ಎರಡು ದಶಕಗಳ ಕನ್ನಡಿಗರ ಹೋರಾಟಕ್ಕೆ ಮತ್ತೊಂದು ಮಹತ್ವದ ಜಯ: ಟಿ.ಎ.ನಾರಾಯಣಗೌಡ

2 hours ago

ಬ್ಯಾಂಕ್ ಆಫ್ ಬರೋಡದ ಸ್ಥಳೀಯ ನೇಮಕಾತಿ ಕ್ರಮಕ್ಕೆ ಕರವೇ ಸ್ವಾಗತ

ಬೆಂಗಳೂರು: ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಬ್ಯಾಂಕ್ ಶಾಖೆಗಳಲ್ಲಿ ಸ್ಥಳೀಯ ಭಾಷೆ ಬಲ್ಲ ಸ್ಥಳೀಯ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಬ್ಯಾಂಕ್ ಆಫ್ ಬರೋಡ ಕೈಗೊಂಡಿರುವ ಮಹತ್ವದ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ ಎಂದು ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.

ಬ್ಯಾಂಕ್ ಆಫ್ ಬರೋಡ 2,482 ಹುದ್ದೆಗಳ ನೇಮಕಾತಿಯಲ್ಲಿ ಆಯಾ ರಾಜ್ಯದ ಸ್ಥಳೀಯ ಭಾಷೆಯನ್ನು ಬಲ್ಲ ಅಭ್ಯರ್ಥಿಗಳಿಗೆ ಆದ್ಯತೆ ನೀಡಲು ಮುಂದಾಗಿರುವುದು ಸ್ವಾಗತಾರ್ಹ ಬೆಳವಣಿಗೆ. ದೇಶದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸ್ಥಳೀಯ ಭಾಷೆಗಳನ್ನು ಗೌರವಿಸುವ ಮತ್ತು ಸ್ಥಳೀಯ ಯುವಜನರ ಹಕ್ಕನ್ನು ಕೊಡಮಾಡುವ ಮಹತ್ವದ ಹೆಜ್ಜೆಯಾಗಿದೆ ಎಂದಿದ್ದಾರೆ.

ಕರ್ನಾಟಕ ರಕ್ಷಣಾ ವೇದಿಕೆ ಕಳೆದ ಎರಡು ದಶಕಗಳಿಂದ ಬ್ಯಾಂಕುಗಳಲ್ಲಿ ಕನ್ನಡಿಗರ ಹಕ್ಕಿಗಾಗಿ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದೆ. ಕರ್ನಾಟಕದಲ್ಲಿರುವ ಬ್ಯಾಂಕ್ ಶಾಖೆಗಳಲ್ಲಿ ಗ್ರಾಹಕರೊಂದಿಗೆ ಸಿಬ್ಬಂದಿ ಕನ್ನಡದಲ್ಲೇ ವ್ಯವಹರಿಸಬೇಕು, ಬ್ಯಾಂಕ್ಗಳ ಅರ್ಜಿ ನಮೂನೆಗಳು, ಚಲನ್ಗಳು ಹಾಗೂ ಗ್ರಾಹಕ ಸೇವೆಗಳು ಕನ್ನಡದಲ್ಲಿರಬೇಕು, ಕರ್ನಾಟಕದ ಬ್ಯಾಂಕ್ ಹುದ್ದೆಗಳಿಗೆ ಕನ್ನಡಿಗರಿಗೆ ಆದ್ಯತೆ ನೀಡಬೇಕು ಹಾಗೂ ಬ್ಯಾಂಕ್ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡಕ್ಕೆ ಅವಕಾಶ ಕಲ್ಪಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರವೇ ನಿರಂತರ ಹೋರಾಟ ನಡೆಸಿದೆ ಎಂದು ನೆನಪಿಸಿದ್ದಾರೆ.

