ಬೆಂಗಳೂರು: ಬೆಂಗಳೂರು ನಗರದ ವಾಹನ ಸವಾರರಿಗೆ ಗುಣಮಟ್ಟದ ರಸ್ತೆ ಕಲ್ಪಿಸಲು ಸಾಧ್ಯವಾಗದ ಬಿಜೆಪಿ 40% ನೂತನ ಪಾರ್ಕಿಂಗ್ ನೀತಿ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಹಾಕಲು ಮುಂದಾಗಿರುವುದು ಖಂಡನೀಯ ಎಂದು ಆಪ್ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಕಿಡಿಕಾರಿದರು.
ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾನುವಾರ ರಜಾ ದಿನವಾಗಿದ್ದರೂ ಸೆಪ್ಟೆಂಬರ್ 18ರ ಟೆಂಡರ್ಗೆ ಆಹ್ವಾನ ಕರೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೆಟಿಪಿಪಿ ಕಾಯಿದೆ ಪ್ರಕಾರ ಟೆಂಡರ್ಗೆ 40 ದಿನಗಳ ಕಾಲಾವಕಾಶ ನೀಡಬೇಕಿದೆ. ಆದರೂ ಕೇವಲ 15 ದಿನಗಳ ಕಾಲಾವಕಾಶ ನೀಡಲಾಗಿದೆ. ಎಂಟು ವಲಯಗಳಲ್ಲೂ ಎಂಟು ಗುತ್ತಿಗೆದಾರರನ್ನು ಪೂರ್ವನಿಗದಿ ಮಾಡಿಕೊಂಡಿದ್ದು, ಕೇವಲ ನಾಮಕಾವಸ್ತೆಗಾಗಿ ಟೆಂಡರ್ ಕರೆಯಲಾಗಿದೆ ಎಂದರು.
ರಸ್ತೆ ಬದಿ ವಾಹನ ನಿಲ್ಲಿಸುವುದಕ್ಕೂ ಪ್ರಿಪೇಯ್ಡ್ ಶುಲ್ಕ ವಿಧಿಸುವ ನೂತನ ಪಾರ್ಕಿಂಗ್ ನೀತಿ ಸಾಮಾನ್ಯ ವಾಹನ ಸವಾರರಿಗೆ ಭಾರೀ ಹೊರೆಯಾಗಲಿದೆ. ಪ್ರತಿ ಗಂಟೆಗೆ 15ರಿಂದ 30 ರೂಪಾಯಿವರೆಗೆ ಪಾರ್ಕಿಂಗ್ ಶುಲ್ಕ ವಿಧಿಸುವುದರಿಂದ ಬಡ ಹಾಗೂ ಮಧ್ಯಮ ವರ್ಗದ ವಾಹನ ಸವಾರದ ಆದಾಯದ ದೊಡ್ಡ ಪಾಲು ಈ ಶುಲ್ಕಕ್ಕೇ ಖರ್ಚಾಗಲಿದೆ ಎಂದರು.
ಜೊತೆಗೆ ತಮ್ಮ ಮನೆಯೆದುರು ಕಾರು ಪಾರ್ಕಿಂಗ್ ಮಾಡುವುದಕ್ಕೂ 3000ದಿಂದ 5000 ರೂಪಾಯಿ ನೀಡಿ ಪರವಾನಗಿ ಪಡೆಯಬೇಕೆಂಬ ನಿಯಮ ರೂಪಿಸಲಾಗಿದೆ. ವಾಹನ ಸವಾರರಿಗೆ ನೆರವಾಗುವಂತಹ ನೀತಿ ರೂಪಿಸುವ ಬದಲು ಅವರನ್ನು ಲೂಟಿ ಮಾಡಲು ಸರ್ಕಾರ ಮುಂದಾಗಿದೆ. ಜನವಿರೋಧಿ ನೀತಿಯನ್ನು ಹಿಂಪಡೆಯದಿದ್ದರೆ ಪಕ್ಷ ಬೃಹತ್ ಹೋರಾಟ ರೂಪಿಸಲಿದೆ ಎಂದರು.
ಆಪ್ ಬೆಂಗಳೂರು ನಗರ ಸಂಘಟನಾ ಕಾರ್ಯದರ್ಶಿ ಸುರೇಶ್ ರಾಥೋಡ್ ಮಾತನಾಡಿ, ಪಾರ್ಕಿಂಗ್ಗೆ ದುಬಾರಿ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿರುವುದನ್ನು ಬೆಂಗಳೂರಿನ ಜನ ಈಗ ಸಹಿಸಿಕೊಂಡರೆ, ಮುಂದಿನ ದಿನಗಳಲ್ಲಿ ಸರ್ಕಾರ ಶುಲ್ಕವನ್ನು ಇನ್ನಷ್ಟು ಏರಿಕೆ ಮಾಡುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.
ವರ್ಷಕ್ಕೆ ಸುಮಾರು 200 ಕೋಟಿ ರೂಪಾಯಿಯನ್ನು ಈ ಮೂಲಕ ಸಂಗ್ರಹಿಸಲು ಸರ್ಕಾರ ನಿರ್ಧರಿಸಿದೆ. ಇದೊಂದು ದಂಧೆಯಾಗಿ ಮಾರ್ಪಾಡಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದ್ದು, ಜನರು ಕಟ್ಟುವ ಶುಲ್ಕವು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಜೇಬು ಸೇರಲಿದೆ ಎಂದರು.
ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆಯನ್ನು ಬಗೆಹರಿಸಲು ಮೀನಮೀಷ ಎಣಿಸುವ ಜನವಿರೋಧಿ ಸರ್ಕಾರ ಜನರಿಂದ ವಸೂಲಿ ಮಾಡಲು ಮಾತ್ರ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿರುವುದು ಖಂಡನೀಯ ಎಂದರು.



