ಹಾವೇರಿ: ನಿಂತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಟೆಂಪೋ ಟ್ರಾವೆಲ್ಲರ್ (ಟಿಟಿ) ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 7 ಮಹಿಳೆಯರು ಸೇರಿ 13 ಜನ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಇಂದು ಮುಂಜಾನೆ ನಡೆದಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಟಿಟಿ ವಾಹನದಲ್ಲಿದ್ದ 7 ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ.
ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ಪರಶುರಾಮ್ (45), ಭಾಗ್ಯ (40), ನಾಗೇಶ (50), ವಿಶಾಲಾಕ್ಷಿ (40), ಅರ್ಪಿತಾ (18), ಸುಭದ್ರಾ ಬಾಯಿ (65), ಪುಣ್ಯ (50), ಮಂಜುಳಾಬಾಯಿ, ಚಾಲಕ ಆದರ್ಶ್ (23), ಮಾನಸ (24), ರೂಪಾ (40), ಮಂಜುಳಾ (50) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ನಾಲ್ವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಚಿಂತಾಜನಕವಾಗಿದೆ. ಮೃತ ನಾಗೇಶ್ ಎಮ್ಮೆಹಟ್ಟಿ ಗ್ರಾಮದ ಕೃಷಿಕರಾಗಿದ್ದರೆ, ಅವರ ಪತ್ನಿ ವಿಶಾಲಾಕ್ಷಿ ಆಶಾ ಕಾರ್ಯಕರ್ತೆಯಾಗಿದ್ದರು, ನಾಗೇಶ್ ಮತ್ತು ವಿಶಾಲಕ್ಷಿ ದಂಪತಿ ಪುತ್ರ ಆದರ್ಶ್ ಹೊಸ ಸೆಕೆಂಡ್ ಹ್ಯಾಂಡ್ ಟಿಟಿ ವಾಹನ ಖರೀದಿಸಿದ್ದರು.
ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ಹೋಗಿದ್ದ ಕುಟುಂಬದವರು ಸೇರಿ 15 ಮಂದಿ ಕಳೆದ ಜೂ. 24 ರಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಶಿವಮೊಗ್ಗದಿಂದ ಹೊರಟು, ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನ ತಲುಪಿದ್ದಾರೆ. ಅಲ್ಲಿ ವಾಹನ ಪೂಜೆ ಮಾಡಿಸಿ, ಬಳಿಕ ತುಳಜಾಭವಾನಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ನಂತರ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿದ್ದಾರೆ. ಅಲ್ಲಿಂದ ಬೆಳಗಾವಿ ಜಿಲ್ಲೆಯ ಸವದತ್ತಿಗೆ ಆಗಮಿಸಿ, ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುವಾಗ ಅಪಘಾತ ಸಂಭವಿಸಿ ಬಲಿಯಾಗಿದ್ದಾರೆ.
ಅಪಘಾತ ಸಂಭವಿಸಿದ ಸೆಕೆಂಡ್ ಹ್ಯಾಂಡ್ ಟೆಂಪೋ ಟ್ರಾವೆಲರ್( ಟಿಟಿ) ವಾಹನವನ್ನು 15 ದಿನಗಳ ಹಿಂದೆಯಷ್ಟೇ ಖರೀದಿಸಲಾಗಿತ್ತು. ದೇವರ ದರ್ಶನಕ್ಕೆ ಕುಟುಂಬ ಸಮೇತ ತೆರಳಿದ್ದ ಚಾಲಕ ಆದರ್ಶ, ಪೂಜೆಯ ಬಳಿಕ ಅದರ ಫೋಟೋಗಳನ್ನು ತಮ್ಮ ಸ್ಟೇಟಸ್ನಲ್ಲಿ ಹಾಕಿಕೊಂಡಿದ್ದರು. ರಸ್ತೆ ಬದಿ ನಿಲ್ಲಿಸಿದ್ದ ಲಾರಿಯನ್ನು ಮುಂಜಾನೆ ಮಂಜು ಕವಿದಿದ್ದರಿಂದ ಲಾರಿ ಕಾಣಿಸದೇ ಟಿಟಿ ಚಾಲಕ ಆದರ್ಶ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಅಪಘಾತದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿ, ಅದರಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿದ್ದು, ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಮೃತದೇಹಗಳನ್ನು ಹೊರ ತೆಗೆದಿದ್ದಾರೆ.
ಈ ಬಗ್ಗೆ ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಅಂಶಿಕುಮಾರ್ ಪ್ರತಿಕ್ರಿಯೆ ನೀಡಿದ್ದು, ಟಿಟಿ ವಾಹನದಲ್ಲಿದ್ದ ಒಟ್ಟು 15 ಮಂದಿ ಸವದತ್ತಿ ರೇಣುಕಾ ಯಲ್ಲಮ್ಮ ದರ್ಶನ ಪಡೆದು ಮರಳಿ ಊರಿಗೆ ಹೋಗುತ್ತಿರುವಾಗ ಅಪಘಾತ ಸಂಭವಿಸಿದೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದ್ದು, ಮಹಿಳೆಯರು, ಎರಡು ಪುಟ್ಟ ಕಂದಮ್ಮಗಳು, ಇಬ್ಬರು ಗಂಡು ಮಕ್ಕಳು, ಡ್ರೈವರ್ ಮೃತಪಟ್ಟಿದ್ದಾರೆ. ಮೃತ ದೇಹಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಯ ಶವಗಾರಕ್ಕೆ ರಾವಾನೆ ಮಾಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬ್ಯಾಡಗಿ ಠಾಣಾ ಪೊಲೀಸರು ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದಿದ್ದಾರೆ.




