ಬೆಂಗಳೂರು: ಬೆಂಗಳೂರಿನ ಕೋನದಾಸಪುರದಲ್ಲಿ ವಸತಿ ಯೋಜನೆಯ ಕಾಮಗಾರಿ ಅಕ್ರಮಕ್ಕೆ ಸಂಬಂಧಿಸಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ರನ್ನು ಸಚಿವ ಸಂಪುಟದಿಂದ ವಜಾ ಮಾಡಬೇಕು ಹಾಗೂ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಪ್ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ ಆಗ್ರಹಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಕೋನದಾಸಪುರದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ₹567 ಕೋಟಿ ವೆಚ್ಚದಲ್ಲಿ ಬಹುಮಹಡಿ ವಸತಿ ಸಮುಚ್ಚಯ ನಿರ್ಮಿಸಲು 2017ರ ಅಕ್ಟೋಬರ್ನಲ್ಲಿ ಟೆಂಡರ್ ಪ್ರಕ್ರಿಯೆ ಆರಂಭಿಸಿತ್ತು. ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಬಿಡಿಎ ಅಧ್ಯಕ್ಷರಾಗಿದ್ದ ಸೋಮಶೇಖರ್, ತಮ್ಮ ಪ್ರಭಾವ ಬಳಸಿ ಟೆಂಡರ್ ಅಂತಿಮಗೊಳಿಸಿ ಕಾರ್ಯಾದೇಶ ನೀಡಿದ್ದಾರೆ ಎಂದರು.
ನಂತರ ಯಡಿಯೂರಪ್ಪನವರ ಅಧಿಕಾರಾವಧಿಯಲ್ಲಿ ಕಾಮಗಾರಿಯನ್ನು ಮುಂದುವರಿಸಲು ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ಅವರಿಂದ ಇತರೆ ಆರೋಪಿಗಳಾದ ಎಸ್.ಟಿ. ಸೋಮಶೇಖರ್, ಬಿ.ಎಸ್.ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಸೇರಿದಂತೆ ಒಟ್ಟು ಒಂಬತ್ತು ಜನ ₹29.5 ಕೋಟಿ ಲಂಚ ಪಡೆದಿರುವ ಪ್ರಕರಣದಲ್ಲಿ ಎಫ್ಐಆರ್ ದಾಖಲಾಗಿದೆ ಎಂದರು.
ಯಡಿಯೂರಪ್ಪನವರ ಸಂಬಂಧಿಕರು ಏಳು ನಕಲಿ ಕಂಪನಿಗಳನ್ನು ಬಳಸಿಕೊಂಡು ಹಣ ವರ್ಗಾವಣೆ ಮಾಡಿ ಲಂಚ ಪಡೆದಿದ್ದಾರೆ. ಈ ಸಂಬಂಧ ಲೋಕಾಯುಕ್ತ ನ್ಯಾಯಾಲಯದಲ್ಲಿ ಸಾಕ್ಷಿಸಹಿತ ದೂರು ದಾಖಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರು ಸಚಿವ ಸೋಮಶೇಖರ್ರವರನ್ನು ಸಚಿವ ಸ್ಥಾನದಿಂದ ವಜಾ ಮಾಡಿ, ಲೋಕಾಯುಕ್ತ ಪೊಲೀಸರು ನಿಷ್ಪಕ್ಷಪಾತ ತನಿಖೆ ಮಾಡಲು ಅನುವು ಮಾಡಿಕೊಡಬೇಕು. ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಮಾತ್ರ ಸತ್ಯಾಂಶ ಹೊರಬರಲಿದೆ ಎಂದರು.
ಆಪ್ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು ಮಾತನಾಡಿ, ಸಚಿವ ಸೋಮಶೇಖರ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದರೂ ಅವರನ್ನು ಇನ್ನೂ ಸಂಪುಟದಿಂದ ವಜಾ ಮಾಡಲು ಮುಂದಾಗದಿರುವುದು ಆಘಾತಕಾರಿ ಬೆಳವಣಿಗೆ. ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟ ಜನಪ್ರತಿನಿಧಿಗಳು ಹಾಗೂ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದೆ. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಅಧಿಕಾರದಲ್ಲಿ ಇರುವವರೆಗೂ ಜನರ ತೆರಿಗೆ ಹಣವು ಭ್ರಷ್ಟರ ಪಾಲಾಗುತ್ತಿರುತ್ತದೆ ಎಂದು ಕಿಡಿಕಾರಿದರು.
ಪಕ್ಷದ ಮುಖಂಡರಾದ ವಿಜಯ್ ಶರ್ಮ, ಸಂಚಿತ್ ಸವ್ಹಾನಿ, ಬಿ.ಟಿ.ನಾಗಣ್ಣ, ಜಗದೀಶ್ ವಿ ಸದಂ, ದರ್ಶನ್ ಜೈನ್, ಸುರೇಶ್ ರಾಥೋಡ್, ಜಗದೀಶ್ ಚಂದ್ರ, ಕುಶಲಸ್ವಾಮಿ, ಉಷಾ ಮೋಹನ್, ಸುಹಾಸಿನಿ ಫಣಿರಾಜ್, ಡಾ. ಸತೀಶ್, ಶಶಿಕುಮಾರ್ ಆರಾಧ್ಯ, ಶ್ರೀಕಾಂತ್, ಗುರುಮೂರ್ತಿ, ಸುಮನ್ ಪ್ರಶಾಂತ್ ಮತ್ತಿತರ ಮುಖಂಡರು, ಯಶವಂತಪುರ ಕ್ಷೇತ್ರದ ನಾಯಕತು, ಹಾಗೂ ಹಲವು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.



