ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶ

7 months ago

ಕೊಪ್ಪಳ: ಬಡವರ ಹೊಟ್ಟೆ ಸೇರಬೇಕಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಕದ್ದ ಖದೀಮರು ಇದನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಲಾರಿಯ ಸಮೇತ ಅಕ್ಕಿಯನ್ನು ಮುನಿರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಅಕ್ರಮದಲ್ಲಿ ಖದೀಮರ ಜೊತೆಗೆ ಆಹಾರ ಇಲಾಖೆ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ನಿಗಮ ಅಧಿಕಾರಿಗಳು ಶಾಮೀಲಾಗಿರುವ ಸಾಧ್ಯತೆ ಇದೆ.ಕಳೆದ 16 ರಂದು ಮುಂಜಾನೆ ಕೊಪ್ಪಳ ತಾಲೂಕಿನ ಕೂಕನಪಳ್ಳಿ ಗ್ರಾಮದ ಬಳಿ ಗಸ್ತಿನಲ್ಲಿದ್ದ ಪೊಲೀಸರು ಅನುಮಾನಾಸ್ಪದವಾಗಿ ಬರುತ್ತಿದ್ದ ಲಾರಿಯನ್ನು ತಡೆಯುತ್ತಿದ್ದಂತೆ ಚಾಲಕ ಲಾರಿಯನ್ನು ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಅದನ್ನು ಪರಿಶೀಲಿಸಿದಾಗ ಅದರಲ್ಲಿ ಅನ್ನಭಾಗ್ಯ ಯೋಜನೆಯಡಿ ವಿತರಿಸುವ ಅಕ್ಕಿ ಇರುವುದು ಪತ್ತೆಯಾಗಿದೆ.

ಸದ್ಯ ಲಾರಿಯಲ್ಲಿರುವ ಅಕ್ಕಿ ಎಲ್ಲಿಗೆ ಸಾಗಾಟವಾಗುತ್ತಿತ್ತು ಎಂಬುದನ್ನು ಮುನಿರಾಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನು ಆಹಾರ ಇಲಾಖೆಯ ಅಧಿಕಾರಿಗಳು ಲಾರಿಯಲ್ಲಿರುವ ಅಕ್ಕಿಯ ಲೆಕ್ಕ ಕೊಡುವಾಗ 8 ಟನ್ ಎಂದು ತೋರಿಸಿ ಪೊಲೀಸ್ ಕಣ್ತಪ್ಪಿಸಲು ಮುಂದಾಗಿದ್ದಾರೆ.

16 ಚಕ್ರದ ವಾಹನದ ಸಾಮರ್ಥ್ಯ 35 ಟನ್, ಪೂರ್ತಿ ಲೋಡೆಡ್ ಲಾರಿಯಲ್ಲಿ 8 ಟನ್ ಮಾತ್ರ ಇದೆ ಎಂದು ಪೊಲೀಸ್ ಇಲಾಖೆಗೆ ಆಹಾರ ನಿರೀಕ್ಷಕ ರವಿಚಂದ್ರ ಲೆಕ್ಕ ಕೊಟ್ಟಿದ್ದಾರೆ.

ಸೆಪ್ಟಂಬರ್ 16 ರಂದು ವಾಹನ ಸಿಕ್ಕರೂ ಮೂರು ದಿನಗಳು ಕಳೆದರೂ, ಈ ಅಕ್ಕಿಯನ್ನ ಜಪ್ತಿ ಮಾಡಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಲು ಆಹಾರ ಇಲಾಖೆ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ.

ವಶಕ್ಕೆ ಪಡೆದ ಲಾರಿಯಲ್ಲಿದ್ದ ಅಕ್ಕಿ ಪ್ರಮಾಣ ಎಷ್ಟು, ಲಾರಿ ಚಾಲಕ, ಮಾಲೀಕ ಯಾರು? ಎಲ್ಲಿಗೆ ಸಾಗಾಟ ಮಾಡಲಾಗ್ತಿತ್ತು? ಎಲ್ಲವನ್ನೂ ವರದಿ ಮಾಡಿ ಪೊಲೀಸ್ ಇಲಾಖೆಗೆ ದೂರು ನೀಡಿ, ಎಫ್‌ಐಆರ್ ದಾಖಲಿಸಬೇಕಾಗಿರೋದು ಆಹಾರ ಇಲಾಖೆ ಅಧಿಕಾರಿಗಳ ಕೆಲಸವಾಗಿದೆ.

ಆದರೆ ಕಳೆದ ಮೂರು ದಿನಗಳಿಂದ ಆಹಾರ ಇಲಾಖೆ ಅಧಿಕಾರಿಗಳು, ಈ ಯಾವುದೇ ಕೆಲಸ ಮಾಡಿಲ್ಲ. ಲಾರಿಯಲ್ಲಿರುವ ಅಕ್ಕಿಯ ಪ್ರಮಾಣ ಕೂಡಾ ಗೊತ್ತಿಲ್ಲ. ಕೇವಲ 8 ಟನ್ ಅಕ್ಕಿ ಎಂದು ನಾಮಕಾವಸ್ಥೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Leave a Reply