2017ರಲ್ಲಿ ಬ್ಯಾಂಕ್ಗಳಲ್ಲಿ ಕನ್ನಡ ಮತ್ತು ಕನ್ನಡಿಗರ ಉದ್ಯೋಗದ ಪ್ರಶ್ನೆಯನ್ನು ಕರವೇ ರಾಜ್ಯಮಟ್ಟದಲ್ಲಿ ಗಂಭೀರವಾಗಿ ಕೈಗೆತ್ತಿಕೊಂಡಿತ್ತು. ಬ್ಯಾಂಕ್ಗಳ ನೇಮಕಾತಿಯಲ್ಲಿ ಹೊರರಾಜ್ಯದ ಅಭ್ಯರ್ಥಿಗಳಿಗೆ ಅವಕಾಶ ನೀಡಿ ಸ್ಥಳೀಯ ಕನ್ನಡಿಗರನ್ನು ವಂಚಿಸಲಾಗುತ್ತಿದೆ ಎಂಬುದನ್ನು ಪ್ರಶ್ನಿಸಿ ಹೋರಾಟ ನಡೆಸಲಾಯಿತು. ಬ್ಯಾಂಕ್ ಸಿಬ್ಬಂದಿ ಕನ್ನಡದಲ್ಲಿ ಗ್ರಾಹಕರೊಂದಿಗೆ ವ್ಯವಹರಿಸಬೇಕು, ಕನ್ನಡ ಬಾರದ ಸಿಬ್ಬಂದಿ ಕನ್ನಡ ಕಲಿಯಬೇಕು ಹಾಗೂ ಬ್ಯಾಂಕ್ ಸೇವೆಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಕರವೇ ಆಗ್ರಹಿಸಿತ್ತು ಎಂದಿದ್ದಾರೆ.

ಅದೇ ಸಂದರ್ಭದಲ್ಲಿ ಗ್ರಾಮೀಣ ಬ್ಯಾಂಕ್ಗಳ ನೇಮಕಾತಿ ಪರೀಕ್ಷೆಗಳ ವಿರುದ್ಧವೂ ಕರವೇ ತೀವ್ರ ಹೋರಾಟ ನಡೆಸಿತ್ತು. ಸ್ಥಳೀಯ ರಾಜ್ಯದಲ್ಲಿ ಕಾರ್ಯನಿರ್ವಹಿಸುವ ಬ್ಯಾಂಕ್ಗಳ ಉದ್ಯೋಗಗಳಿಗೆ ಸ್ಥಳೀಯರಿಗೇ ಹೆಚ್ಚಿನ ಅವಕಾಶ ದೊರೆಯಬೇಕು ಮತ್ತು ಪರೀಕ್ಷೆಗಳಲ್ಲಿ ಸ್ಥಳೀಯ ಭಾಷೆಗೆ ಸ್ಥಾನ ಕಲ್ಪಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಕರ್ನಾಟಕ ರಕ್ಷಣಾ ವೇದಿಕೆ ಪರೀಕ್ಷಾ ಕೇಂದ್ರಗಳ ಎದುರು ಪ್ರತಿಭಟನೆ, ಮುತ್ತಿಗೆ ಹಾಗೂ ಮನವಿ ಕಾರ್ಯಕ್ರಮಗಳನ್ನು ನಡೆಸಿತ್ತು ಎಂದಿದ್ದಾರೆ.

