ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

1 year ago

ಬೆಂಗಳೂರು: ತಮ್ಮ ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದರು ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿಯವರನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಬಂಧಿತರಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಇಂದೂ ಕೂಡ ಜಾಮೀನು ಸಿಗಲಿಲ್ಲ.

ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ತೂಗುದೀಪ ಶ್ರೀನಿವಾಸ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸಿ ಎಂದು ಹೈಕೋರ್ಟ್, ಬಳ್ಳಾರಿ ಜೈಲು ಅಧಿಕಾರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಸಲ್ಲಿಸಿರುವ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ವಿಶ್ವಜಿತ್‌ ಶೆಟ್ಟಿ ವಿಚಾರಣೆ ನಡೆಸಿದರು. ದರ್ಶನ್‌ ಪರ ವಿಡಿಯೊ ಕಾನ್ಫರೆನ್ಸ್ ಮುಖಾಂತರ ವಾದ ಮಂಡಿಸಿದ ಹಿರಿಯ ವಕೀಲ ಸಿ.ವಿ.ನಾಗೇಶ್‌, ತಮ್ಮ ಕಕ್ಷಿದಾರರ “ದರ್ಶನ್‌ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದಾರೆ. ಅವರಿಗೆ ಬಳ್ಳಾರಿಯ ವಿಜಯನಗರ ವೈದ್ಯಕೀಯ ಸಂಸ್ಥೆಯಲ್ಲಿ (ವಿಮ್ಸ್‌) ಸೋಮವಾರವಷ್ಟೇ (ಅ.21) ಎಂಆರ್‌ಐ ಸ್ಕ್ಯಾನ್‌ ಮಾಡಿಸಲಾಗಿದೆ. ವೈದ್ಯರು ಶಸ್ತ್ರಚಿಕಿತ್ಸೆ ಅಗತ್ಯವೆಂದು ತಿಳಿಸಿದ್ದಾರೆ. ಹೀಗಾಗಿ, ವೈದ್ಯಕೀಯ ಕಾರಣಕ್ಕೆ ಜಾಮೀನು ನೀಡಬೇಕು” ಎಂದು ಮನವಿ ಮಾಡಿದರು.

ವಾದ ಆಲಿಸಿದ ನ್ಯಾಯಮೂರ್ತಿಗಳು, “ದರ್ಶನ್‌ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ ಸಲ್ಲಿಸಿ” ಎಂದು ಬಳ್ಳಾರಿಯ ಕೇಂದ್ರ ಕಾರಾಗೃಹದ ಅಧಿಕಾರಿಗೆ ನಿರ್ದೇಶಿಸಿದರು. ಜೊತೆಗೆ, ಆಕ್ಷೇಪಣೆ ಸಲ್ಲಿಸುವಂತೆ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ಅವರಿಗೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದರು.

Leave a Reply