ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ನಂತರ ರಾಜ್ಯಾಧ್ಯಕ್ಷ ಯಾರೆಂದು ನಿರ್ಧಾರ

1 year ago

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ವೇದಿಕೆ ಸಿದ್ಧಗೊಳ್ಳುತ್ತಿದ್ದು, ಏಪ್ರಿಲ್ ತಿಂಗಳಲ್ಲಿ ಬಿಜೆಪಿ ಸಾರಥಿ ಯಾರು? ಎನ್ನುವುದು ಸ್ಪಷ್ಟವಾಗಲಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಚುನಾವಣೆಯ ಜೊತೆಗೆ ರಾಜ್ಯದ ಅಧ್ಯಕ್ಷರ ನೇಮಕ ಕುರಿತು ಪ್ರಕಟಣೆ ಹೊರ ಬೀಳಲಿದೆ. ಇದರ ಜೊತೆಗೆ ರಾಜ್ಯ ಘಟಕಕ್ಕೆ ಪ್ರಚಾರ ಸಮಿತಿಯ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತದೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಏಪ್ರಿಲ್ ಮೊದಲ ವಾರದಲ್ಲಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಇದಾದ ಬಳಿಕ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಥವಾ ಆವಿರೋಧ ಆಯ್ಕೆ ನಡೆಯುವ ಸಾಧ್ಯತೆ ಇದೆ.

ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಲ್ಲಿ ಅನಗತ್ಯ ಗೊಂದಲ ಉಂಟಾಗಲಿದೆ ಎಂಬ  ವರದಿಗಳು ಹೈಕಮಾಂಡ್ ಅಂಗಳವನ್ನು ತಲುಪಿವೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ರಾಜ್ಯ ಘಟಕದ ಎಲ್ಲಾ ಬಣಗಳ ನಾಯಕರೊಂದಿಗೆ ಸಂಘ ಪರಿವಾರದ ನಾಯಕರ ಮೂಲಕ ಸಂಧಾನ ನಡೆಸಿದ್ದು ರಾಜಿ ಸೂತ್ರ ಸಿದ್ಧಪಡಿಸಿದೆ. ಈ ರಾಜಿ ಸೂತ್ರಕ್ಕೆ ಬಹುತೇಕ ಎಲ್ಲ ಬಣಗಳು ಸಮ್ಮತಿ ವ್ಯಕ್ತಪಡಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷರ ಆಯ್ಕೆ ಅವಿರೋಧವಾಗಿ ನಡೆಯಲಿದೆ. ಹಾಲಿ ಅಧ್ಯಕ್ಷ ವಿಜಯೇಂದ್ರ ಅವರೇ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರೆಯಲಿದ್ದು ಪ್ರಚಾರ ಸಮಿತಿಯ ನೇತೃತ್ವವನ್ನು ಹಿರಿಯ ನಾಯಕ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರಿಗೆ ನೀಡಲಿದೆ ಎಂದು ತಿಳಿದುಬಂದಿದೆ.

ಜೊತೆಗೆ ರಾಜ್ಯದ ಎಲ್ಲಾ ಮೋರ್ಚಾಗಳ ಅಧ್ಯಕ್ಷರ ಬದಲಾವಣೆ ನಡೆಯಲಿದೆ. ನಂತರದಲ್ಲಿ ಪಕ್ಷದ ಪದಾಧಿಕಾರಿಗಳು ಮತ್ತು ಕೋರ್ ಕಮಿಟಿ ಸಂಪೂರ್ಣವಾಗಿ ಪುನರ್ ರಚನೆ ಮಾಡಲು ಹೈಕಮಾಂಡ್ ತೀರ್ಮಾನಿಸಿದ್ದು, ಇದಕ್ಕೆ ಎಲ್ಲರೂ ಸಹಮತ ವ್ಯಕ್ತಪಡಿಸಿರುವುದಾಗಿ ಗೊತ್ತಾಗಿದೆ.

ವಿಜಯೇಂದ್ರ ನಾಯಕತ್ವದ ವಿರುದ್ಧ ಸಮರ ಸಾರಿರುವ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತಿದ್ದು, ಮತ್ತೊಬ್ಬ ನಾಯಕ ಅರವಿಂದ ಲಿಂಬಾವಳಿ ಅವರಿಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡುವ ಸಾಧ್ಯತೆ ಇದೆ.

ಜನಾರ್ದನ ರೆಡ್ಡಿ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿ ಪಕ್ಷಕ್ಕೆ ಸೇರ್ಪಡೆಯಾಗಿರುವ ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ. ಹೀಗಾಗಿ ಅವರನ್ನು ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಅನುಕೂಲವಾಗಲಿದೆ ಎಂಬ ವರದಿಗಳ ಆಧಾರದಲ್ಲಿ ಹೈಕಮಾಂಡ್ ಈ ತೀರ್ಮಾನ ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Leave a Reply