2021ರ ಸೆಪ್ಟೆಂಬರ್ 14ರಂದು ಹಿಂದಿ ಹೇರಿಕೆ ವಿರೋಧಿಸಿ ಕರವೇ ರಾಜ್ಯಾದ್ಯಂತ ನಡೆಸಿದ ಹೋರಾಟದ ಸಂದರ್ಭದಲ್ಲಿ ರಾಜ್ಯದ ಮೂರು ಸಾವಿರಕ್ಕೂ ಅಧಿಕ ಬ್ಯಾಂಕ್ಗಳ ಮುಂದೆ ಪ್ರತಿಭಟನೆ ನಡೆಸಿ, ಬ್ಯಾಂಕ್ ವ್ಯವಹಾರಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಲಾಗಿತ್ತು. ಬ್ಯಾಂಕ್ ಅಧಿಕಾರಿಗಳಿಗೆ ಕನ್ನಡದಲ್ಲೇ ವ್ಯವಹರಿಸುವಂತೆ ಮನವಿ ಸಲ್ಲಿಸಲಾಗಿತ್ತು. 2025ರಲ್ಲಿ ಕರವೇ ಕೈಗೊಂಡ ಮಹಾಸಂಘರ್ಷ ಯಾತ್ರೆಯಲ್ಲಿಯೂ ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸುವ ಬೇಡಿಕೆಯನ್ನು ಪ್ರಮುಖವಾಗಿ ಮುಂದಿಡಲಾಗಿತ್ತು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸ್ಥಳೀಯರಿಗೆ ಹೆಚ್ಚಿನ ಉದ್ಯೋಗಾವಕಾಶ, ಬ್ಯಾಂಕ್ಗಳಲ್ಲಿ ಕನ್ನಡದ ಕಡ್ಡಾಯ ಬಳಕೆ ಹಾಗೂ ಕನ್ನಡ ಬಾರದ ಸಿಬ್ಬಂದಿಗೆ ಕನ್ನಡ ಕಲಿಸುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಲಾಗಿತ್ತು ಎಂದಿದ್ದಾರೆ.

ಇದೇ ಹೋರಾಟದ ಮುಂದುವರಿದ ಭಾಗವಾಗಿ 2025ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಬ್ಯಾಂಕಿಂಗ್ ಕ್ಷೇತ್ರದ ಅಧಿಕಾರಿಗಳೊಂದಿಗೆ ಕರವೇ ಚರ್ಚೆ ನಡೆಸಿ, ಕರ್ನಾಟಕದ ಬ್ಯಾಂಕ್ ಶಾಖೆಗಳಲ್ಲಿ ಕನ್ನಡದ ಬಳಕೆ, ಕನ್ನಡಿಗರಿಗೆ ಉದ್ಯೋಗ ಮತ್ತು ಸ್ಥಳೀಯ ಭಾಷಾ ಜ್ಞಾನ ಹೊಂದಿರುವ ಸಿಬ್ಬಂದಿಯ ನೇಮಕಾತಿಯ ಅಗತ್ಯವನ್ನು ಒತ್ತಿಹೇಳಿತ್ತು ಎಂದಿದ್ದಾರೆ.

