ಚಿಕ್ಕಬಳ್ಳಾಪುರ: ಇಥಿಯೋಪಿಯಾ ಮೂಲದ ವ್ಯಕ್ತಿಯೊಬ್ಬರಿಗೆ ಮಂಕಿಫಾಕ್ಸ್ ಲಕ್ಷಣ ಕಾಣಿಸಿದ ಕಾರಣ ಸ್ಯಾಂಪಲ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ಅವರಿಗೆ ಸ್ಮಾಲ್ ಫಾಕ್ಸ್ ಆಗಿದ್ದು, ಮಂಕಿಫಾಕ್ಸ್ ಇಲ್ಲ ಎಂಬುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಹಾಗಾಗಿ ಈವರೆಗೆ ರಾಜ್ಯದಲ್ಲಿ ಸೋಂಕು ಇಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಆಸ್ಪತ್ರೆಗಳಲ್ಲೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ಬರುವ ವೇಳೆ ಮಾರ್ಗಸೂಚಿ ಪಾಲಿಸಬೇಕು ಎಂಬ ನಿಯಮ ವಿಧಿಸಲಾಗಿದೆ ಎಂದರು.
ವಿಮಾನ ನಿಲ್ದಾಣ, ಬಂದರುಗಳಲ್ಲಿ ದಿನದ 24 ಗಂಟೆ, ಮೂರು ಪಾಳಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹಾಗಾಗಿಯೇ ರಾಜ್ಯದಲ್ಲಿ ಈವರೆಗೆ ಸೋಂಕಿನ ಸುಳಿವಿಲ್ಲ, ಇನ್ನೂ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ. ನಾಗರಾಜ್, ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ. ನಾಗರಾಜ್, ಪಿ.ಎನ್. ಕೇಶವರೆಡ್ಡಿ, ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ಮರಳುಕುಂಟೆ ಕೃಷ್ಣಮೂರ್ತಿ, ರಾಮಸ್ವಾಮಿ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ನಾಗೇಶ್ ಸೇರಿದಂತೆ ನಿರ್ದೇಶಕರು ಉಪಸ್ಥಿತರಿದ್ದರು.



