ವಿಜಯೇಂದ್ರ ಅವರಿಂದ ವಿವರಣೆ ಪಡೆದ ಅಮಿತ್ ಶಾ

2 years ago

ಬೆಂಗಳೂರು: ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ಪಕ್ಷದ ಹಲವು ಹಿರಿಯ ನಾಯಕರು ಬಹಿರಂಗ ಬಂಡಾಯ ಸಾರಿದ ಬೆನ್ನಲ್ಲೇ ಗೃಹಸಚಿವ  ಅಮಿತ್ ಶಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ದೆಹಲಿಗೆ ಕರೆಸಿಕೊಂಡು ಮಾತುಕತೆ ನಡೆಸಿದರು.

ರಾಜ್ಯ ಬಿಜೆಪಿಯಲ್ಲಿ ಏಕ ಪಕ್ಷಿಯ ತೀರ್ಮಾನಗಳು ನಡೆಯುತ್ತಿವೆ. ಯಾವುದೇ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಗೊಂದಲದಲ್ಲಿ ಬೀಳುವಂತೆ ಮಾಡಲಾಗುತ್ತಿದೆ ಎಂದು ಕೆಲವು ನಾಯಕರು ಆರೋಪಿಸಿದ್ದಾರೆ.

ಪ್ರಮುಖವಾಗಿ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಹಿರಂಗವಾಗಿಯೇ ಅಸಮಾಧಾನ ತೋಡಿಕೊಂಡಿರುವುದು ಪಕ್ಷದ ನಾಯಕತ್ವಕ್ಕೆ ನುಂಗಲಾರದ ತುತ್ತಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ರೂಪಿಸುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಬೆಂಗಳೂರು ಮೈಸೂರು ಪಾದಯಾತ್ರೆ ತೀರ್ಮಾನ ಅನಗತ್ಯ ಎಂದು ಈ ನಾಯಕರು ಈಗಾಗಲೇ ಹೈಕಮಾಂಡ್ ಗಮನಕ್ಕೆ ತಂದು ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು ರೈತನ ಸಮುದಾಯ ಕೃಷಿ ಚಟುವಟಿಕೆಯಲ್ಲಿ ತೊಡಗಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರಿ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಇಂತಹ ಸಮಯದಲ್ಲಿ ಜವಾಬ್ದಾರಿಯುತ ವಿಪಕ್ಷವಾಗಿ ಜನರ ಸಂಕಷ್ಟಕ್ಕೆ ಧಾವಿಸಬೇಕು. ಆದರೆ ಪಕ್ಕದ ಅಧ್ಯಕ್ಷ ವಿಜಯೇಂದ್ರ ಇದನ್ನು ಬದಿಗೊತ್ತಿ ಏಕಪಕ್ಷೀಯವಾಗಿ ಪಾದಯಾತ್ರೆ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಕೆಲವು ನಾಯಕರು ಹೈಕಮಾಂಡ್ ಬಳಿ ದೂರು ಸಲ್ಲಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಜನ ವಿರೋಧಿ ನೀತಿಗಳ ವಿರುದ್ಧ ಹೋರಾಟ ರೂಪಿಸುವ ಯಾವುದೇ ಸಭೆಗೂ ಕೇಂದ್ರ ಸಚಿವರು ಮತ್ತು ಸಂಸದರನ್ನು ಆಹ್ವಾನಿಸಿಲ್ಲ. ಜೊತೆಗೆ ರಾಜ್ಯದ ಹಿರಿಯ ನಾಯಕರನ್ನು ಯಾವುದೇ ವಿಷಯಕ್ಕೂ ಪರಿಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಎಲ್ಲವನ್ನು ವಿಜಯೇಂದ್ರ ಮತ್ತು ಅವರ ಆಪ್ತ ವಲಯವೇ ನಿರ್ಧರಿಸುತ್ತಿದೆ. ಇದರಿಂದ ಪಕ್ಷ ಸಂಘಟನೆಗೆ ದೊಡ್ಡ ಹೊಡೆತ ಬೀಳುತ್ತಿದೆ ಎಂಬ ವಿಷಯವನ್ನು ಈ ನಾಯಕರು ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ.

ಹಳೆ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿಗಿಂತಲೂ ಜೆಡಿಎಸ್ ಸಂಘಟನಾತ್ಮಕವಾಗಿ ಹೆಚ್ಚು ಬಲ ಹೊಂದಿದೆ. ಈ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಿದರೆ ದೊಡ್ಡ ಯಶಸ್ಸು ಸಿಗುತ್ತಿತ್ತು. ಆದರೆ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಪರಿಣಾಮ ಜೆಡಿಎಸ್ ಪಾದಯಾತ್ರೆಯಲ್ಲಿ ಪಾಲ್ಗೊಳ್ಳದಿರಲು ತೀರ್ಮಾನಿಸಿದೆ. ಇದರಿಂದ ಮೈತ್ರಿಕೂಟದಲ್ಲಿ ದೊಡ್ಡ ಬಿರುಕು ಉಂಟಾದಂತಾಗಿದೆ ಎಂದು ವಿವರಿಸಿರುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ್, ವಿಧಾನ ಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರನ್ನು ಯಾವುದೇ ವಿಷಯಗಳಿಗೂ ಸಂಪರ್ಕಿಸುತ್ತಿಲ್ಲ. ಸಭೆಗಳಿಗೆ ಅವರನ್ನು ನೆಪ ಮಾತ್ರಕ್ಕೆ ಆಹ್ವಾನಿಸಿ, ಇವರೇ ತೀರ್ಮಾನ ತೆಗೆದುಕೊಳ್ಳುತ್ತಿದ್ದಾರೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಪಕ್ಷದಲ್ಲಿ ದೊಡ್ಡ ಮಟ್ಟದ ಬಿರುಕು ಉಂಟಾಗಲಿದೆ ಎಂದು ವಿವರಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಜಯೇಂದ್ರ ಅವರನ್ನು ದೆಹಲಿಗೆ ಕರೆಸಿಕೊಂಡು ಅಮಿತ್ ಶಾ ಸಂಪೂರ್ಣ ವಿದ್ಯಮಾನಗಳ ಕುರಿತು ವರದಿ ಪಡೆದಿದ್ದಾರೆ ಎನ್ನಲಾಗಿದೆ.

ಮಿತ್ರ ಪಕ್ಷದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಇಲ್ಲದೆ ಹೋದಲ್ಲಿ ಕಾಂಗ್ರೆಸ್ ವಿರುದ್ಧ ಪ್ರಬಲ ಹೋರಾಟ ರೂಪಿಸಲು ಸಾಧ್ಯವಾಗುವುದಿಲ್ಲ ಎಂದು ಇದೇ ವೇಳೆ ಅಮಿತ್ ಶಾ ಕಿವಿಮಾತು ಹೇಳಿರುವುದಾಗಿ ಗೊತ್ತಾಗಿದೆ.

Leave a Reply