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಗಳು ಕರ್ನಾಟಕದ ಜನರೊಂದಿಗೆ ಕನ್ನಡದಲ್ಲಿ ವ್ಯವಹರಿಸಬೇಕು ಮತ್ತು ಕರ್ನಾಟಕದ ಯುವಜನರಿಗೆ ಉದ್ಯೋಗದಲ್ಲಿ ನ್ಯಾಯಯುತ ಅವಕಾಶ ದೊರೆಯಬೇಕು ಎಂಬುದು ನಮ್ಮ ನಿಲುವು. ಇದೇ ತತ್ವ ದೇಶದ ಪ್ರತಿಯೊಂದು ರಾಜ್ಯಕ್ಕೂ ಅನ್ವಯಿಸಬೇಕು. ಮಹಾರಾಷ್ಟ್ರದಲ್ಲಿ ಮರಾಠಿಗರಿಗೆ, ತಮಿಳುನಾಡಿನಲ್ಲಿ ತಮಿಳರಿಗೆ, ಕೇರಳದಲ್ಲಿ ಮಲಯಾಳಿಗಳಿಗೆ, ಕರ್ನಾಟಕದಲ್ಲಿ ಕನ್ನಡಿಗರಿಗೆ—ಆಯಾ ರಾಜ್ಯದ ಸ್ಥಳೀಯರಿಗೆ ಅವರ ರಾಜ್ಯದಲ್ಲಿರುವ ಉದ್ಯೋಗಗಳಲ್ಲಿ ಆದ್ಯತೆ ದೊರೆಯುವುದು ಸಹಜ ನ್ಯಾಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದ್ದರಿಂದ ಬ್ಯಾಂಕ್ ಆಫ್ ಬರೋಡ ಕೈಗೊಂಡಿರುವ ಈ ಕ್ರಮವನ್ನು ಕರ್ನಾಟಕ ರಕ್ಷಣಾ ವೇದಿಕೆ ಅಭಿನಂದಿಸುತ್ತದೆ. ಆದರೆ ಈ ಬದಲಾವಣೆ ಕೇವಲ ಬ್ಯಾಂಕ್ ಆಫ್ ಬರೋಡಕ್ಕೆ ಸೀಮಿತವಾಗಬಾರದು. ದೇಶದ ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳು, ಗ್ರಾಮೀಣ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಹಾಗೂ ಖಾಸಗಿ ಬ್ಯಾಂಕುಗಳು ಇದೇ ಮಾದರಿಯನ್ನು ಅಳವಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕದ ಬ್ಯಾಂಕ್ ಶಾಖೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಕನ್ನಡದ ಜ್ಞಾನ ಕಡ್ಡಾಯವಾಗಬೇಕು. ಗ್ರಾಹಕರೊಂದಿಗೆ ಕನ್ನಡದಲ್ಲೇ ವ್ಯವಹರಿಸುವ ವ್ಯವಸ್ಥೆ ಬರಬೇಕು. ಬ್ಯಾಂಕ್ಗಳ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಸೇರಿದಂತೆ ಆಯಾ ರಾಜ್ಯಗಳ ಸ್ಥಳೀಯ ಭಾಷೆಗಳಿಗೆ ಸಮಾನ ಅವಕಾಶ ನೀಡಬೇಕು. ಕರ್ನಾಟಕದ ಬ್ಯಾಂಕ್ ಹುದ್ದೆಗಳಿಗೆ ಕರ್ನಾಟಕದ ಸ್ಥಳೀಯ ಅಭ್ಯರ್ಥಿಗಳಿಗೆ ನ್ಯಾಯಯುತ ಆದ್ಯತೆ ದೊರೆಯಬೇಕು.

ಭಾರತ ಸರ್ಕಾರವೂ ಈ ವಿಚಾರದಲ್ಲಿ ಸ್ಪಷ್ಟವಾದ ರಾಷ್ಟ್ರೀಯ ನೀತಿಯನ್ನು ರೂಪಿಸಬೇಕು. ಭಾರತೀಯ ರಿಸರ್ವ್ ಬ್ಯಾಂಕ್ (RBI) ಹಾಗೂ ಸಂಬಂಧಪಟ್ಟ ಬ್ಯಾಂಕಿಂಗ್ ನಿಯಂತ್ರಣ ಸಂಸ್ಥೆಗಳ ಮೂಲಕ ದೇಶದ ಬ್ಯಾಂಕುಗಳಿಗೆ ಆಯಾ ರಾಜ್ಯಗಳ ಶಾಖೆಗಳಲ್ಲಿ ಸ್ಥಳೀಯ ಭಾಷೆ ಬಲ್ಲ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ ಕಡ್ಡಾಯ ಮಾರ್ಗಸೂಚಿಗಳನ್ನು ಜಾರಿಗೊಳಿಸಬೇಕು ಎಂದಿದ್ದಾರೆ.

ಬ್ಯಾಂಕ್ ಆಫ್ ಬರೋಡ ಆರಂಭಿಸಿರುವ ಈ ಬದಲಾವಣೆ ದೇಶದ ಎಲ್ಲಾ ಬ್ಯಾಂಕುಗಳಿಗೂ ಮಾದರಿಯಾಗಲಿ. ಬ್ಯಾಂಕ್ಗಳಲ್ಲಿ ಕನ್ನಡ, ಬ್ಯಾಂಕ್ ಉದ್ಯೋಗಗಳಲ್ಲಿ ಕನ್ನಡಿಗ—ಈ ಹೋರಾಟವನ್ನು ಕರ್ನಾಟಕ ರಕ್ಷಣಾ ವೇದಿಕೆ ಮುಂದೆಯೂ ಇನ್ನಷ್ಟು ಬಲವಾಗಿ ಮುಂದುವರಿಸಲಿದೆ ಎಂದಿದ್ದಾರೆ.

Leave a Reply