ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ: ಮಧು ಬಂಗಾರಪ್ಪ

4 months ago

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ವಿಧಾನಪರಿಷತ್‌ನಲ್ಲಿ ಸ್ಪಷ್ಟಪಡಿಸಿದರು.

ಬಿಜೆಪಿಯ ಚಿದಾನಂದ ಎಂ.ಗೌಡ ಹಾಗೂ ಕಾಂಗ್ರೆಸ್‌ ನ  ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲೆಯಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ  ಕಡಿಮೆ ವಿದ್ಯಾರ್ಥಿಗಳ ಸಂಖ್ಯೆಯಿರುವ ಶಾಲೆಗಳನ್ನು ಸರ್ಕಾರ ಪಕ್ಕದ ಶಾಲೆಗಳಿಗೆ ವಿಲೀನಗೊಳಿಸುತ್ತದೆ ಇಲ್ಲವೇ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲಾಗುತ್ತದೆ. ಇದಕ್ಕೆ ಮಾಧ್ಯಮಗಳು ಕೂಡ ಪುಷ್ಟಿ ನೀಡುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಕೊರತೆ ಇದೆ ಎಂದು ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದು, ಇಲ್ಲವೇ ಸಮೀಪದ ಸರ್ಕಾರಿ ಶಾಲೆಗೆ ವಿಲೀನ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ಆದರೂ ಈ ವಿಷಯವಾಗಿ ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಗತ್ಯಬಿದ್ದರೆ ಸರ್ಕಾರಿ ಶಾಲೆಗಳ ಸಂಖ್ಯೆಯನ್ನು ಹೆಚ್ಚಳ ಮಾಡುತ್ತೇವೆ. ಈ ಬಗ್ಗೆ ಎದ್ದಿರುವ ಗೊಂದಲಗಳು ಕೇವಲ ಊಹಾಪೋಹ ಎಂದು ಸ್ಪಷ್ಟಪಡಿಸಿದರು.

ಕೆಲವು ಕಡೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇದೆ. ಆದರೂ ಆ ಶಾಲೆಗಳಿಗೆ ನಾವು ಸಮವಸ್ತ್ರ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ ಕೊಡುತ್ತಿದ್ದೇವೆ. ಇದನ್ನು ಎಲ್ಲಿಯಾದರೂ ನಿಲ್ಲಿಸಿದೆಯೇ? ಎಂದು ವಿರೋಧಪಕ್ಷದ ಸದಸ್ಯರನ್ನು ಪ್ರಶ್ನೆ ಮಾಡಿದರು.

ನಮ್ಮ ರಕ್ತದ ಕಣಕಣದಲ್ಲೂ ಕನ್ನಡ ಇದೆ. ಕನ್ನಡದ ಬಗ್ಗೆ ನಮಗೆ ಬದ್ಧತೆ ಇದೆ. ಕಾಳಜಿಯೂ ಇದೆ. ಹಿಂದಿನ ಸರ್ಕಾರಗಳು ಸರ್ಕಾರಿ ಶಾಲೆಗಳನ್ನು ಯಾವ ದುಸ್ಥಿತಿಗೆ ತಂದಿದ್ದವು ಎಂದು ಹೇಳಲು ಹೋದರೆ ಬೇರೆ ಕತೆಯಾಗುತ್ತದೆ. ಅನುದಾನಿತ ಶಾಲೆಗಳಲ್ಲಿ ಅಗತ್ಯವಿರುವ ಸಿಬ್ಬಂದಿ ನೇಮಕ ಮಾಡಿದ ಮೊಟ್ಟ ಮೊದಲ ಸರ್ಕಾರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಎಂದರು.

Leave a Reply