ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು: ಲಕ್ಷ್ಮೀ ಹೆಬ್ಬಾಳಕರ್

2 years ago

ತುಮಕೂರು: ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಮಹಿಳೆಯರಿಗೆ ಯಾವುದೇ ರೀತಿಯಲ್ಲೂ ಅನ್ಯಾಯವಾಗದಂತೆ ಕ್ರಮವಹಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚಿಸಿದರು. 

ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೌಟುಂಬಿಕ ದೌರ್ಜನ್ಯ ತಡೆಕಾಯ್ದೆಯಡಿ ಮಹಿಳೆಯರಿಗೆ ಅನ್ಯಾಯವಾಗದಂತೆ ಕಾರ್ಯ ನಿರ್ವಹಿಸಲು ಸೂಚಿಸಿದರು. 

ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರಗತಿ ಕಾರ್ಯಕ್ರಮಗಳ ಮಾಹಿತಿ ಪಡೆದ ಅವರು, ಪ್ರಮುಖವಾಗಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ, ಜಿಲ್ಲಾ ಹಾಗೂ ತಾಲ್ಲೂಕು ಶಿಶುಪಾಲನಾ ಕೇಂದ್ರಗಳು, ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಲಭ್ಯಗಳು ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. 

ತುಮಕೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸೂಕ್ತ ಜಾಗ ನೀಡಿದರೆ ನಗರದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ವಸತಿ ನಿಲಯ ಸ್ಥಾಪಿಸಲಾಗುವುದು. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. 

ಗೃಹಲಕ್ಷ್ಮಿ ಯೋಜನೆ ಕುರಿತಂತೆ ರೀಲ್ಸ್ ಮಾಡುವ ಮಹಿಳೆಯರಿಗೆ ಪ್ರೋತ್ಸಾಹ  ನೀಡಬೇಕು. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಆಗಿರುವ ಪ್ರಯೋಜನ ಪ್ರತಿಯೊಬ್ಬರಿಗೂ ತಿಳಿಯಬೇಕು. ರೀಲ್ಸ್ ಮಾಡುವ ಮಹಿಳೆಯರಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು (ಸಿಡಿಪಿಒ) ಪ್ರೋತ್ಸಾಹ ನೀಡಬೇಕು ಎಂದರು.

ತುಮಕೂರು ಜಿಲ್ಲೆಯಲ್ಲಿ 234 ಅಂಗನವಾಡಿ ಕೇಂದ್ರಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲಾಗುವುದು. ತುಮಕೂರು ನಗರದಲ್ಲಿ ಸಿಎ ಸೈಟ್ ಸಿಕ್ಕರೆ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲಾಖೆ ವತಿಯಿಂದ ನಡೆಸಲಾಗುತ್ತಿರುವ ಸಹಾಯವಾಣಿ ಕೇಂದ್ರಕ್ಕೆ ಖುದ್ದು ಸಚಿವರೇ ಫೋನ್ ಮಾಡಿ ಮಾತನಾಡಿದರು. ಸಹಾಯವಾಣಿ ಸಿಬ್ಬಂದಿಯೊಂದಿಗೆ ಅಪರಿಚಿತರಂತೆ ಮಾತನಾಡಿದ ಸಚಿವರು, ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 

Leave a Reply