ಬೆಂಗಳೂರು: ಕೇರಳ ಹಾಗೂ ಕರ್ನಾಟಕದ ಕೆಲ ಪ್ರದೇಶಗಳ ಪಿಎಫ್ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ತಂಡ ದಿಢೀರ್ ದಾಳಿ ನಡೆಸಿ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.
ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರು ಭಯೋತ್ಪಾದನೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಎನ್ಐಎ ಅಧಿಕಾರಿಗಳು ಕೇರಳ ಹಾಗೂ ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಶೋಧ ನಡೆಸಿದ್ದಾರೆ.
ಕೇರಳದ ಕೋಝಿಕ್ಕೋಡ್ ಜಿಲ್ಲೆ ಮತ್ತು ಕರ್ನಾಟಕದ ಕಲಬುರಗಿ ಜಿಲ್ಲೆಯ 03 ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಎನ್ಐಎಯ ತಂಡ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ಭಯೋತ್ಪಾದನ ಕೃತ್ಯಕ್ಕೆ ಪ್ಲಾನ್ ಮಾಡುತ್ತಿದ್ದಾರೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ ಎನ್ನಲಾಗಿದೆ.
ಕೇರಳ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ ಮತ್ತು ದೆಹಲಿ ಇತ್ಯಾದಿ ರಾಜ್ಯಗಳಲ್ಲಿ ಭಾರಿ ಪ್ರಮಾಣದ ಭಯೋತ್ಪಾದಕ ಕೃತವೆಸಗಲು ಯೋಜನೆ ರೂಪಿಸಲಾಗಿತ್ತು. ಈ ಮಾಹಿತಿಯನ್ನಾಧರಿಸಿ ಕಾರ್ಯಚರಣೆ ನಡೆಸಲಾಗಿದೆ.
ಯಾವ ರಾಜ್ಯದಲ್ಲಿ ಯಾವ ರೀತಿ ಭಯೋತ್ಪಾದಕ ಕೃತ್ಯ ಎಸಗಬೇಕು ಎಂಬ ಬಗ್ಗೆ ಪಿಎಫ್ಐ ಸಂಘಟನೆ ಕಾರ್ಯಕರ್ತರಿಗೆ ಗುಪ್ತ ಸ್ಥಳಗಳಲ್ಲಿ ತರಬೇತಿ ನೀಡಲು ಶಿಬಿರಗಳನ್ನು ನಡೆಸಲಾಗುತ್ತಿತ್ತು. ದಾಳಿ ವೇಳೆ ಡಿಜಿಟಲ್ ಉಪಕರಣಗಳು ಹಾಗೂ ಕೆಲ ದಾಖಲೆಗಳನ್ನ ವಶಪಡಿಸಿಕೊಂಡಿರುವ ಎನ್ಐಎ ಅಧಿಕಾರಿಗಳನ್ನು ತನಿಖೆಯನ್ನು ತೀವ್ರಗೊಳಿಸಿದ್ದಾರೆ.




