಾವು ಪ್ರಕ್ರಿಯೆ ನಡೆಯುತ್ತಿರುವುದರಿಂದ ಮಾರುಕಟ್ಟೆ ದರ ಸರಾಸರಿ ರೂ. 1950 ಇದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕಜೋಳ ಮಾರುಕಟ್ಟೆಗೆ ಆಗಮಿಸುವುದರಿಂದ ಬೆಲೆ ಕುಸಿಯುವ ಸಾಧ್ಯತೆಗಳಿರುವುದರಿಂದ, ಜಿಲ್ಲೆಯ ರೈತರಿಗೆ ಸರ್ಕಾರದ ಕನಿಷ್ಠ ಬೆಂಬಲ ಬೆಲೆಯ ಪ್ರಯೋಜನ ಒದಗಿಸಲು, ಖರೀದಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಇಂದೇ ಪ್ರಸ್ತಾವನೆಯನ್ನು ಸಿದ್ದಪಡಿಸಿ, ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಹಳಿಯಾಳ ಮತ್ತು ಮುಂಡಗೋಡು ಭಾಗದಲ್ಲಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕಜೋಳ ಬೆಳೆದಿದ್ದು, ಈ ರೈತರಿಗೆ ಅನುಕೂಲವಾಗುವಂತೆ ಸಮೀಪದ ಕೃಷಿ ಮಾರುಕಟ್ಟೆ ಕೇಂದ್ರಗಳಲ್ಲಿ ಖರೀದಿ ಕೇಂದ್ರಗಳ್ನು ತೆರೆಯಲು ಕ್ರಮ ಕೈಗೊಳ್ಳಬೇಕು. ಖರೀದಿ ಕೇಂದ್ರಗಳನ್ನು ತೆರೆದ ನಂತರ, ಈ ಬಗ್ಗೆ ರೈತರಿಗೆ ಅಗತ್ಯ ಮಾಹಿತಿಯನ್ನು ತಲುಪಿಸುವ ಮೂಲಕ ಅವರಿಗೆ ಬೆಂಬಲ ಬೆಲೆಯ ಪ್ರಯೋಜನ ದೊರೆಯುವಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಕಾಶ್ ಗಾಂವಕರ್, ಆಹಾರ ಇಲಾಖೆ ಉಪನಿರ್ದೇಶಕ ಮಂಜುನಾಥ ರೇವಣಕರ್, ಎಪಿಎಂಸಿ ಸಹಾಯಕ ನಿರ್ದೇಶಕ ಮಂಗೇಶ್ ನಾಯ್ಕ್ ಮತ್ತಿತರರು ಹಾಜರಿದ್ದರು.




