ಮೆಚ್ಚಿನ ಡಾಬಾ ಹೆಸರು ಕೇಳಿ ಎದ್ದುಕುಳಿತ ಸತ್ತ ವ್ಯಕ್ತಿ!

1 year ago

ಧಾರವಾಡ: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಹೇಳಲಾದ ವ್ಯಕ್ತಿಯನ್ನು ಅಂತ್ಯಸಂಸ್ಕಾರಕ್ಕಾಗಿ ತಮ್ಮ ಊರಿಗೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಆತ ಎದ್ದು ಕುಳಿತ ಘಟನೆ ನಡೆದಿದೆ. ಅದರಲ್ಲೂ ವ್ಯಕ್ತಿ ತನ್ನ ನೆಚ್ಚಿನ ಡಾಬಾ ಸಮೀಪದಲ್ಲಿ ಎದ್ದು ಕುಳಿತುಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದ್ದಾನೆ.

ಹಾವೇರಿ ಜಿಲ್ಲೆಯ ಬಂಕಾಪುರದ ಮಂಜುನಾಥ ನಗರದ ನಿವಾಸಿ 45 ವರ್ಷದ ಬಿಷ್ಣಪ್ಪ ಅಶೋಕ ಗುಡಿಮನಿ ಅಲಿಯಾಸ್ ಮಾಸ್ತರ್ ಕಳೆದ ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ  ಬಳಲುತ್ತಿದ್ದರು. ಸ್ಥಳೀಯವಾಗಿ ಇವರಿಗೆ ನೀಡಲಾದ ಚಿಕಿತ್ಸೆ ಫಲಕಾರಿಯಾಗದ ಕಾರಣದಿಂದ ಅವರನ್ನು ದೊಡ್ಡ ಆಸ್ಪತ್ರೆಗೆ ದಾಖಲಿಸುವಂತೆ ಸ್ಥಳೀಯ ವೈದ್ಯರು ಸಲಹೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಅವರ ಕುಟುಂಬ ಸದಸ್ಯರು ಅವರನ್ನು ಧಾರವಾಡ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಅವರಿಗೆ ಹಲವು ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಪರಿಣಾಮಕಾರಿಯಾಗಲಿಲ್ಲ. ಈ ನಡುವೆ ಅವರ ಉಸಿರಾಟ ನಿಂತು ಹೋಯಿತು. ಅವರು ಉಸಿರಾಡದೆ ಇರುವ ಲಕ್ಷಣ ಕಂಡು ವೈದ್ಯರು ಇವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. 

ನಂತರ ಅವರ ಪತ್ನಿ ಶೀಲಾ, ಸಂಬಂಧಿಕರ ಜತೆಗೆ ಆಂಬ್ಯುಲೆನ್ಸ್ನಲ್ಲಿ ಮೃತದೇಹವನ್ನು ಬಂಕಾಪುರಕ್ಕೆ ತೆಗೆದುಕೊಂಡು ಹೋಗುತ್ತಿದ್ದರು. ಬಂಕಾಪುರ ಹತ್ತಿರ ಬರುತ್ತಿದ್ದಂತೆ ಪತ್ನಿ “ಡಾಬಾ ಬಂತು ನೋಡು ಊಟ ಮಾಡುತ್ತೀಯಾ?” ಎಂದು ಗೋಳಾಡಿ ಕಣ್ಣೀರಿಟ್ಟಾಗ, ಮೃತವ್ಯಕ್ತಿ ಉಸಿರಾಟ ಶುರುವಾಗಿದೆ. 

ಇದರಿಂದ ಗಾಬರಿಯಾದ ಪತ್ನಿ ಶೀಲಾ ಹಾಗೂ ಅವರ ಸಂಬಂಧಿಗಳು ಬಿಷ್ಣಪ್ಪನನ್ನು ಶಿಗ್ಗಾಂವಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯರು ತಪಾಸಣೆ ಮಾಡಿದಾಗ ವ್ಯಕ್ತಿ ಬದುಕಿರುವ ಸಂಗತಿ ದೃಢವಾಗಿದೆ. ಪ್ರಾಥಮಿಕ ಚಿಕಿತ್ಸೆ ನೀಡಿ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ವೈದ್ಯರು ಕಳುಹಿಸಿಕೊಟ್ಟಿದ್ದಾರೆ. ಸದ್ಯ ಕಿಮ್ಸ್ ನ ತುರ್ತು ಚಿಕಿತ್ಸಾ ಘಟಕದಲ್ಲಿ ಬಿಷ್ಣಪ್ಪ ಅವರಿಗೆ ಚಿಕಿತ್ಸೆ ಮುಂದುವರೆದಿದೆ.

Leave a Reply