ಸಾವು ಬದುಕಿನ ನಡುವೆ ಹೋರಾಟ ನಡೆಸಿರುವ ಅಮೃತಧಾರೆ ನಟಿ ಶೃತಿ

9 months ago

ಬೆಂಗಳೂರು: ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾದ ‘ಅಮೃತಧಾರೆ’ಯ ನಟಿ ಮಂಜುಳಾ ಅಲಿಯಾಸ್ ಶ್ರುತಿ ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಚಾಕು ಇರಿತದಿಂದ ಗಾಯಗೊಂಡಿರುವ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಟಿ ಶ್ರುತಿ ಅವರ ಪತಿಯೇ ಅವರಿಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗುತ್ತಿದೆ. ಮೊದಲು ಶ್ರುತಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಹೊಡೆದ ಅಮರೇಶ್ ಆ ನಂತರ ಚಾಕುವಿನಿಂದ ಶ್ರುತಿಯ ಹೊಟ್ಟೆ, ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಶ್ರುತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೃತ್ಯ ನಡೆಸಿದ ಪತಿ ಅಮರೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಮಂಜುಳಾ ಮತ್ತು ಅಮರೇಶ್ 20 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕುಟುಂಬ ಸಮೇತ ನಟಿ ಮಂಜುಳಾ, ಕೆಲವು ವರ್ಷಗಳಿಂದ ಹನುಮಂತನಗರದಲ್ಲಿ ಮನೆ ಲೀಸ್ ಗೆ ಪಡೆದು ವಾಸವಿದ್ದರು. ನಟಿ ಶ್ರುತಿಯ ನಡವಳಿಕೆ ಪತಿಗೆ ಇಷ್ಟವಾಗುತ್ತಿರಲಿಲ್ಲ. ಇಬ್ಬರ ನಡುವೆ ಹೊಂದಾಣಿಕೆ ಕೊರತೆ ಇದ್ದು,ದಂಪತಿಯ ನಡುವೆ ಆಗಾಗ ಜಗಳವಾಗುತ್ತಿತ್ತು.

ಕಳೆದ ಎಪ್ರಿಲ್ ನಿಂದ‌  ಅಣ್ಣನ ಮನೆಯಲ್ಲಿದ್ದ ಶೃತಿ ಪತಿಯಿಂದ ದೂರವಾಗಿದ್ದರು. ಇಬ್ಬರ ನಡುವೆ ಮನೆ ಲೀಸ್ ಹಣಕ್ಕಾಗಿ ಜಗಳ ನಡೆದಿತ್ತು. ಈ ಸಂಬಂಧ ಶ್ರುತಿ ಹನುಮಂತ ನಗರ ಠಾಣೆಗೆ ದೂರು ಸಹ ನೀಡಿದ್ದರು. ಕೆಲ ದಿನಗಳ ಹಿಂದೆ ರಾಜಿ ಸಂಧಾನ ಮಾಡಿಕೊಂಡು ಪತಿ ಜೊತೆಗೆ ಒಂದಾಗಿದ್ದರು.

ಕಳೆದ ಜು.4 ರಂದು ಮಕ್ಕಳು ಕಾಲೇಜಿಗೆ ಹೋದ ನಂತರ, ಗಂಡ ಅಮರೇಶ್‌ ಹೆಂಡತಿ ಮೇಲೆ ಹಲ್ಲೆ ನಡೆಸಿದ್ದಾನೆ. ಮುಖಕ್ಕೆ ಪೆಪ್ಪರ್ ಸ್ಪೇ ಹೊಡೆದು, ತಲೆ ಕೂದಲು ಹಿಡಿದು ಗೋಡೆಗೆ ಗುದ್ದಿಸಿ, ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಈ ಸಂಬಂಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸಾರ ಮತ್ತು ಹಣಕಾಸು ವಿಚಾರಕ್ಕೆ ಕೊಲೆ ಯತ್ನ ಮಾಡಿರುವುದಾಗಿ ಶ್ರುತಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿ ಆರೋಪಿ ಅಮರೇಶ್‌ನನ್ನು ಬಂಧಿಸಲಾಗಿದೆ.

Leave a Reply