ಮತ್ತೊಮ್ಮೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ ಕಾಡುತ್ತಿದೆ: ಆರ್.ಅಶೋಕ್

2 years ago

ಬೆಂಗಳೂರು: 2018ರಲ್ಲಿ ಸೋಲಿನ ಭಯದಿಂದ ತಮ್ಮ ಸ್ವಕ್ಷೇತ್ರ ವರುಣಾದಿಂದ ಬಾದಾಮಿಗೆ ಪಲಾಯನ ಮಾಡಿದ್ದ ಸಿಎಂ @siddaramaiah ನವರಿಗೆ ಈಗ ಮತ್ತೊಮ್ಮೆ ಸ್ವಕ್ಷೇತ್ರದ ಜನರಿಂದ ತಿರಸ್ಕಾರದ ಭಯ ಕಾಡುತ್ತಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ.

ವರುಣಾ ಕ್ಷೇತ್ರದಲ್ಲಿ ಚಾಮರಾಜನಗರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ನನಗಿಂತ ಹೆಚ್ಚಿನ ಮತದ ಅಂತರದಿಂದ ಗೆಲ್ಲಿಸಿ ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯೆ ನೀಡಿರುವ ಆರ್.ಅಶೋಕ್, ಗ್ಯಾರೆಂಟಿಗಳು ಜನರಿಗೆ ತೃಪ್ತಿ ತಂದಿಲ್ಲ, ಬಿಟ್ಟಿ ಭಾಗ್ಯಗಳು ತಮ್ಮ ಕೈ ಹಿಡಿಯುವುದಿಲ್ಲ ಎಂದು ಗ್ಯಾರೆಂಟಿ ಆಗುತ್ತಿದ್ದಂತೆ ಸಿದ್ದರಾಮಯ್ಯನವರು ವರುಣಾದಲ್ಲಿ ಹೆಚ್ಚಿನ ಲೀಡ್ ಕೊಟ್ಟು ಕುರ್ಚಿ ಉಳಿಸುವಂತೆ ಜನರ ಬಳಿ ಅಂಗಲಾಚುತ್ತಿದ್ದಾರೆ ಎಂದಿದ್ದಾರೆ.

ತವರು ಕ್ಷೇತ್ರ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲಾದರೆ ಕುರ್ಚಿ ಬಿಟ್ಟು ಇಳಿಯಬೇಕಾತ್ತದೆ ಎಂದು ಸಿಕ್ಕಸಿಕ್ಕ ಸಣ್ಣ ಪುಟ್ಟ ವಿಪಕ್ಷಗಳ ಮುಖಂಡರನ್ನೆಲ್ಲ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಂಡು ಕನಿಷ್ಠ ಪಕ್ಷ ಠೇವಣಿ ಉಳಿಸಿಕೊಳ್ಳಬೇಕು, ಸೋಲಿನ ಅಂತರವಾದರೂ ಕಡಿಮೆ ಮಾಡಿಕೊಳ್ಳಬೇಕು ಅಂತ ಸಿದ್ದರಾಮಯ್ಯನವರು ಮೂರು ದಿನ ಮೈಸೂರಿನಲ್ಲೇ ಠಿಕಾಣಿ ಹೂಡಿದ್ದಾರೆ ಎಂದಿದ್ದಾರೆ.

ಸಿಎಂ @siddaramaiah ನವರೇ? ನಿನ್ನೆ ವರುಣಾ ತಮ್ಮ ಬುರುಡೆ ಭಾಷಣ ಕೇಳಲು ಆಸಕ್ತಿ ಇಲ್ಲದೆ ಜಾಗ ಖಾಲಿ ಮಾಡಿದ ಜನರ ನಡೆ ನೋಡಿದ ಮೇಲೆ ಜನರ ಮನಸ್ಸಿನಲ್ಲಿ ಕೆಲವು ಪ್ರಶ್ನೆಗಳು ಮೂಡುತ್ತಿವೆ ಎಂದಿದ್ದಾರೆ.

1) ನಿಮ್ಮ ಗ್ಯಾರೆಂಟಿಗಳು ಜನರನ್ನು ತಲುಪಿದೆ ಎನ್ನುವ ವಿಶ್ವಾಸವಿಲ್ಲವೇ?
2) ಮೈಸೂರಿನಲ್ಲಿ ಹೀನಾಯವಾಗಿ ಸೋಲಿಸಿ ನಿಮ್ಮನ್ನ ಕುರ್ಚಿಯಿಂದ ಇಳಿಸಬೇಕು ಎನ್ನುವ ಹುನ್ನಾರದಿಂದ ಸ್ವಪಕ್ಷದವರೇ ಒಳೇಟು ನೀಡುವ ಭಯ ಕಾಡುತ್ತಿದೆಯೇ?
3) ವರುಣಾದಲ್ಲಿ 60,000 ಲೀಡ್ ಬರದಿದ್ದರೆ ಕುರ್ಚಿಯಿಂದ ಇಳಿಯಬೇಕು ಎಂದು ಹೈಕಮಾಂಡ್ ಈಗಾಗಲೇ ಫರ್ಮಾನು ಹೊರಡಿಸಿದೆಯೇ? ಕರ್ನಾಟಕದ ಜನತೆ ತಮ್ಮ ಉತ್ತರಕ್ಕಾಗಿ ಕಾಯುತ್ತಿದ್ದಾರೆ ಎಂದಿದ್ದಾರೆ.

Leave a Reply