17 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ: ಮಧು ಬಂಗಾರಪ್ಪ

8 months ago

ಚಿತ್ರದುರ್ಗ: ರಾಜ್ಯದಲ್ಲಿ ಒಳಮೀಸಲಾತಿ ಜಾರಿಯಾದ ತಕ್ಷಣವೇ ಶಾಲಾ ಶಿಕ್ಷಣ ಇಲಾಖೆಗೆ 17 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮವಹಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಹಿರಿಯೂರು ತಾಲ್ಲೂಕಿನ ತಾಳವಟ್ಟಿ ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ ಹಾಗೂ ನೂತನ ಶಾಲಾ ಕೊಠಡಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ 17 ಸಾವಿರ ಶಿಕ್ಷಕ ನೇಮಕಕ್ಕೆ ಸಂಬಂಧಿಸಿದಂತೆ ಸರ್ಕಾರ ಈಗಾಗಲೇ ಅನುಮೋದನೆ ನೀಡಿದ್ದು, ಈ ಬಾರಿಯ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಹೆಚ್ಚಿನ ಕಾಲಾವಧಿಯನ್ನು ತೆಗೆದುಕೊಳ್ಳದೇ ಕೇವಲ 3 ರಿಂದ 4 ತಿಂಗಳೊಳಗೆ  ನೇಮಕಾತಿ ಪ್ರಕ್ರಿಯೆ ನಡೆಸಿ, ಶಾಲೆಗಳಿಗೆ ಶಿಕ್ಷಕರನ್ನು ನಿಯೋಜನೆ ಮಾಡಲಾಗುವುದು ಎಂದರು.

ರಾಜ್ಯ ಶಿಕ್ಷಣ ನೀತಿ (ಎಸ್‍ಇಪಿ) ಕರಡು ವರದಿ ಸಲ್ಲಿಸಲಾಗಿದ್ದು, ಅದರಲ್ಲಿರುವ ನ್ಯೂನತೆಗಳನ್ನು ಪರಿಶೀಲನೆ ನಡೆಸಲು ಉಪ ಸಮಿತಿ ರಚನೆ ಮಾಡಿ, ನಂತರ ಅಂತಿಮವಾಗಿ ಅನುಷ್ಠಾನ ಮಾಡಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಒಪ್ಪುವುದಿಲ್ಲ ಎಂದರು.

ರಾಜ್ಯದಲ್ಲಿ ಪ್ರಸ್ತುತ 307 ಕರ್ನಾಟಕ ಪಬ್ಲಿಕ್ ಶಾಲೆಗಳು (ಕೆಪಿಎಸ್) ಕಾರ್ಯನಿರ್ವಹಿಸುತ್ತಿದ್ದು, ಈ ವರ್ಷವೇ  ರಾಜ್ಯ ಸರ್ಕಾರ ವತಿಯಿಂದ 500 ಕೆಪಿಎಸ್ ಶಾಲೆಗಳನ್ನು 15 ದಿನದೊಳಗಾಗಿ ಘೋಷಣೆ ಮಾಡಲಾಗುವುದು ಎಂದರು.

ಇದರ ಜೊತೆಗೆ ಹೈದರಬಾದ್ ಕರ್ನಾಟಕದಲ್ಲಿ ಅಕ್ಷರ ಅವಿಷ್ಕಾರ ವತಿಯಿಂದ 100 ಕೆಪಿಎಸ್ ಶಾಲೆಗಳು ಸೇರಿದಂತೆ ಒಟ್ಟು 600 ಕೆಪಿಎಸ್ ಶಾಲೆಗಳು ಕಾರ್ಯಾರಂಭ ಮಾಡಲಿದೆ. ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳು ಉತ್ತಮ ವಾತಾವರಣದಲ್ಲಿ ವ್ಯಾಸಂಗ ಮಾಡಬಹುದಾಗಿದ್ದು, ಖಾಸಗಿ ಶಾಲೆಗಳಿಗಿಂತ ಉತ್ತಮವಾದ ಗುಣಮಟ್ಟದ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ ದೊರೆಯಲಿದೆ ಎಂದರು.

Leave a Reply